
ಬೆಂಗಳೂರು (ಆ.24): ಗ್ರೇಟರ್ ಬೆಂಗಳೂರು ಪ್ರಾಧಿಕಾರ (GREATER BENGALURU AUTHORITY- GBA) ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಡದೆ ಸಾರ್ವಜನಿಕರ ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಧಕ್ಕೆ ತರುತ್ತಿರುವ ಮಾಲೀಕರಿಗೆ ತಕ್ಷಣವೇ ನೋಟಿಸ್ ಅಂಟಿಸಲಾಗುತ್ತದೆ. ಇದಕ್ಕೆ ಉತ್ತರ ಬರದಿದ್ದರೆ ಪಾಲಿಕೆಯ ವತಿಯಿಂದಲೇ ಸ್ವಚ್ಛತಾ ಕಾರ್ಯಾಚರಣೆ ನಡೆಸಿ, ಅದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಮಾಲೀಕರ ಆಸ್ತಿ ತೆರಿಗೆಯಲ್ಲೇ (Property Tax) ವಸೂಲಿ ಮಾಡುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸ್ಪಷ್ಟ ಆದೇಶ ನೀಡಿದ್ದಾರೆ.
ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಸಚಿವರು, 'ಖಾಲಿ ನಿವೇಶನಗಳ ಮಾಲೀಕರು ತಮ್ಮ ಜಾಗವನ್ನು ತಾವೇ ಸ್ವಚ್ಛಗೊಳಿಸಿಕೊಳ್ಳಲು ಆಗಸ್ಟ್ 22ರವರೆಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಕೇವಲ ಶೇ. 20ರಷ್ಟು ನಿವೇಶನಗಳ ಮಾಲೀಕರು ಮಾತ್ರ ಸ್ವಯಂಪ್ರೇರಿತರಾಗಿ ಸ್ವಚ್ಛತೆ ಮಾಡಿದ್ದಾರೆ. ಹೀಗಾಗಿ ಇನ್ನು ಮುಂದೆ ಐದೂ ನಗರ ಪಾಲಿಕೆಗಳೇ ನೇರವಾಗಿ ಅಖಾಡಕ್ಕಿಳಿದು ಸ್ವಚ್ಛತಾ ಕಾರ್ಯ ಕೈಗೊಳ್ಳಲಿವೆ' ಎಂದು ತಿಳಿಸಿದರು.
ಸಚಿವರ ನಿರ್ದೇಶನದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಲಿದೆ:
ನಿವೇಶನ ಸ್ವಚ್ಛಗೊಳಿಸುವ ಮೊದಲು ಮತ್ತು ನಂತರದ ಸ್ಥಿತಿಯನ್ನು ಜಿಯೋ-ಲೊಕೇಶನ್ (Geo-Location) ಸಹಿತ ಕಡ್ಡಾಯವಾಗಿ ವಿಡಿಯೋ ರೆಕಾರ್ಡ್ ಮಾಡಬೇಕು. ಈ ಅಧಿಕೃತ ವಿಡಿಯೋ ದಾಖಲೆಗಳನ್ನು ಪರಿಶೀಲಿಸಿದ ನಂತರವೇ ಗುತ್ತಿಗೆದಾರ ಏಜೆನ್ಸಿಗಳಿಗೆ ಬಿಲ್ ಪಾವತಿಸಲಾಗುತ್ತದೆ. ಸಂಗ್ರಹವಾಗುವ ತ್ಯಾಜ್ಯ ಹಾಗೂ ಕಟ್ಟಡ ಭಗ್ನಾವಶೇಷಗಳನ್ನು ಎಲ್ಲೆಂದರಲ್ಲಿ ಸುರಿಯದೆ, ನಗರ ಪಾಲಿಕೆಗಳು ನಿಗದಿಪಡಿಸಿದ ಅಧಿಕೃತ ತ್ಯಾಜ್ಯ ಸಂಸ್ಕರಣಾ ಸ್ಥಳಗಳಿಗೇ ಸಾಗಿಸಬೇಕು.
ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಅಭಿವೃದ್ಧಿಪಡಿಸಿರುವ ‘Clear it’ ಮೊಬೈಲ್ ತಂತ್ರಾಂಶದಲ್ಲಿ ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯದ ಸಂಪೂರ್ಣ ಎಂಡ್-ಟು-ಎಂಡ್ ಮಾಹಿತಿ ದಾಖಲಾಗಲಿದೆ. ಸಾರ್ವಜನಿಕರು ತಮ್ಮ ಏರಿಯಾದಲ್ಲಿ ಕಸ-ಕಂಟಕವಾಗಿರುವ ಖಾಲಿ ನಿವೇಶನಗಳ ಬಗ್ಗೆ ನೇರವಾಗಿ ‘Clear it’ ಆ್ಯಪ್ ಮೂಲಕ ಫೋಟೋ ಸಮೇತ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಸಭೆಯಲ್ಲಿ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ಐದೂ ನಗರ ಪಾಲಿಕೆಗಳ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್., ಜಿ. ಜಗದೀಶ್, ಡಾ. ರಾಜೇಂದ್ರ ಕೆ.ವಿ., ಘನತ್ಯಾಜ್ಯ ನಿರ್ವಹಣಾ ನಿಯಮಿತದ ಸಿಇಒ ಕರೀಗೌಡ ಹಾಗೂ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.