ಕಾಂಗ್ರೆಸ್ ಹಿರಿಯ ಮುಖಂಡ ಗುಡ್ ಬೈ : ಬಿಜೆಪಿಗೆ ಸೇರ್ಪಡೆ
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಕಾಂಗ್ರೆಸ್ ಗೆ ಭಾರೀ ಹಿನ್ನಡೆಯಾಗಿದೆ. ರಾಜ್ಯದ ಕಾಂಗ್ರೆಸ್ ಹಿರಿಯ ನಾಯಕರೋರ್ವರು ಪಕ್ಷ ತೊರೆದಿದ್ದಾರೆ.
ಹೈದ್ರಾಬಾದ್ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪಕ್ಷಾಂತರವೂ ಕೂಡ ಹೆಚ್ಚುತ್ತಿದೆ. ವಿವಿಧ ಪಕ್ಷಗಳಲ್ಲಿ ನಾಯಕರು ಮತ್ತೊಂದು ಪಕ್ಷಕ್ಕೆ ಹಾರುತ್ತಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಎಐಸಿಸಿ ಕಾರ್ಯದರ್ಶಿ ಪೊಂಗುಲೇಟಿ ಸುಧಾಕರ್ ರೆಡ್ಡಿ ರಾಜೀನಾಮೆ ನೀಡಿದ್ದು, ಶೀಘ್ರವೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
ಈ ನಿಟ್ಟಿನಲ್ಲಿ ಭಾನುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಸುಧಾಕರ್ ರೆಡ್ಡಿ ಚರ್ಚೆ ನಡೆಸಿದ್ದಾರೆ.
ರೆಡ್ಡಿ ಕಾಂಗ್ರೆಸ್ ಸದಸ್ಯತ್ವದ ಅವಧಿ ಈಗಾಗಲೇ ಮುಕ್ತಾಯವಾಗಿದ್ದು, ರಾಜ್ಯದಲ್ಲಿ ಬಿಜೆಪಿ ಸೇರ್ಪಡೆಯಾಗುತ್ತಿರುವ 2ನೇ ಕಾಂಗ್ರೆಸ್ ಪ್ರಮುಖ ನಾಯಕರಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಶಾಸಕ ಡಿ.ಕೆ. ಅರುಣಾ ಬಿಜೆಪಿ ಸೇರಿದ್ದರು.
ಈಗಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದು, ಈ ವೇಳೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಳ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಕಳೆದ 40 ವರ್ಷಗಳಿಂದ ನಾನು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡಿದ್ದು, ಇತ್ತೀಚಿನ ದಿನಗಳಲ್ಲಿ ಅನೇಕ ಬದಲಾವಣೆಗಳಾಗಿವೆ. ಚುನಾವಣೆ ಸಂದರ್ಭದಲ್ಲಿ ಹಣವು ಪ್ರಮುಖ ಪಾತ್ರ ವಹಿಸುತ್ತದೆ. ಟಿಕೆಟ್ ಗಾಗಿ ಕೋಟಿ ಕೋಟಿ ಹಣದ ಹೊಳೆಯೇ ಹರಿಯುತ್ತಿದೆ. ಇದರಿಂದ ಭ್ರಷ್ಟಾಚಾರ ಇರುವ ಜಾಗ ತೊರೆಯುತ್ತಿರುವುದಾಗಿ ಸುಧಾಕರ್ ರೆಡ್ಡಿ ಹೇಳಿದ್ದಾರೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...