ಅಡ್ವಾಣಿ ಹಾಗೂ ತಂದೆ ಇಬ್ಬರನ್ನೂ ಬಿಜೆಪಿ ಸರಿಯಾಗಿ ನಡೆಸಿಕೊಳ್ಳಲಿಲ್ಲ : ಶತ್ರುಘ್ನ ಪುತ್ರಿ
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಹಾಲಿ ಸಂಸದ ಶತ್ರುಘ್ನ ಸಿನ್ಹಾ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ. ಈ ಬಗ್ಗೆ ಪುತ್ರಿ ಸೋನಾಕ್ಷಿ ಪ್ರತಿಕ್ರಿಯಿಸಿ ತಂದೆ ಸಾಕಷ್ಟು ಹಿಂದೆಯೇ ಈ ನಿರ್ಧಾರ ತೆಗೆದುಕೊಳ್ಳಬೇಕಿತ್ತು ಎಂದು ಹೇಳಿದ್ದಾರೆ.
ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ವಿವಿಧ ಪಕ್ಷಗಳು ಚುನಾವಣೆಗೆ ಸಿದ್ಧತೆ ನಡೆಸುತ್ತಿವೆ. ಇದೇ ವೇಳೆ ಹಾಲಿ ಸಂಸದ ಶತ್ರುಘ್ನ ಸಿನ್ಹಾ ಪಕ್ಷ ತೊರೆಯಲು ಸಜ್ಜಾಗಿದ್ದಯ, ಈ ಬಗ್ಗೆ ಪುತ್ರಿ ಸೋನಾಕ್ಷಿ ತಂದೆಯ ನಿರ್ಧಾರ ಸರಿಯಾಗಿದೆ ಎಂದಿದ್ದಾರೆ.
ಬಿಜೆಪಿಯಲ್ಲಿ ಎಂದಿಗೂ ಕೂಡ ತಂದೆ ಶತ್ರುಘ್ನ ಸಿನ್ಹಾ ಹಾಗೂ ಹಿರಿಯ ನಾಯಕ ಅಡ್ವಾಣಿಗೆ ಸಿಗಬೇಕಾದ ಸ್ಥಾನಮಾನ ಸಿಗಲಿಲ್ಲ. ಅವರನ್ನು ಎಂದಿಗೂ ಸರಿಯಾಗಿ ನಡೆಸಿಕೊಳ್ಳಲಿಲ್ಲ. ಪಕ್ಷ ತೊರೆಯುವುದು ಅವರ ಉತ್ತಮ ನಿರ್ಧಾರ ಎಂದು ಸೋನಾಕ್ಷಿ ಹೇಳಿದ್ದಾರೆ.
ಆರಂಭದಿಂದಲೂ ಪಕ್ಷದಲ್ಲಿ ಅವರಿಗೆ ಸಲ್ಲಬೇಕಾದ ಸ್ಥಾನ ಸಿಗಲಿಲ್ಲ. ಇದೀಗ ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಸ್ವಲ್ಪ ತಡವಾಗಿಯೇ ಒಳ್ಳೆ ನಿರ್ಧಾರ ತೆಗೆದುಕೊಂಡಿದ್ದು, ಸಾಕಷ್ಟು ಹಿಂದೆಯೇ ಪಕ್ಷ ತೊರೆಯುವ ಅಗತ್ಯವಿತ್ತು ಎಂದಿದ್ದಾರೆ.
ಬಿಜೆಪಿಯಲ್ಲಿದ್ದುಕೊಂಡೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುತ್ತಿದ್ದ ಸಿನ್ಹಾ ಇದೀಗ ಲೋಕಸಭಾ ಚುನಾವಣೆ ಬೆನ್ನಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಶತ್ರುಘ್ನ ಸಿನ್ಹಾ ಅವರ ಕ್ಷೇತ್ರವಾದ ಪಾಟ್ನಾ ಸಾಹಿಬ್ ನಿಂದ ಬಿಜೆಪಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಕಣಕ್ಕೆ ಇಳಿಸಿದ್ದು, ಬಿಜೆಪಿ ಪಟ್ಟಿ ಪ್ರಕಟವಾದ ಮರುದಿನವೇ ತಮ್ಮ ನಿರ್ಧಾರ ಪ್ರಕಟಿಸಿದ್ದರು.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...