ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ವಾರೆಂಟ್ ಜಾರಿ
ಮಾನನಷ್ಟ ಮೊಕದ್ದಮೆ ಪ್ರಕರಣಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಶನಿವಾರ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.
ಬೆಂಗಳೂರು, [ಫೆ.23]: ನಟ ಪ್ರಕಾಶ್ ರಾಜ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವು ಶನಿವಾರ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಟ್ವಿಟ್ಟರ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಇಂದು [ಶನಿವಾರ] ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣವನ್ನ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತು.
ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ
ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು [ಶನಿವಾರ] ಪ್ರತಾಪ್ ಸಿಂಹ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ವಿಚಾರಣೆಗೆ ಬಾರದ ಹಿನ್ನೆಲೆ ವಾರೆಂಟ್ ಜಾರಿಗೊಳಿಸಲಾಗಿದೆ.
ಪ್ರತಾಪ್ ಸಿಂಹರನ್ನು ಸೋಮವಾರ ಖುದ್ದು ಬಂಧಿಸಿ ಕರೆತರುವಂತೆ ಮೈಸೂರು ಕಮೀಷನರ್ ಮೂಲಕ ವಾರೆಂಟ್ ತಲುಪಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯದ ನ್ಯಾಯಾಧೀಶ ಬಿ.ವಿ. ಪಾಟೀಲ್ ಆದೇಶಿಸಿದ್ದಾರೆ.
ಇದೇ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸಮನ್ಸ್ ನೀಡಿದ್ದರೂ ಪ್ರತಾಪ್ ಸಿಂಹ ಒಮ್ಮೆಯೂ ಕೋರ್ಟ್ಗೆ ಹಾಜರಾಗಿರಲಿಲ್ಲ.