‘ಕೈ’ ಬಾಂಬ್: ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ!
ಮುಖ್ಯಮಂತ್ರಿ ಆಯ್ತು, ಈಗ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ| ಬಿಜೆಪಿಯವರು ಬಿಟ್ಟಿದುಡ್ಡು ಮಾಡ್ಕೊಂಡಿದ್ದಾರೆ| ಅದರಿಂದ ನಮ್ಮ ಶಾಸಕರನ್ನು ಸೆಳೆಯಲು ಯತ್ನಿಸ್ತಿದ್ದಾರೆ: ಸಿದ್ದು
ಬೆಂಗಳೂರು[ಜ.27]: ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮುಂದುವರೆಸಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಭಾರೀ ಆಮಿಷ ಒಡ್ಡುತ್ತಿದ್ದಾರೆ ಎಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ತನ್ಮೂಲಕ ಬಿಜೆಪಿಯವರು ಭಾರೀ ಗಿಫ್ಟ್ಗಳ ಮೂಲಕ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ನೀಡಿದ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡಿದ್ದು, ಬಿಟ್ಟಿಹಣ ಹೊಂದಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಸತತ ಪ್ರಯತ್ನ ಮುಂದುವರೆಸಿದ್ದಾರೆ ಎಂದು ಟೀಕಿಸಿದ್ದಾರೆ.
ಕೆಪಿಸಿಸಿ ಕಚೇರಿ ಎದುರು ಶನಿವಾರ ನಡೆದ ಭಾರತದ 70ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಭಾರಿ ಉಡುಗೊರೆಯ ಆಮಿಷವೊಡ್ಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳ ಈ ಮಾತು ಸತ್ಯ. ನಮ್ಮ ಶಾಸಕರನ್ನು ಸೆಳೆಯಲು ಬಿಜೆಪಿಯವರು ಹಣದ ಆಮಿಷ ತೋರಿಸುತ್ತಿದ್ದಾರೆ ಎಂದು ಹೇಳಿದರು.
‘ಬಿಜೆಪಿಯವರು ಬಿಟ್ಟಿ ದುಡ್ಡು ಮಾಡಿಕೊಂಡಿದ್ದಾರೆ. ಆ ಹಣವನ್ನು ಇಟ್ಟುಕೊಂಡು ನಮ್ಮ ಶಾಸಕರನ್ನು ಸೆಳೆಯಲು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ನಿತ್ಯವೂ ಹಣ ತೋರಿಸಿ ಬನ್ನಿ, ಬನ್ನಿ ಎಂದು ಕರೆಯುತ್ತಿದ್ದಾರೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿರುವುದು ಸತ್ಯ’ ಎಂದರು.
ಈಗಾಗಲೇ ಆಪರೇಷನ್ ಕಮಲ ವಿಫಲವಾಗಿದೆ. ಸರ್ಕಾರವನ್ನು ಬೀಳಿಸಲು ಏನೆಲ್ಲಾ ಪ್ರಯತ್ನ ಮಾಡಿದರೋ ಎಲ್ಲವೂ ವಿಫಲವಾಗಿದೆ. ಹೀಗಿದ್ದರೂ ಆಮಿಷವೊಡ್ಡುವುದನ್ನು ನಿಲ್ಲಿಸಿಲ್ಲ ಎಂದು ಕಿಡಿಕಾರಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ಕೇಂದ್ರ ಸರ್ಕಾರವು ಸಂವಿಧಾನ ವಿರೋಧಿ ಕಾರ್ಯಗಳಲ್ಲಿ ತೊಡಗಿದೆ. ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಶಾಸಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ನಡೆಸುತ್ತಿದೆ ಎನ್ನಲಾದ ಆಪರೇಷನ್ ಕಮಲ ಪ್ರಯತ್ನವು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ರೆಸಾರ್ಟ್ ವಾಸದ ನಂತರ ನಿಂತಿದೆ. ಶಾಸಕಾಂಗ ಪಕ್ಷಕ್ಕೆ ಗೈರು ಹಾಜರಾಗಿದ್ದ ಶಾಸಕರು ಸಹ ಒಬ್ಬೊಬ್ಬರೇ ಪ್ರತ್ಯಕ್ಷವಾಗಿ ಕಾಂಗ್ರೆಸ್ ಪಕ್ಷದಲ್ಲೇ ಇರುವುದಾಗಿ ಸ್ಪಷ್ಟನೆ ನೀಡಿದ ನಂತರ ಈ ಪ್ರಯತ್ನ ನಿಂತಿದೆ ಎಂದೇ ನಾಯಕರು ಹೇಳಿಕೆ ನೀಡಿದ್ದರು. ಆದರೆ, ಶುಕ್ರವಾರ ಕುಮಾರಸ್ವಾಮಿ ಅವರು ಬಿಜೆಪಿಯು ಆಪರೇಷನ್ ಕಮಲ ಪ್ರಯತ್ನವನ್ನು ಇನ್ನೂ ನಡೆಸುತ್ತಿದ್ದು, ಕಾಂಗ್ರೆಸ್ ಶಾಸಕರಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ಕರೆ ಮಾಡಿದ್ದರು ಎಂದು ಆರೋಪಿಸಿದ್ದರು.