ಕರ್ನಾಟಕ ಬಜೆಟ್ 2021: ನಿಮ್ಮ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ನೋಡಿ

Published : Mar 08, 2021, 07:27 PM ISTUpdated : Mar 08, 2021, 07:38 PM IST
ಕರ್ನಾಟಕ ಬಜೆಟ್ 2021: ನಿಮ್ಮ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ನೋಡಿ

ಸಾರಾಂಶ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು (ಸೋಮವಾರ) ಮಧ್ಯಾಹ್ನ 12.05ಕ್ಕೆ ಬಜೆಟ್ ಭಾಷಣ ಆರಂಭಿಸಿದ್ದು, 105 ಪುಟಗಳನ್ನು ಬರೋಬ್ಬರಿ ಎರಡು ತಾಸಲ್ಲಿ ಓದಿ ಮುಗಿಸಿದರು. ಈ ಬಜೆಟ್ ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ ಎನ್ನುವುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, (ಮಾ.08):  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಸೋಮವಾರ) 2021-22ನೇ ಸಾಲಿ ಬಜೆಟ್ ಮಂಡಿಸಿದ್ದಾರೆ. ಹಲವು ಹೊಸ ಯೋಜನೆಗಳನ್ನು ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದಾರೆ.

 ಈ ಬಜೆಟ್ ನಲ್ಲಿ ತವರು ಜಿಲ್ಲೆ ಶಿವಮೊಗ್ಗಕ್ಕೆ ಭರ್ಜರಿ ಅನುದಾನ ಘೋಷಣೆ ಮಾಡಿದ್ದಾರೆ. ಇನ್ನು ರಾಜ್ಯದ ಇನ್ನುಳಿದ ಜಿಲ್ಲೆಗೆ ಏನು ಕೊಟ್ಟಿದ್ದಾರೆ ಎನ್ನುವ ಸಮಗ್ರ ಮಾಹಿತಿ ಈ ಕೆಳಗಿನಂತಿದೆ.

ಮಾಜಿ ಸಿಎಂ ಬೇಡಿಕೆ ಈಡೇರಿಸಿದ ಬಿಎಸ್‌ವೈ: ಬಜೆಟ್‌ನಲ್ಲಿ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂಪರ್

ಯಾವ ಜಿಲ್ಲೆಗೆ ಏನು..?
* ಬೆಂಗಳೂರಿನಲ್ಲಿ ಗಾರ್ಮೆಂಟ್ ಉದ್ಯಮದ ಮಹಿಳಾ ಕಾರ್ಮಿಕರಿಗೆ 30 ಕೋಟಿ ರೂ. ವೆಚ್ಚದಲ್ಲಿ ರಿಯಾಯಿತಿ ದರದಲ್ಲಿ ಬಿಎಂಟಿಸಿ ಬಸ್ ಪಾಸ್ ನೀಡುವ 'ವನಿತಾ ಸಂಗಾತಿ ಯೋಜನೆ ಚಾಲನೆ.

* ವಿಜಯಪುರ ಜಿಲ್ಲೆ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ ಪಾರ್ಕ್ ಸ್ಥಾಪನೆ.

* ಕೊಪ್ಪಳ ಜಿಲ್ಲೆಯ ಸಿರಿವಾರ ಗ್ರಾಮದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಅಭಿವೃದ್ಧಿ.

* ಬೆಂಗಳೂರಿನ ಓಕಳೀಪುರಂನಲ್ಲಿ ರೇಷ್ಮೆ ಇಲಾಖೆಯ ಎಲ್ಲ ಕಛೇರಿಗಳನ್ನು ಒಂದೇ ಸೂರಿನಡಿ ತರಲು, 150 ಕೋಟಿ ರೂ. ವೆಚ್ಚದಲ್ಲಿ ರೇಷ್ಮೆ ಭವನ ನಿರ್ಮಾಣ.

*ರಾಮನಗರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ.

* ಬೆಂಗಳೂರಿನ ಸಿಂಗೇನ ಅಗ್ರಹಾರ ಸಮೀಪದ ಗುಳಿಮಂಗಳ ಗ್ರಾಮದಲ್ಲಿ ಅತ್ಯಾಧುನಿಕ ತರಕಾರಿ ಮಾರುಕಟ್ಟೆ ನಿರ್ಮಾಣ.

* ಬಳ್ಳಾರಿಯ ಆಲದಹಳ್ಳಿ ಗ್ರಾಮದಲ್ಲಿ ಅತ್ಯಾಧುನಿಕ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪನೆ.

* ಚಾಮರಾಜನಗರದಲ್ಲಿ ಅರಿಶಿನ ಮಾರುಕಟ್ಟೆಯ ಸಮಗ್ರ ಅಭಿವೃದ್ಧಿ

* ಹಾವೇರಿಯ ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ "ಆಧುನಿಕ ಗುಣವಿಶ್ಲೇಷಣಾ ಘಟಕ"ಸ್ಥಾಪನೆ.

* ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 234 ಕೆರೆಗಳಿಗೆ ಬೆಂಗಳೂರು ನಗರದ ವೃಷಭಾವತಿ ಕಣಿವೆಯಿಂದ ದ್ವಿತೀಯ ಹಂತಕ್ಕೆ ಸಂಸ್ಕರಿಸಿದ 308 ಎಂ.ಎಲ್.ಡಿ. ನೀರು ತುಂಬಿಸುವ 500 ಕೋಟಿ ರೂ. ವೆಚ್ಚದ ಯೋಜನೆ ಅನುಷ್ಠಾನ.

* ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ನದಿಗಳಲ್ಲಿ ಪ್ರವಾಹ ಮತ್ತು ಭಾರಿ ಅಲೆಗಳಿಂದಾಗಿ ಉಪ್ಪುನೀರು ಹಿಮ್ಮುಖವಾಗಿ ನುಗ್ಗುವುದನ್ನು ಫ್ಲಾಪ್ ಗೇಟ್ ಮುಖಾಂತರ ತಡೆಗಟ್ಟುವ ಖಾರ್‌ಲ್ಯಾಂಡ್ ಯೋಜನೆ ಜಾರಿ.

*ಶಿವಮೊಗ್ಗ ಜಿಲ್ಲೆಯಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ.

* ಬೆಂಗಳೂರು, ಮೈಸೂರು, ಬಳ್ಳಾರಿ ಮತ್ತು ಹುಬ್ಬಳ್ಳಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಒಟ್ಟು ಐದು ಕೋಟಿ ರೂ. ವೆಚ್ಚದಲ್ಲಿ ತುರ್ತು ಚಿಕಿತ್ಸಾ ವಿಭಾಗ ಪ್ರಾರಂಭ. ಮೈಸೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಟ್ರಾಮಾ ಕೇರ್ ಕೇಂದ್ರ ಪ್ರಾರಂಭ.

* ಶಿವಮೊಗ್ಗ ಮತ್ತು ಮೈಸೂರಿನಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ.

*ದಾವಣಗೆರೆಯಲ್ಲಿ 20 ಕೋಟಿ ರೂ.ಗಳ ವೆಚ್ಚದಲ್ಲಿ 50 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಉಪಕೇಂದ್ರ ಪ್ರಾರಂಭಿಸಲು ಕ್ರಮ.

* ಕಲಬುರಗಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸುಟ್ಟಗಾಯಗಳ ಚಿಕಿತ್ಸಾ ಕೇಂದ್ರ ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗ ಪ್ರಾರಂಭ.

* ಚಿತ್ರದುರ್ಗ ಜಿಲ್ಲೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ಹೊಸ ವೈದ್ಯಕೀಯ ಕಾಲೇಜು ಪ್ರಾರಂಭ.

* ಹಾಸನ ಮತ್ತು ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ ಪ್ರಸಕ್ತ ಸಾಲಿನಿಂದ 100 ಸ್ನಾತಕೋತ್ತರ ಸೀಟುಗಳ ಹೆಚ್ಚಳ.

* ಧಾರವಾಡದ ಡಿಮ್ಹಾನ್ಸ್ ಸಂಸ್ಥೆಯನ್ನು 75 ಕೋಟಿ ರೂ.ಗಳ ವೆಚ್ಚದಲ್ಲಿ ಮಾನಸಿಕ ನರರೋಗಿಗಳ ಸುಸಜ್ಜಿತ ಚಿಕಿತ್ಸಾ ಸಂಸ್ಥೆಯನ್ನಾಗಿ ಹಂತ ಹಂತವಾಗಿ ಮೇಲ್ದರ್ಜೇಗೇರಿಸಲು ಕ್ರಮ. ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ನಿಗದಿ.

* ನಿಪ್ಪಾಣಿಯಲ್ಲಿ "ಕೊಲ್ಹಾಪುರಿ ಪಾದರಕ್ಷೆಗಳ ಕ್ಲಸ್ಟರ್' ಮತ್ತು ಚಿತ್ರದುರ್ಗದಲ್ಲಿ ಪಾದರಕ್ಷಾ ತರಬೇತಿ ಸಂಸ್ಥೆಯ ವಿಸ್ತರಣಾ ಕೇಂದ್ರ ಪ್ರಾರಂಭ

*ಶ್ರವಣಬೆಳಗೊಳ ಮತ್ತು ಇನ್ನಿತರೆ ಜೈನ ಪುಣ್ಯ ಕ್ಷೇತ್ರಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ;

* ಬೆಳಗಾವಿ ನಗರದಲ್ಲಿ ವರ್ತುಲ ರಸ್ತೆ ನಿರ್ಮಾಣ; ರಾಜ್ಯ ಸರ್ಕಾರದಿಂದ ಭೂಸ್ವಾಧೀನ ವೆಚ್ಚದ ಶೇ 50ರಷ್ಟು ಮೊತ್ತ 140 ಕೋಟಿ ರೂ. ಒದಗಿಸಲು ಕ್ರಮ. ರಾಯಚೂರು ನಗರಕ್ಕೆ ವರ್ತುಲ ರಸ್ತೆ ನಿರ್ಮಾಣ

*ಧಾರವಾಡ -ಕಿತ್ತೂರು-ಬೆಳಗಾವಿಯ ನಡುವೆ 73 ಕಿ.ಮೀ. ಉದ್ದದ ಹೊಸ ರೈಲು ಮಾರ್ಗಕ್ಕೆ ರಾಜ್ಯ ಸರ್ಕಾರದಿಂದ 463 ಕೋಟಿ ರೂ. ಅನುದಾನ.
* ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ನೌಕಾ ವಾಯುನೆಲೆ ಸಮೀಪದಲ್ಲಿ ಸಿವಿಲ್ ಎನ್‌ಕ್ಲೇವ್ ಅಭಿವೃದ್ಧಿಪಡಿಸಲು ಕ್ರಮ. 175 ಕೋಟಿ ರೂ. ವೆಚ್ಚದಲ್ಲಿ ಹಾಸನ ವಿಮಾನ ನಿಲ್ದಾಣ ಕಾಮಗಾರಿ ಪ್ರಾರಂಭಿಸಲು ಕ್ರಮ . 394 ಕೋಟಿ ವೆಚ್ಚದ ಶಿವಮೊಗ್ಗ ಮತ್ತು 220 ಕೋಟಿ ರೂ. ವೆಚ್ಚದ ವಿಜಯಪುರ ವಿಮಾನ ನಿಲ್ದಾಣಗಳ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಲು ಕ್ರಮ.

* ಉತ್ತರ ಕನ್ನಡದ ತದಡಿಯಲ್ಲಿ 1000 ಎಕರೆಗಳ ಪರಿಸರ ಪ್ರವಾಸೋದ್ಯಮ ಉದ್ಯಾನವನ ಅಭಿವೃದ್ಧಿ.

* ಹೊನ್ನಾವರದ ಕಾಸರಕೋಡ ಬಂದರು ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿ-66 ರಿಂದ ಭಾರತಮಾಲಾ ಯೋಜನೆಯಡಿ 100 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಚತುಷ್ಪಥ ಸಂಪರ್ಕ ರಸ್ತೆ ನಿರ್ಮಿಸಲು ಕ್ರಮ

* ಯಾದಗಿರಿ ಜಿಲ್ಲೆಯ ಕಡೆಚೂರಿನಲ್ಲಿ 1,478 ಕೋಟಿ ರೂ. ವೆಚ್ಚದಲ್ಲಿ"ಬಲ್ಕ್ ಡ್ರಗ್ ಪಾರ್ಕ್" ಅಭಿವೃದ್ಧಿ. ಬೀದರ್‌ನ ಕೃಷಿ ಉಪಕರಣಗಳ ತಯಾರಿಕಾ ಕ್ಲಸ್ಟರ್‌ನಲ್ಲಿ ಬರುವ ಕೈಗಾರಿಕೆಗಳಿಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್ ಘೋಷಣೆ.

* ಬಾಗಲಕೋಟೆಯ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್ ಸ್ಥಾಪನೆ; ಉತ್ತರ ಕರ್ನಾಟಕದ ಭಾಗದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ "ಸ್ಮಾರ್ಟ್ ಹ್ಯಾಂಡ್‌ಲೂಮ್ ಡಿಸೈನ್ ಸ್ಟುಡಿಯೋ" ಸ್ಥಾಪನೆ.

* ಕಲಬುರಗಿ ಜಿಲ್ಲೆಯ ಫಿರೋಜಾಬಾದ್‌ನಲ್ಲಿ 500 ಮೆಗಾ ವ್ಯಾಟ್ ಸಾಮರ್ಥ್ಯದ ಸೌರಶಕ್ತಿ ಪಾರ್ಕ್ ಸ್ಥಾಪನೆ

* ಶಿರಸಿಯಲ್ಲಿ ಏಳು ಕೋಟಿ ರೂ .ವೆಚ್ಚದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆ. 2021-22 ರಲ್ಲಿ ಎರಡು ಕೋಟಿ ರೂ. ಅನುದಾನ.

* ಬೆಂಗಳೂರಿನ ಮಲ್ಲೇಶ್ವರದಲ್ಲಿ ಮೈಸೂರು ಲ್ಯಾಂಪ್ಸ್ ವರ್ಕ್ಸ್ ನಿಯಮಿತಕ್ಕೆ ಸೇರಿದ ಪ್ರದೇಶದಲ್ಲಿ ಎಕ್ಸ್ ಪೀರಿಯನ್ಸ್ ಬೆಂಗಳೂರು ಅಭಿವೃದ್ಧಿ.

* ಬೆಂಗಳೂರು ನಗರದ ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿ ಪ್ರಾರಂಭಿಸಲು ಕ್ರಮ.

* ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಅಂತಾರಾಷ್ಟ್ರೀಯ ಮಟ್ಟದ ಬೆಂಗಳೂರು ಸಿಗ್ನೇಚರ್ ಬಿಸಿನೆಸ್ ಪಾರ್ಕ್ ಅಭಿವೃದ್ಧಿ.

* ಬೆಳಗಾವಿಯ ಕಿತ್ತೂರಿನ ಕೋಟೆ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಹಾಗೂ ಪ್ರವಾಸಿ ಸೌಲಭ್ಯಗಳಿಗಾಗಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ

* ಬೀದರ್‌ನ ಬಸವಕಲ್ಯಾಣದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಹೊಸ ಅನುಭವ ಮಂಟಪ ನಿರ್ಮಿಸುವ ಯೋಜನೆಗೆ 200 ಕೋಟಿ ರೂ. ಬಿಡುಗಡೆ; ಕಾಮಗಾರಿ ಶೀಘ್ರ ಪ್ರಾರಂಭ.

* ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ ಗ್ರಾಮದ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ.

* ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಸ್ಥಾಪಿಸಲಾಗುತ್ತಿರುವ "ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರ"ಕ್ಕೆ ಸರ್ಕಾರದಿಂದ 10 ಕೋಟಿ ರೂ. ಸಹಾಯಾನುದಾನ

* 10 ಕೋಟಿ ರೂ . ವೆಚ್ಚದಲ್ಲಿ ಮಂಡ್ಯ ನಗರದ ಕ್ರೀಡಾಂಗಣದ ಉನ್ನತೀಕರಣ.
* ಮೈಸೂರು ಜಿಲ್ಲೆಯ ಕಬಿನಿ ಆಣೆಕಟ್ಟಿನ ಕೆಳಭಾಗದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ಅಭಿವೃದ್ಧಿ.

* ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮ ಮತ್ತು ಚಿಕ್ಕಮಗಳೂರು ಜಿಲ್ಲೆ ಕೆಮ್ಮಣ್ಣುಗುಂಡಿ ಗಿರಿಧಾಮಗಳ ನಿರ್ವಹಣೆ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರ.

*ಚಾಮರಾಜನಗರ ಜಿಲ್ಲೆಯ ಗೋಪಿನಾಥಂ ಪ್ರದೇಶದಲ್ಲಿ 5 ಕೋಟಿ ರೂ ವೆಚ್ಚದಲ್ಲಿ ವನ್ಯ ಸಫಾರಿಯನ್ನೊಳಗೊಂಡಂತೆ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ.

* ಕೊಡಗು ಮತ್ತು ಹಾವೇರಿ ಜಿಲ್ಲೆಯಲ್ಲಿ ನೂತನ ಜಿಲ್ಲಾ ಪೊಲೀಸ್ ಸಂಕೀರ್ಣ ನಿರ್ಮಾಣಕ್ಕೆ ತಲಾ ಎಂಟು ಕೋಟಿ ರೂ . ಹಂಚಿಕೆ.

* ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ಪ್ರಾದೇಶಿಕ ಕೇಂದ್ರ ಪ್ರಾರಂಭ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ತೆರಿಗೆ ಕಟ್ಟದೆಯೇ ಮನೆಯಲ್ಲಿ ಎಷ್ಟು ಚಿನ್ನ ಇಟ್ಟುಕೊಳ್ಳಬಹುದು? ಈ ಮಿತಿ ಮೀರಿದರೆ ಗಂಡಾಂತರ!
India Latest News Live: ತೆರಿಗೆ ಕಟ್ಟದೆಯೇ ಮನೆಯಲ್ಲಿ ಎಷ್ಟು ಚಿನ್ನ ಇಟ್ಟುಕೊಳ್ಳಬಹುದು? ಈ ಮಿತಿ ಮೀರಿದರೆ ಗಂಡಾಂತರ!