ರವಿಶಂಕರ್ ಗುರೂಜಿ ಕಾರ್ಯಕ್ರಮಕ್ಕೆ ಅನುಮತಿ : ಎನ್’ಜಿಟಿ ತರಾಟೆ
ಕಳೆದ ವರ್ಷ ಯಮುನಾ ಬಯಲು ಪ್ರದೇಶದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆ 3 ದಿನಗಳ ವಿಶ್ವ ಸಾಂಸ್ಕೃತಿಕ ಉತ್ಸವ ಆಯೋಜಿಸಲು ಅನುಮತಿ ನೀಡಿದ್ದಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಮಂಡಳಿ ಕಾನೂನಿನ ಪ್ರಕಾರ ನಡೆದುಕೊಂಡಿಲ್ಲ ಎಂದು ಹೇಳಿದೆ.
ನವದೆಹಲಿ(ಡಿ.11): ಕಳೆದ ವರ್ಷ ಯಮುನಾ ಬಯಲು ಪ್ರದೇಶದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆ 3 ದಿನಗಳ ವಿಶ್ವ ಸಾಂಸ್ಕೃತಿಕ ಉತ್ಸವ ಆಯೋಜಿಸಲು ಅನುಮತಿ ನೀಡಿದ್ದಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಮಂಡಳಿ ಕಾನೂನಿನ ಪ್ರಕಾರ ನಡೆದುಕೊಂಡಿಲ್ಲ ಎಂದು ಹೇಳಿದೆ.
ಎನ್ಜಿಟಿ ಮುಖ್ಯ ನ್ಯಾಯಮೂರ್ತಿ, ನ್ಯಾ. ಸ್ವತಂತ್ರ ಕುಮಾರ್, ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡುವುದಕ್ಕೂ ಮುನ್ನ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ವಿಫಲವಾಗಿದೆ. ಪರಿಸರ ಕಾನೂನಿನ ಪ್ರಕಾರವೇ ಅನುಮತಿಯನ್ನು ನೀಡಬೇಕಾಗಿತ್ತು ಎಂದು ಹೇಳಿದ್ದಾರೆ.
ಕಾರ್ಯಕ್ರಮದಿಂದ ಯಮುನಾ ನದಿ ಬಯಲು ಪ್ರದೇಶಕ್ಕೆ ಹಾನಿಯಾಗದಂತೆ ಖಚಿತಪಡಿಸಿಕೊಳ್ಳುವುದು ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾಥಮಿಕ ಕರ್ತವ್ಯವಾಗಿದೆ. ಪರಿಸರಕ್ಕೆ ಹಾನಿಯಾಗುವಂತಿದ್ದರೆ ಅನುಮತಿಯನ್ನು ನೀಡಬಾರದಿತ್ತು ಎಂದು ಎನ್’ಜಿಟಿ ಕಿಡಿಕಾರಿದೆ.