ಬಿಬಿಎಂಪಿ ತಿದ್ದುಪಡಿ ವಿಧೇಯಕ, ಆಸ್ತಿ ತೆರಿಗೆ ಬಾಕಿ ಮೇಲಿನ ದಂಡ ಶೇ.50ರಷ್ಟು ಕಡಿತ

By Kannadaprabha NewsFirst Published Feb 21, 2024, 10:53 AM IST
Highlights

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇ. 50ರಷ್ಟು ಕಡಿತ ಮತ್ತು ತೆರಿಗೆದಾರಿಗೆ ಅನುಕೂಲವಾಗುವ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024ಕ್ಕೆ ಸದನವು ಧ್ವನಿಮತದ ಮೂಲಕ ಅಂಗೀಕರಿಸಿದೆ.

ವಿಧಾನಸಭೆ (ಫೆ/20): ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇ. 50ರಷ್ಟು ಕಡಿತ ಮತ್ತು ತೆರಿಗೆದಾರಿಗೆ ಅನುಕೂಲವಾಗುವ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024ಕ್ಕೆ ಸದನವು ಧ್ವನಿಮತದ ಮೂಲಕ ಅಂಗೀಕರಿಸಿದೆ.

ವಕೀಲರ ಪ್ರತಿಭಟನೆ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ಬಾವಿಗಿಳಿದು ಧರಣಿ ನಡೆಸಿದ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಧೇಯಕಕ್ಕೆ ಅಂಗೀಕಾರ ಕೋರಿದರು. ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಿದರು.

ಬಿಬಿಎಂಪಿ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್‌ನಲ್ಲಿ ದೋಖಾ; ಪಾಲಿಕೆ ಅಧಿಕಾರಿ, ಮನೆ ಮಾಲೀಕನ ವಿರುದ್ಧ ಎಫ್‌ಐಆರ್

ವಿಧೇಯಕ ಕುರಿತು ಮಾಹಿತಿ ನೀಡಿದ ಡಿ.ಕೆ.ಶಿವಕುಮಾರ್‌, ವಿಧೇಯಕದಿಂದ ಬೆಂಗಳೂರಿನ ನಾಗರಿಕರಿಗೆ ತೆರಿಗೆ, ದಂಡ ವಿನಾಯಿತಿ ಸೇರಿ ಸುಮಾರು 2,700 ಕೋಟಿ ರು. ಅನುಕೂಲವಾಗಲಿದೆ. ಜತೆಗೆ ಪಾಲಿಕೆಗೆ ಸುಮಾರು ಒಂದು ಸಾವಿರ ಕೋಟಿ ರು. ನಷ್ಟು ಆಸ್ತಿ ತೆರಿಗೆ ಬರಲಿದೆ. ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು, 5- 7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಸೇರಿದಂತೆ 13- 15 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಬಡ ಹಾಗೂ ದುರ್ಬಲ ವರ್ಗದವರಿಗೆ ವಿಧೇಯಕದಲ್ಲಿ ವಿಶೇಷ ವಿನಾಯಿತಿ ನೀಡಲಾಗಿದೆ. ಸರ್ಕಾರದ ವಸತಿ ಯೋಜನೆಯ ಆಸ್ತಿಗಳು ಹಾಗೂ ಕೊಳಗೇರಿ ಪ್ರದೇಶದ ಕಟ್ಟಡಗಳಿಗೆ ಬಡ್ಡಿ ಮೇಲಿನ ದಂಡ ಇರುವುದಿಲ್ಲ. ಒಂದು ಸಾವಿರ ಚದರ ಅಡಿವರೆಗಿನ ಸ್ವಯಂ ಬಳಕೆ ಆಸ್ತಿದಾರರಿಗೆ ಸಂಪೂರ್ಣ ದಂಡ ವಿನಾಯಿತಿ ನೀಡಲಾಗಿದೆ. ವಸತಿ ಮತ್ತು ಮಿಶ್ರ ಆಸ್ತಿದಾರರ (ವಸತಿ ಮತ್ತು ವಾಣಿಜ್ಯ) ಬಾಕಿಯನ್ನು ಎಷ್ಟೇ ವರ್ಷದಿಂದ ಉಳಿಸಿಕೊಂಡಿದ್ದರೂ ಹಿಂದಿನ 5 ವರ್ಷಕ್ಕೆ ಮಾತ್ರ ಲೆಕ್ಕಾಚಾರ ಹಾಕಲು ನಿರ್ಧರಿಸಲಾಗಿದೆ. 5 ವರ್ಷಕ್ಕಿಂತ ಹಿಂದಿನ ಅವಧಿಗೆ ಬಡ್ಡಿ ಮನ್ನಾ ಮಾಡಲಾಗಿದೆ ಎಂದು ವಿವರಿಸಿದರು.

ತೆರಿಗೆ ಬಾಕಿ ದಂಡ ಮನ್ನಾಗೆ ಬಿಬಿಎಂಪಿ ತಿದ್ದುಪಡಿ ವಿಧೇಯಕ: ಸಂಪುಟ ಒಪ್ಪಿಗೆ

ವಿಧಾನಮಂಡಲ ಅಧಿವೇಶನದಲ್ಲಿ ಬಿಬಿಎಂಪಿ ಕಾಯ್ದೆ (ತಿದ್ದುಪಡಿ) 2020 ಮಂಡಿಸಲಾಗಿರುವ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ದುಬಾರಿ ದಂಡ ಹಾಗೂ ಬಡ್ಡಿ ವಿಧಿಸುವ ಪ್ರಕ್ರಿಯೆಗೆ ಬಿಬಿಎಂಪಿ ತಾತ್ಕಾಲಿಕ ಬ್ರೇಕ್‌ ಹಾಕಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಹಾಗೂ ಸ್ವಯಂ ಘೋಷಿತ ಆಸ್ತಿ ತೆರಿಗೆ (ಎಸ್‌ಎಎಸ್‌) ಪದ್ಧತಿ ಅಡಿಯಲ್ಲಿ ತಪ್ಪು ಮಾಹಿತಿ ನೀಡಿದವರಿಗೆ ಬಿಬಿಎಂಪಿ ಕಾಯ್ದೆ 2020ರ ಪ್ರಕಾರ ನೋಟಿಸ್‌ ನೀಡುವುದರ ಜತೆಗೆ ಭಾರೀ ದಂಡ, ಬಡ್ಡಿ ವಿಧಿಸುವುದು ಹಾಗೂ ಆಸ್ತಿ ಜಪ್ತಿ ಮಾಡುವುದಕ್ಕೆ ಅವಕಾಶವಿತ್ತು. ಅದರಂತೆ ಬಿಬಿಎಂಪಿ ಕಂದಾಯ ವಿಭಾಗ 60 ಸಾವಿರಕ್ಕೂ ಹೆಚ್ಚಿನ ಆಸ್ತಿಗೆ ನೋಟಿಸ್‌ ನೀಡಿದ್ದಲ್ಲದೆ, 10 ಸಾವಿರಕ್ಕೂ ಹೆಚ್ಚಿನ ಆಸ್ತಿಗಳಿಗೆ ಬೀಗಮುದ್ರೆ ಹಾಕಿತ್ತು. ಬಿಬಿಎಂಪಿಯ ಈ ಕ್ರಮದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅದನ್ನು ಮನಗಂಡ ಸರ್ಕಾರ ಬಿಬಿಎಂಪಿ ಕಾಯ್ದೆ 2020ಕ್ಕೆ ತಿದ್ದುಪಡಿ ತಂದಿದ್ದು, ಅದನ್ನು ಅಧಿವೇಶನದಲ್ಲಿ ಮಂಡಿಸಿತ್ತು.

27 ಅಧಿಕಾರಿಗಳ ವಿರುದ್ಧ ಇಲಾಖಾ ಚಾರ್ಚ್‌ಶೀಟ್‌:
ಬಾಕಿ ತೆರಿಗೆ ಹಾಗೂ ಕಂದಾಯ ವಿಭಾಗದಿಂದ ನೀಡಲಾಗುವ ತೆರಿಗೆ ವಸೂಲಿ ಗುರಿಯನ್ನು ಮುಟ್ಟದ 27 ಕಂದಾಯ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಿರುವ ಆಡಳಿತ ವಿಭಾಗದ ಉಪ ಆಯುಕ್ತರು, ಕಂದಾಯ ಅಧಿಕಾರಿಗಳ ವಿರುದ್ಧ ಮುಖ್ಯ ಆಯುಕ್ತರಿಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಕಂದಾಯ ಅಧಿಕಾರಿಗಳು ನಿಗದಿ ಮಾಡಲಾಗಿದ್ದ ಗುರಿಯಂತೆ ತೆರಿಗೆ ವಸೂಲಿ ಮಾಡಿಲ್ಲ. ತಮ್ಮ ವ್ಯಾಪ್ತಿಯಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ 50 ಆಸ್ತಿದಾರರ ಪಟ್ಟಿಯನ್ನು ಸಮರ್ಪಕವಾಗಿ ಮಾಡಿಲ್ಲ. ಮೇಲಧಿಕಾರಿಗಳು ನೀಡಿರುವ ಸೂಚನೆಯನ್ನು ಕಂದಾಯ ಅಧಿಕಾರಿಗಳು ಪಾಲಿಸಿಲ್ಲ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

click me!