ಚೆಕ್ ಬೌನ್ಸ್ ಪ್ರಕರಣದಲ್ಲಿ ಮಧ್ಯಂತರ ಪರಿಹಾರ
ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಚೆಕ್ ಪಡೆದ ವ್ಯಕ್ತಿಗೆ ಮಧ್ಯಂತರ ಪರಿಹಾರ ನೀಡುವ ಕುರಿತ ಕಾನೂನು ತಿದ್ದುಪಡಿಗೆ ಕೇಂದ್ರ ಸಂಪುಟ ಸಭೆ ಶುಕ್ರವಾರ ಅನುಮೋದನೆ ನೀಡಿದೆ.
ನವದೆಹಲಿ (ಡಿ.16): ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಚೆಕ್ ಪಡೆದ ವ್ಯಕ್ತಿಗೆ ಮಧ್ಯಂತರ ಪರಿಹಾರ ನೀಡುವ ಕುರಿತ ಕಾನೂನು ತಿದ್ದುಪಡಿಗೆ ಕೇಂದ್ರ ಸಂಪುಟ ಸಭೆ ಶುಕ್ರವಾರ ಅನುಮೋದನೆ ನೀಡಿದೆ. ಕೋರ್ಟ್ನಲ್ಲಿ ವಿಚಾರಣೆ ಮುಗಿಯುವವರೆಗೂ ಚೆಕ್’ಬೌನ್ಸ್ ಮಾಡಿದ ಆರೋಪಿ ದುರುದ್ದೇಶಕ್ಕಾಗಿ ಆ ಹಣವನ್ನು ತನ್ನ ಬಳಿಯೇ ಇಟ್ಟುಕೊಳ್ಳುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಎನ್ಐ ಆ್ಯಕ್ಟ್’ಗೆ ತಿದ್ದುಪಡಿ ತರಲು ನಿರ್ಧರಿಸಿದ್ದು, ಹಾಲಿ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಈ ಕಾಯ್ದೆಯ ಪ್ರಕಾರ ಬ್ಯಾಂಕಿನಲ್ಲಿ ಹಣ ಇಟ್ಟಿರದೇ ಚೆಕ್ ಬೌನ್ಸ್ ಮಾಡಿದ ಆರೋಪ ಎದುರಿಸುತ್ತಿರುವ ವ್ಯಕ್ತಿ ವಿಚಾರಣೆಯ ವೇಳೆ ಚೆಕ್ ಪಡೆದ ವ್ಯಕ್ತಿಗೆ ಮಧ್ಯಂತರ ಪರಿಹಾರವಾಗಿ ಒಂದಿಷ್ಟು ಹಣವನ್ನು ನೀಡಬೇಕು. ಒಂದು ವೇಳೆ ಪ್ರಕರಣ ಇತ್ಯರ್ಥಗೊಂಡು ಆತನದ್ದು ಯಾವುದೇ ತಪ್ಪಿಲ್ಲ ಎಂದು ಸಾಬೀತಾದರೆ, ಪರಿಹಾರ ಪಡೆದಾತ ಆ ಹಣವನ್ನು ಬಡ್ಡಿ ಸಮೇತ ಹಿಂದಿರುಗಿಸುವಂತೆ ಕೋರ್ಟ್ ಸೂಚಿಸಬಹುದಾಗಿದೆ. ವ್ಯಾಪಾರ ಮತ್ತು ವಾಣಿಜ್ಯ ವಹಿವಾಟಿಗೆ ಸಹಾಯ ಮಾಡುವ ಉದ್ದೇಶದಿಂದ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ.