
ಬೆಂಗಳೂರು (ಜು.25): ರಾಜಧಾನಿ ಬೆಂಗಳೂರಿನಲ್ಲಿ ಚಿರತೆ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ರಾಜರಾಜೇಶ್ವರಿ ನಗರ ವ್ಯಾಪ್ತಿಗೆ ಒಳಪಡುವ ಬನಶಂಕರಿ 6ನೇ ಹಂತದ 2ನೇ ಬಡಾವಣೆಯಲ್ಲಿ ಇಂದು ಸಂಜೆ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಜನನಿಬಿಡ ಪ್ರದೇಶದಲ್ಲೇ ಚಿರತೆ ಪ್ರತ್ಯಕ್ಷಗೊಂಡಿರುವುದರಿಂದ ಸ್ಥಳೀಯ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಚಿರತೆಯು ಬಡಾವಣೆಯ ರಸ್ತೆ ಹಾಗೂ ತೆರೆದ ಜಾಗಗಳಲ್ಲಿ ಮುಕ್ತವಾಗಿ ಓಡಾಡುತ್ತಿರುವ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ಈ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಸುತ್ತಮುತ್ತಲಿನ ನಿವಾಸಿಗಳಲ್ಲಿ ಭೀತಿ ಹೆಚ್ಚಿಸಿದೆ.
ಚಿರತೆ ಪ್ರತ್ಯಕ್ಷವಾದ ತಕ್ಷಣವೇ ಎಚ್ಚೆತ್ತುಕೊಂಡ ಬಡಾವಣೆಯ ನಿವಾಸಿಗಳು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆಯನ್ನು ಜನನಿಬಿಡ ಪ್ರದೇಶದಿಂದ ಕಾಡಿನತ್ತ ಓಡಿಸಲು ಪಟಾಕಿಗಳನ್ನು ಸಿಡಿಸಿ ಕಾರ್ಯಾಚರಣೆ ನಡೆಸಿದರು. ಚಿರತೆಯು ಸದ್ಯ ಆಸುಪಾಸಿನಲ್ಲೇ ಅಡಗಿರುವ ಶಂಕೆ ಇದ್ದು, ಸಾರ್ವಜನಿಕರ ರಕ್ಷಣೆಗಾಗಿ ನಾಳೆ (ಭಾನುವಾರ) ಬೆಳಿಗ್ಗೆ ಬಡಾವಣೆಯ ಪ್ರಮುಖ ಭಾಗಗಳಲ್ಲಿ ಬೋನ್ (Cage) ಇಡಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ.
ಬನಶಂಕರಿ 6ನೇ ಹಂತ ಮತ್ತು ರಾಜರಾಜೇಶ್ವರಿ ನಗರದ ಸುತ್ತಮುತ್ತಲಿನ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಬಡಾವಣೆಗಳಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದು ಸಾರ್ವಜನಿಕರನ್ನು ಕಂಗಾಲಾಗಿಸಿದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಅನಗತ್ಯವಾಗಿ ಹೊರಗಡೆ ಓಡಾಡದಂತೆ, ವಿಶೇಷವಾಗಿ ಮಕ್ಕಳು ಹಾಗೂ ಸಾಕುಪ್ರಾಣಿಗಳ ಬಗ್ಗೆ ಹೆಚ್ಚಿನ ಎಚ್ಚರ ವಹಿಸುವಂತೆ ಸ್ಥಳೀಯ ಆಡಳಿತ ಹಾಗೂ ಅರಣ್ಯ ಇಲಾಖೆ ಸೂಚಿಸಿದೆ.