ಪಾಕಿಸ್ತಾನದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಬೇಕೇ: ಮಮತಾಗೆ ಶಾ ಪ್ರಶ್ನೆ
ಪಶ್ಚಿಮ ಬಂಗಾಳದಲ್ಲಿ ಜೈ ಶ್ರೀರಾಮ ಎಂದು ಹೇಳಲು ಸಾಧ್ಯವಾಗುವುದಿಲ್ಲ ಎಂಬುದು ಅಚ್ಚರಿಯ ಸಂಗತಿ| ಪಾಕಿಸ್ತಾನದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಬೇಕೇ: ಮಮತಾಗೆ ಅಮಿತ್ ಶಾ ಪ್ರಶ್ನೆ
ಘಟಾಲ್[ಮೇ.08]: ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಿಡಿಕಾರಿದ್ದಾರೆ. ಭಾರತದಲ್ಲಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗದೇ, ಪಾಕಿಸ್ತಾನದಲ್ಲಿ ಕೂಗಬೇಕೇ ಎಂದು ಅವರು ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಪ್ರಶ್ನೆ ಎಸೆದಿದ್ದಾರೆ.
ಶ್ರೀರಾಮ ಎಂಬ ಪದ ಭಾರತೀಯ ಸಂಸ್ಕೃತಿಯಲ್ಲೇ ಬೇರೂರಿದೆ. ಇಂಥದ್ದರಲ್ಲಿ ಪಶ್ಚಿಮ ಬಂಗಾಳದಲ್ಲಿ ಜೈ ಶ್ರೀರಾಮ ಎಂದು ಹೇಳಲು ಸಾಧ್ಯವಾಗುವುದಿಲ್ಲ ಎಂಬುದು ಅಚ್ಚರಿಯ ಸಂಗತಿ. ಹಾಗಿದ್ದರೇ ಪಾಕಿಸ್ತಾನದಲ್ಲಿ ಜೈ ಶ್ರೀರಾಮ ಎಂದು ಘೋಷಣೆ ಕೂಗಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಇತ್ತೀಚೆಗೆ ಮಮತಾ ಬ್ಯಾನರ್ಜಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಇಬ್ಬರು ಯುವಕರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು.
ಸೋಮವಾರ ಪ್ರಧಾನಿ ಮೋದಿ ಝಾರ್ಗ್ರಾಮ್ನಲ್ಲಿ ನಡೆದ ರ್ಯಾಲಿಯಲ್ಲಿ ನಾನೂ ಜೈಶ್ರೀರಾಮ್ ಎನ್ನುತ್ತೇನೆ. ನನ್ನನ್ನೂ ಮಮತಾ ಬಂಧಿಸಲಿ ಎಂದು ಸವಾಲು ಹಾಕಿದ್ದರು.