
ಬೆಂಗಳೂರು (ಆ.17): ಬೆಂಗಳೂರಿನಲ್ಲಿ ರಾಜಕೀಯ ಪ್ರಭಾವದ ದರ್ಪ ಮೆರೆದು ಕರ್ತವ್ಯನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ ಅಲಿಯಾಸ್ ಮಂಜಣ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಾಸಗಿ ಹೋಟೆಲ್ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಗೊಟ್ಟಿಗೆರೆ ಜಂಕ್ಷನ್ನಲ್ಲಿ ಹುಳಿಮಾವು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಅರುಣ್ ಕರ್ತವ್ಯದಲ್ಲಿದ್ದರು. ಈ ವೇಳೆ ಸಂಚಾರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಅರುಣ್ ಅವರು ಹ್ಯಾಂಡ್ ಸಿಗ್ನಲ್ (ಕೈ ಸನ್ನೆ) ಮೂಲಕ ವಾಹನಗಳನ್ನು ನಿಲ್ಲಿಸುತ್ತಿದ್ದರು. ಅದೇ ಮಾರ್ಗವಾಗಿ ಬಂದ ಜೆಡಿಎಸ್ ಮುಖಂಡ ಗೊಟ್ಟಿಗೆರೆ ಮಂಜನ ವಾಹನವನ್ನೂ ನಿಲ್ಲಿಸುವಂತೆ ಸಿಗ್ನಲ್ ನೀಡಿದ್ದಾರೆ.
ವಾಹನ ನಿಲ್ಲಿಸಿದ್ದಕ್ಕೆ ತೀವ್ರ ರೊಚ್ಚಿಗೆದ್ದ ಗೊಟ್ಟಿಗೆರೆ ಮಂಜ, ಕಾರಿನಿಂದ ಕೆಳಗಿಳಿದು 'ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ?' ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಷ್ಟಕ್ಕೇ ನಿಲ್ಲದೆ:
ಪೊಲೀಸ್ ಸಿಬ್ಬಂದಿ ಅರುಣ್ ಅವರ ಕೊರಳಪಟ್ಟಿ (ಕಾಲರ್) ಹಿಡಿದು ಹಲ್ಲೆ ನಡೆಸಿದ್ದಾನೆ. ಟ್ರಾಫಿಕ್ ಸಿಬ್ಬಂದಿಗೆ ಕಾಲಿನಿಂದ ಒದೆಯಲು ಮುಂದಾಗಿದ್ದಾನೆ. ಈ ದೃಶ್ಯ ಕಂಡು ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಮಧ್ಯಪ್ರವೇಶಿಸಿ ಜಗಳ ಬಿಡಿಸಿ, ಪೊಲೀಸರನ್ನು ರಕ್ಷಿಸಿದ್ದಾರೆ.
ಘಟನೆಯ ನಂತರ ಹುಳಿಮಾವು ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಹಲ್ಲೆ ಆರೋಪದಡಿ ಪ್ರಕರಣ ದಾಖಲಾಗುತ್ತಿದ್ದಂತೆ ಗೊಟ್ಟಿಗೆರೆ ಮಂಜುನಾಥ್ ಪರಾರಿಯಾಗಿದ್ದನು. ತನಿಖೆ ಚುರುಕುಗೊಳಿಸಿದ ಪೊಲೀಸರು, ನಗರದ ಖಾಸಗಿ ಹೋಟೆಲ್ ಒಂದರಲ್ಲಿ ಅಡಗಿ ಕುಳಿತಿದ್ದ ಆರೋಪಿಯನ್ನು ನಿನ್ನೆ ರಾತ್ರಿ ಬಂಧಿಸಿ ಕರೆತಂದಿದ್ದಾರೆ.
ಕರ್ತವ್ಯನಿರತ ಪೊಲೀಸರ ಮೇಲೆಯೇ ರಾಜಕೀಯ ಮುಖಂಡನ ದರ್ಪ ಹಾಗೂ ಹಲ್ಲೆಯ ದೃಶ್ಯಗಳ ಕುರಿತು ಏಷ್ಯಾನೆಟ್ ಸುವರ್ಣ ನ್ಯೂಸ್ ವಿಶೇಷ ವರದಿ ಪ್ರಸಾರ ಮಾಡಿ ಬೆಳಕು ಚೆಲ್ಲಿತ್ತು. ಈ ವರದಿಯ ಬೆನ್ನಲ್ಲೇ ಎಚ್ಚೆತ್ತ ಹಿರಿಯ ಪೊಲೀಸ್ ಅಧಿಕಾರಿಗಳು ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಸೂಚಿಸಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಜೆಡಿಎಸ್ ಮುಖಂಡನನ್ನು ಕಂಬಿ ಹಿಂದೆ ತಳ್ಳಲಾಗಿದೆ.