ಕರ್ನಾಟಕ ಬಜೆಟ್ 2024: ಹೂಡಿಕೆ ಆಕರ್ಷಿಸಲು ಹೊಸ ಕೈಗಾರಿಕಾ ನೀತಿ, 25 ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್

By Suvarna NewsFirst Published Feb 16, 2024, 1:58 PM IST
Highlights

ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ನೆರವು ನೀಡುವ ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಹಾಗೆಯೇ ವಾಣಿಜ್ಯ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಕೂಡ ಹೆಚ್ಚಿನ ಒತ್ತು ನೀಡಲಾಗಿದೆ. 
 

ಬೆಂಗಳೂರು (ಫೆ.16): ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್ ಮಂಡಿಸಿದ್ದು, ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಬಜೆಟ್ ನಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಅಲ್ಲದೆ, ಹೆಚ್ಚು ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗಿದೆ. ಗಾಂಧೀಜಿಯವರು ಭೇಟಿ ನೀಡಿದ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ಖಾದಿ ಚಟುವಟಿಕೆ ಪ್ರೋತ್ಸಾಹಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಜೆಟ್ ನಲ್ಲಿ ತಿಳಿಸಿದ್ದಾರೆ. ವಾಣಿಜ್ಯ ಮತ್ತು ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಜೆಟ್ ನಲ್ಲಿನ ಪ್ರಮುಖ ಘೋಷಣೆಗಳ ಮಾಹಿತಿ ಇಲ್ಲಿದೆ.

*ಬೆಂಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ Knowledge Health Care, Innovation and Research City (KHIR) ಅಭಿವೃದ್ಧಿಪಡಿಸಲು ಸರ್ಕಾರ ಯೋಚಿಸಿದೆ. ಈ ಯೋಜನೆಯಿಂದ ಅಂದಾಜು 40 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಇದರಿಂದ  ಸುಮಾರು 80 ಸಾವಿರ ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆಯಿದೆ. 
*ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹೊಸ ಕೈಗಾರಿಕಾ ನೀತಿ ಜಾರಿ. 
*ರಾಜ್ಯಕ್ಕೆ ವಿದೇಶಿ ಹೂಡಿಕೆಗಳನ್ನು ಆಕರ್ಷಿಸಲು ಫೆಬ್ರವರಿ 2025ರಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜಿಸಲಾಗುವುದು.
*ಗ್ರಾಮೀಣ ಜನರಲ್ಲಿ ಆರ್ಥಿಕ ಶಿಸ್ತು ಮತ್ತು ಉಳಿತಾಯ ಮನೋಭಾವ ಉತ್ತೇಜಿಸಲು ಎಂ.ಎಸ್.ಐ.ಎಲ್. ವತಿಯಿಂದ ಚಿಟ್ ಫಂಡ್ ಅನ್ನು ಗ್ರಾಮಾಂತರ ಪ್ರದೇಶಗಳಿಗೆ ವಿಸ್ತರಿಸಲಾಗಿದೆ.

ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್ ಘೋಷಿಸಿದ ಸಿದ್ದರಾಮಯ್ಯ, 393 ಕೋಟಿ ರೂ ಅನುದಾನ ಮೀಸಲು

*ವಿವಿಧ ಜಿಲ್ಲೆಗಳಲ್ಲಿರುವ ಕೈಗಾರಿಕಾ ವಸಾಹತುಗಳನ್ನು ಕೇಂದ್ರ ಸರ್ಕಾರದ ಸಹಯೋಗದಲ್ಲಿ 39 ಕೋಟಿ ರೂ. ವೆಚ್ಚದಲ್ಲಿ ಮೇಲ್ಡರ್ಜೆಗೇರಿಸಲಾಗುವುದು.
*ಬೆಂಗಳೂರು-ಮುಂಬೈ ಎಕಾನಾಮಿಕ್ ಕಾರಿಡಾರ್ ಯೋಜನೆಯಡಿ ಧಾರವಾಡ ಸಮೀಪ ಸುಮಾರು 6,000 ಎಕರೆ ಜಮೀನಿನಲ್ಲಿ ಕೈಗಾರಿಕಾ ನೋಡ್ ಅಭಿವೃದ್ಧಿ. ಈ ಮೂಲಕ ಉತ್ತರ ಕರ್ನಾಟಕದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ತೀರ್ಮಾನ.
*ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸ್ಟಾಕ್ ಎಕ್ಸ್ ಚೇಂಜ್ ಗಳಲ್ಲಿ ಐಪಿಒ ಬಿಡುಗಡೆ ಮಾಡಲು ತಗಲುವ ವೆಚ್ಚದಲ್ಲಿ ಗರಿಷ್ಠ ಮಿತಿ 25 ಲಕ್ಷ ರೂ.ಗಳಿಗೆ ಒಳಪಟ್ಟು ಶೇ.50ರಷ್ಟು ಸಹಾಯಧನ.
*TReDS ಸೇವಾ ಪೂರೈಕೆದಾರರೊಂದಿಗೆ ಒಡಂಬಡಿಕೆ.
*ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿಶೇಷ ಘಟಕ ಯೋಜನೆಯಡಿ ಕೆಐಎಲ್ ಟಿಯಲ್ಲಿ ಡಿಪ್ಲೊಮಾ ಇನ್ ಲೆದರ್ ಆಂಡ್ ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಮಾಡಲು ಪ್ರೋತ್ಸಾಹಧನ.
*ಕಟ್ಟಡಕಲ್ಲು ಸೇರಿದಂತೆ ಎಲ್ಲ ಉಪ ಖನಿಜಗಳ ಅನಧಿಕೃತ ಗಣಿಗಾರಿಕೆ ನಿಯಂತ್ರಣದ ಜೊತೆಗೆ ಸಂಪೂರ್ಣ ಖನಿಜ ಬಳಕೆ ಪ್ರಮಾಣವನ್ನು ಡ್ರೋನ್ ಸರ್ವೆ ಮೂಲಕ ಅಂದಾಜಿಸುವ ವ್ಯವಸ್ಥೆ.
*ಹೊಸ ಮರಳು ನೀತಿ 2020ಕ್ಕೆ ಅನುಮೋದನೆ.
*ಮಂಡ್ಯದಲ್ಲಿ ಮೈ ಶುಗರ್ ಕಾರ್ಖಾನೆ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ.
*2024-29ರ ಅವಧಿಗೆ 10 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಹಾಗೂ 2 ಲಕ್ಷ ಉದ್ಯೋಗ ಸೃಜನೆ ಗುರಿಯೊಂದಿಗೆ ಹೊಸ ಜವಳಿ ನೀತಿ ಜಾರಿ.

ಬಜೆಟ್ ನಲ್ಲಿ ನಾರಿಗೆ ಗೃಹಲಕ್ಷ್ಮಿ ಬಲ; ಸ್ತನ ಕ್ಯಾನ್ಸರ್ ತಡೆಗೆ ಕ್ರಮ,ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್

*ಕಲಬುರಗಿ ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪನೆ. ಇದಕ್ಕೆ ಪೂರಕವಾದ ಮೂಲಸೌಕರ್ಯಕ್ಕೆ 50 ಕೋಟಿ ರೂ. ಅನುದಾನ. 
*ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ (ರಾಯಚೂರು) ಹಾಗೂ ಮೈಸೂರು ವಿಭಾಗಗಳಲ್ಲಿ ಸೂತನ ಜವಳಿ ಪಾರ್ಕ್ ಸ್ಥಾಪನೆ. ಇದರಿಂದ ಸುಮಾರು 10 ಸಾವಿರ ಉದ್ಯೋಗ ಸೃಷ್ಟಿ ಸಾಧ್ಯತೆ.
*ಬಳ್ಳಾರಿಯಲ್ಲಿ ಜೀನ್ಸ್ ಆಪಾರೆಲ್ ಪಾರ್ಕ್ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರ ಅಭಿವೃದ್ಧಿ.
*ಜವಳಿ ಪಾರ್ಕ್ ಗಳು ಇಲ್ಲದಿರುವ ರಾಜ್ಯದ 25 ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್ ಸ್ಥಾಪನೆ. 

click me!