ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಬಿಸಿಲ ಬೇಗೆಯಿಂದ ಕರ್ನಾಟಕದ ಹಲವು ಪ್ರದೇಶಗಳು ತತ್ತರಿಸಿದ್ದು, ಸದ್ಯ ಕೆಲವೆಡೆ ಮಳೆ ಸುರಿಯುತ್ತಿದೆ. ಇದೀಗ ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು: ಗಾಳಿಯ ಒತ್ತಡ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಆಲಿಕಲ್ಲು ಮಳೆ ಮುಂದುವರೆದಿದೆ ಎಂದು ಕೆಎಸ್ಎನ್ಡಿಎಂಸಿ ತಿಳಿಸಿದೆ.
ಕಳೆದ ಮೂರು ನಾಲ್ಕು ದಿನಗಳಿಂದ ಗಾಳಿ ಒತ್ತಡ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಭಾನುವಾರವೂ ಮಳೆಯಾಗಿದ್ದು, ಸೋಮವಾರವೂ ಮಳೆ ಮುಂದುವರೆಯುವ ಸಾಧ್ಯತೆ ದಟ್ಟವಾಗಿದೆ. ಕೆಲವು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್ಎನ್ಡಿಎಂಸಿ ವಿಜ್ಞಾನಿ ಸುನೀಲ್ ಗವಾಸ್ಕರ್ ಮಾಹಿತಿ ನೀಡಿದ್ದಾರೆ.
ಇನ್ನು ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಿಸಿಗಾಳಿ ಪ್ರಭಾವ ಹೆಚ್ಚಾಗಲಿದೆ. ಸದ್ಯಕ್ಕೆ ಉಷ್ಣಾಂಶದಲ್ಲಿ ಇಳಿಕೆಯಾಗುವ ಲಕ್ಷಣ ಕಾಣುತ್ತಿಲ್ಲ. ಉಷ್ಣಾಂಶ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಗುಡುಗು ಸಹಿತ ಮಳೆಯಾದ ವರದಿಯಾಗಿದೆ ಎಂದು ತಿಳಿಸಿದ್ದಾರೆ.
ಭಾನುವಾರ ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ಹಾಸನ, ರಾಮನಗರ, ದಾವಣಗೆರೆ, ಶಿವಮೊಗ್ಗ, ಮಂಡ್ಯ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ರಾಯಚೂರು ಸೇರಿದಂತೆ ಹಲವಡೆ ಮಳೆಯಾಗಿದೆ ಎಂದು ಕೆಎಸ್ಎನ್ ಡಿಎಂಸಿ ಮಾಹಿತಿ ನೀಡಿದೆ.
ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.