ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಸಚಿವ ಮುರುಗೇಶ್ ನಿರಾಣಿ

By Suvarna NewsFirst Published May 27, 2022, 4:10 PM IST
Highlights

*ದಾವೋಸ್ ಪ್ರವಾಸ ಯಶಸ್ವಿ: ಕರ್ನಾಟಕದ ಬಗ್ಗೆ ಉದ್ಯಮಿಗಳಿಗೆ ವಿಶೇಷ ಒಲವು 
*ಅನೇಕ ಉದ್ಯಮಿಗಳ ಭೇಟಿಯಾಗಿ ಹೂಡಿಕೆ ಮಾಡಲು ಮನವರಿಕೆ
*ನಿರುದ್ಯೋಗ ನಿವಾರಣೆ, ಜಿಡಿಪಿ ದರ ಏರಿಕೆ ಸಂಭವ 

ಬೆಂಗಳೂರು (ಮೇ 27): ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ₹5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ (Murugesh Nirani) ವಿಶ್ವಾಸ ವ್ಯಕ್ತಪಡಿಸಿದ್ದಾರೆ.  ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಆಗಮಿಸಿದ ನಿರಾಣಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. 

ಈಗಾಗಲೇ ನಿಗದಿಯಾಗಿರುಂತೆ  ನವೆಂಬರ್ 2 ರಿಂದ 4ರವರೆಗೆ ಮೂರು ದಿನಗಳ  ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿಯಲ್ಲಿರುವ ಅನೇಕ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ.  ಅಂದಾಜು 5 ಲಕ್ಷ ಕೋಟಿ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು. 

"ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ನಾನು  ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದೇವೆ ಇದೊಂದು ಯಶಸ್ವಿ ಪ್ರವಾಸ" ಎಂದು ಅವರು ತಿಳಿಸಿದರು.  

ಕರ್ನಾಟಕದ ಬಗ್ಗೆ ವಿಶೇಷ ಒಲವು: ಕರ್ನಾಟಕದಲ್ಲಿ ಬಂಡವಾಳ (Investment) ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇಲ್ಲಿನ ಆಹ್ಲಾದಕರ ವಾತಾವರಣ, ಉದ್ಯಮಿಗಳ ಪರವಾಗಿರುವ ಸರ್ಕಾರ,  ಕೈಗಾರಿಕಾ ಸ್ನೇಹಿ ನೀತಿಗಳು, ಉದ್ಯಮಿಗಳಿಗೆ ಬೇಕಾಗಿರುವ ರಸ್ತೆ, ನೀರು, ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳು ರಾಜ್ಯದಲ್ಲಿ ಸಿಗುವುದರಿಂದ ಉದ್ಯಮಿಗಳು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು. 

ಇದನ್ನೂ ಓದಿ: Davos 2022: ಉದ್ದಿಮೆಗಳಿಗೆ ಕರ್ನಾಟಕ ತುಂಬಾ ಸೇಫ್‌: ಸಿಎಂ ಬೊಮ್ಮಾಯಿ

ದೊಡ್ಡ ಮಟ್ಟದ ಬಂಡವಾಳ ಹೂಡಿಕೆಯಾದರೆ ಕೈಗಾರಿಕೆಗಳು ಹೆಚ್ಚು ಹೆಚ್ಚು ಸ್ಥಾಪನೆಯಾಗಲಿವೆ. ಇದರಿಂದ  ಸ್ಥಳೀಯರಿಗೆ ಉದ್ಯೋಗ (Jobs) ಅವಕಾಶಗಳು ಲಭಿಸಲಿವೆ. ಜೊತೆಗೆ ನಿರುದ್ಯೋಗವು ನಿವಾರಣೆಯಾಗಲಿದೆ ಎಂದು ನಿರಾಣಿ ಅಭಿಪ್ರಾಯಪಟ್ಟರು. 

ನಾಲ್ಕು ದಿನ ನಾವು ವಿವಿಧ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದೇವೆ. ಬಂಡವಾಳ ಹೂಡಿಕೆ ಮಾಡುವಂತೆ ನಾವು ಮುಂದಿಟ್ಟ ಪ್ರಸ್ತಾವನೆಗೆ ಅನೇಕ ಉದ್ಯಮಿಗಳು ಒಪ್ಪಿಗೆ ಸೂಚಿಸಿದ್ದಾರೆ. ಅಂದಾಜು 5 ಲಕ್ಷ ಕೋಟಿ ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಬಂಡವಾಳ ಹೂಡಿಕೆಯಾಗುವುದರಿಂದ ರಾಜ್ಯದ ಜಿಡಿಪಿ (GDP) ದರವು ಏರಿಕೆಯಾಗಲಿದೆ  ಎಂದರು. 

ನವೆಂಬರ್‌ನಲ್ಲಿ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಖ್ಯಾತ ಉದ್ಯಮಿಗಳು  ಆಗಮಿಸುತ್ತಾರೆ ಎಂದು ಭರವಸೆ ಕೊಟ್ಟಿದ್ದಾರೆ. ಕರ್ನಾಟಕ ಕೈಗಾರಿಕಾ ವಲಯದಲ್ಲಿ ಸಾಧಿಸಿರುವ ಪ್ರಗತಿಯ ಚಿತ್ರಣವನ್ನು ತೆರೆದಿಟ್ಟಿದ್ದೇವೆ. ಬಹುತೇಕರು ನಮ್ಮ ರಾಜ್ಯದ  ಬಗ್ಗೆ ವಿಶೇಷವಾದ ಆಸಕ್ತಿಯನ್ನು ತೋರಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗಿದೆ  ಎಂಬು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಇದು ನಿಮ್ಮ ಜೇಬಿನ ಮೇಲೆ ಪರಿಣಾಮ ಬೀರೋದು ಖಂಡಿತ, ಜೂನ್ 1 ರಿಂದ ಬದಲಾಗಲಿದೆ ಈ 5 ನಿಯಮ!

click me!