
ಬೆಂಗಳೂರು (ಮಾ.09): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಷೇರು ಮಾರುಕಟ್ಟೆಯ (Share Market) ಮೋಹಕ್ಕೆ ಬಿದ್ದು ಮತ್ತೊಂದು ಜೀವ ಬಲಿಯಾಗಿದೆ. ಷೇರು ಮಾರುಕಟ್ಟೆಯಲ್ಲಿ ಉಂಟಾದ ಭಾರಿ ನಷ್ಟ ಹಾಗೂ ಸಾಲಗಾರರ ಕಿರುಕುಳದಿಂದ ಮನನೊಂದ ವ್ಯಕ್ತಿಯೊಬ್ಬರು ಹೆಬ್ಬಾಳದ ರೈಲ್ವೇ ಟ್ರ್ಯಾಕ್ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು 50 ವರ್ಷದ ವೆಂಕಟೇಶ್ ಎಂದು ಗುರುತಿಸಲಾಗಿದೆ. ನಿನ್ನೆ ಹೆಬ್ಬಾಳದ ರೈಲ್ವೇ ಹಳಿಯ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದಾಗ ಪೊಲೀಸರು ತನಿಖೆ ಆರಂಭಿಸಿದ್ದರು. ಪ್ರಾಥಮಿಕವಾಗಿ ಮೃತ ವ್ಯಕ್ತಿಗೆ ಸುಮಾರು 35 ರಿಂದ 40 ವರ್ಷ ಇರಬಹುದು ಎಂದು ಅಂದಾಜಿಸಲಾಗಿದ್ದರೂ, ನಂತರದ ತನಿಖೆಯಲ್ಲಿ ಮೃತರು 50 ವರ್ಷದ ವೆಂಕಟೇಶ್ ಎಂಬುದು ಖಚಿತವಾಗಿದೆ.
ವೆಂಕಟೇಶ್ ಅವರು ಕಳೆದ ಕೆಲವು ಸಮಯದಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಭಾರಿ ಕುಸಿತ ಕಂಡ ಹಿನ್ನೆಲೆಯಲ್ಲಿ ಅವರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು. ಕೇವಲ ಹಣಕಾಸಿನ ನಷ್ಟವಷ್ಟೇ ಅಲ್ಲದೆ, ವೆಂಕಟೇಶ್ ಅವರು ದೀರ್ಘಕಾಲದ ಅನಾರೋಗ್ಯದಿಂದಲೂ ಬಳಲುತ್ತಿದ್ದರು. ಒಂದು ಕಡೆ ಆರ್ಥಿಕ ಮುಗ್ಗಟ್ಟು, ಮತ್ತೊಂದು ಕಡೆ ಅನಾರೋಗ್ಯದ ಸಮಸ್ಯೆ ಇವರನ್ನು ಹೈರಾಣಾಗಿಸಿತ್ತು.
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ವೆಂಕಟೇಶ್ ಅವರು ಹಲವರಿಂದ ಸಾಲ ಪಡೆದಿದ್ದರು ಎಂದು ತಿಳಿದುಬಂದಿದೆ. ನಷ್ಟ ಉಂಟಾದ ಮೇಲೆ ಸಾಲ ತೀರಿಸಲಾಗದೆ ಅವರು ಸಂಕಷ್ಟಕ್ಕೆ ಸಿಲುಕಿದ್ದರು. ಇದೇ ವೇಳೆ ಸಾಲ ನೀಡಿದವರಿಂದ ಹಣ ವಾಪಸ್ ನೀಡುವಂತೆ ಒತ್ತಡ ಹಾಗೂ ಕಿರುಕುಳ ಹೆಚ್ಚಾಗಿತ್ತು. ಅನಾರೋಗ್ಯ ಮತ್ತು ಸಾಲಗಾರರ ಕಾಟದಿಂದ ಮಾನಸಿಕವಾಗಿ ಕುಗ್ಗಿದ್ದ ವೆಂಕಟೇಶ್, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ.
ಹೆಬ್ಬಾಳ ರೈಲ್ವೇ ಟ್ರ್ಯಾಕ್ ಬಳಿ ಶವ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಯಶವಂತಪುರ ಹಾಗೂ ಬೈಯಪ್ಪನಹಳ್ಳಿ ರೈಲ್ವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ರೈಲಿಗೆ ತಲೆಕೊಟ್ಟಿದ್ದರಿಂದ ಮೃತದೇಹ ಛಿದ್ರಗೊಂಡ ಸ್ಥಿತಿಯಲ್ಲಿತ್ತು. ಪೊಲೀಸರು ಘಟನಾ ಸ್ಥಳದಲ್ಲಿ ಮಹಜರು ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಬೈಯಪ್ಪನಹಳ್ಳಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಷೇರು ಮಾರುಕಟ್ಟೆಯಲ್ಲಿ ಸರಿಯಾದ ಜ್ಞಾನವಿಲ್ಲದೆ ದೊಡ್ಡ ಮೊತ್ತದ ಹಣ ಹೂಡುವುದು ಅಪಾಯಕಾರಿ. ಹಣಕಾಸಿನ ಸಮಸ್ಯೆಗಳಿದ್ದಲ್ಲಿ ಅಥವಾ ಮಾನಸಿಕವಾಗಿ ಕುಗ್ಗಿದಾಗ ಆತ್ಮಹತ್ಯೆ ಒಂದೇ ಪರಿಹಾರವಲ್ಲ. ನೆರವಿನ ಅಗತ್ಯವಿದ್ದಲ್ಲಿ ಸಹಾಯವಾಣಿಗಳನ್ನು ಸಂಪರ್ಕಿಸುವುದು ಉತ್ತಮ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಓದಿರಿ.