ಅಭದ್ರ ಎನ್ನುವವರಿಗೆ ಉಪ ಚುನಾವಣೆಯಲ್ಲಿ ತಕ್ಕ ಉತ್ತರ
ರಾಜ್ಯದಲ್ಲಿ ಮೈತ್ರಿ ಸರ್ಕಾರದ ಬಂಡವಾಳ ಏನಿದೆ ಎಂಬುದನ್ನು ಪರೀಕ್ಷೆ ಮಾಡುವ ಸಲುವಾಗಿ ಉಪ ಚುನಾವಣೆ ನಡೆಸಲಾಗುತ್ತಿದೆ ಎಂದು ಬಿಜೆಪಿ ಪಕ್ಷದ ಕೆಲ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಮಾತನಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಜ್ಯದ ಜನರು ನ.3ರಂದು ನಡೆಯುವ ಉಪ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ - ಸಿ.ಎಸ್. ಪುಟ್ಟರಾಜು
ನಾಗಮಂಗಲ[ಅ.23]: ರಾಜ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ಅಭದ್ರ ಎಂದು ಬೊಬ್ಬೇ ಹಾಕುವ ಮಂದಿಗೆ ನ.03ರಂದು ನಡೆಯುವ ಉಪ ಚುನಾವಣೆಯ ಫಲಿತಾಂಶ ತಿರುಗೇಟು ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಸೋಮವಾರ ಭವಿಷ್ಯ ನುಡಿದರು.
ಪಟ್ಟಣದ ಎಸ್ಎಲ್ಎನ್ ಸಮುದಾಯ ಭವನದ ಆವರಣದಲ್ಲಿ ಮಂಡ್ಯ ಲೋಕಸಭಾ ಉಪ ಚುನಾವಣೆಯ ಮೈತ್ರಿಅಭ್ಯರ್ಥಿಎಲ್.ಆರ್.ಶಿವರಾಮೇಗೌಡ ಪರ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಮೈತ್ರಿ ಸರ್ಕಾರದ ಬಂಡವಾಳ ಏನಿದೆ ಎಂಬುದನ್ನು ಪರೀಕ್ಷೆ ಮಾಡುವ ಸಲುವಾಗಿ ಉಪ ಚುನಾವಣೆ ನಡೆಸಲಾಗುತ್ತಿದೆ ಎಂದು ಬಿಜೆಪಿ ಪಕ್ಷದ ಕೆಲ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಮಾತನಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರತಿಯಾಗಿ ರಾಜ್ಯದ ಜನರು ನ.3ರಂದು ನಡೆಯುವ ಉಪ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಮೋದಿ ಸಾಧನೆ ಏನು?: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಆಗಿರುವ ಸಾಧನೆ ಏನು? ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಮೋದಿ ಜನರಿಗೆ ಕೊಟ್ಟ ಯಾವುದೇ ಭರವಸೆಗಳನ್ನು ಈವರೆಗೂ ಈಡೇರಿಸಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ರಾಷ್ಟ್ರದಲ್ಲಿ ಬಿಜೆಪಿ ಪಕ್ಷ ದಿವಾಳಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಕೇಂದ್ರ ಸರ್ಕಾರವನ್ನು ಕಿತ್ತೊಗೆಯಲು ಮಂಡ್ಯ ಲೋಕಸಭಾ ಉಪ ಚುನಾವಣೆಯೇ
ಸಾಕ್ಷಿಯಾಗಬೇಕಿದೆ ಎಂದರು.
ಜಾತ್ಯತೀತ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಈ ಉಪ ಚುನಾವಣೆಯನ್ನು ಎದುರಿಸಬೇಕೆಂಬ ತೀರ್ಮಾನ ಮಾಡಲಾಗಿದೆ. ಮೈತ್ರಿ ಪಕ್ಷದ ಅಭ್ಯರ್ಥಿಯನ್ನಾಗಿ ಶಿವರಾಮೆಗೌಡ ಅವರನ್ನು ಕಣಕ್ಕಿಳಿಸಲಾಗಿದೆ. ಕನಿಷ್ಠ 5 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ನಮ್ಮ ಅಭ್ಯರ್ಥಿ ಗೆಲುವು ಸಾಧಿಸುವ ವಾತಾವರಣವಿದೆ. ಇದರಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಮತದಾರರಿಗೆ ಹೆಚ್ಚು ಜವಾಬ್ದಾರಿಯಿದೆ ಎಂದರು.
ಬಿಜೆಪಿ ಜಿಲ್ಲೆಯಲ್ಲಿ ನಗಣ್ಯ: ಶಾಸಕ ಸುರೇಶ್ ಗೌಡ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ ನಮ್ಮ ಅಭ್ಯರ್ಥಿ ಗೆಲ್ಲಬೇಕೆಂಬುದೇ ನಮ್ಮ ಮುಖ್ಯ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನಾಯಕರ ಮನೆಗೂ ತೆರಳಿ ಮತಕೇಳಲು ನನಗೇನು ಮುಜುಗರವಿಲ್ಲ. ಜಿಲ್ಲೆಯಲ್ಲಿ ಸಚಿವರೂ ಸೇರಿದಂತೆ ಯಾವುದೇ ಶಾಸಕರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುತ್ತಿಲ್ಲ. ಆದರೆ ಕೈ ಪಕ್ಷದ ನಾಯಕರು ಯಾರದ್ದೋ ಮಾತನ್ನು ಕೇಳಿ ರಾಜಕೀಯ ದ್ವೇಷ ಸಾಧಿಸುವ ಸಲುವಾಗಿ ವಿನಾ ಕಾರಣ ಜಿಲ್ಲೆಯ ಶಾಸಕರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಶಾಸಕರಾದ ಡಾ.ಅನ್ನದಾನಿ, ಕೆ.ಸಿ. ನಾರಾಯಣ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಎನ್.ಅಪ್ಪಾಜಿಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ಮಾತನಾಡಿದರು. ಜಿಪಂ ಅಧ್ಯಕ್ಷರು ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.