ಕಟೀಲ್ ಕರೆದ ಸಭೆಯಲ್ಲಿ ಬಿಎಸ್ವೈ ಆಪ್ತರ ಗೈರು!
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕರೆದ ಸಭೆಯಲ್ಲಿ ಯಡಿಯೂರಪ್ಪ ಆಪ್ತರು ಗೈರಾದ ಘಟನೆ ನಡೆದಿದೆ.
ಬೆಳಗಾವಿ [ಅ.03]: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆದ ಜಿಲ್ಲಾಮಟ್ಟದ ಬಿಜೆಪಿ ಕೋರ್ ಕಮಿತಿ ಸಭೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತಬಣದ ಶಾಸಕರು ಗೈರು ಹಾಜರಾಗಿದ್ದರು.
ಬೆಳಗಾವಿಯ ಸಂಪಿಗೆ ರಸ್ತೆಯಲ್ಲಿರುವ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ನಿವಾಸದ ಕಚೇರಿಯಲ್ಲಿ ಬುಧವಾರ ಜಿಲ್ಲಾ ಮಟ್ಟದ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಆ ಸಭೆಗೆ ಯಡಿಯೂರಪ್ಪ ಬಣದ ಶಾಸಕರಾದ ಉಮೇಶ ಕತ್ತಿ, ಆನಂದ ಮಾಮನಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೈರಾಗಿರುವುದು ಎದ್ದು ಕಾಣುತ್ತಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ, ನಾನು ಪಕ್ಷದ ರಾಜ್ಯಾಧ್ಯಕ್ಷ ಅಧ್ಯಕ್ಷರ ಅನುಮತಿ ಮೇರೆಗೆ ಸಭೆಗೆ ಗೈರಾಗಿದ್ದೇನೆ. ಸವದತ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ನೆರೆ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ್ದೇನೆ. ನಾನು ಉದ್ದೇಶಪೂರ್ವವಾಗಿ ಸಭೆಗೆ ಗೈರಾಗಿಲ್ಲ ಎಂದು ತಿಳಿಸಿದ್ದಾರೆ.