ಅಹಮದಾಬಾದ್: ರವೀಂದ್ರ ಜಡೇಜಾ ಆಲ್ರೌಂಡ್ ಪ್ರದರ್ಶನ ಹಾಗೂ ಮೊಹಮ್ಮದ್ ಸಿರಾಜ್ ಮಾರಕ ದಾಳಿಯ ನೆರವಿನಿಂದ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಎದುರು ಇನ್ನಿಂಗ್ಸ್ ಹಾಗೂ 140 ರನ್ ಅಂತರದ ಜಯ ಸಾಧಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶುಭ್ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಅಜೇಯ ಶತಕ ಸಿಡಿಸಿದ ಜಡೇಜಾ, ಬೌಲಿಂಗ್ನಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಗೆಲುವಿನ ರೂವಾರಿ ಎನಿಸಿದರು.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಎರಡನೇ ದಿನದಾಟದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 448 ರನ್ ಬಾರಿಸಿದ್ದ ಟೀಂ ಇಂಡಿಯಾ, ಮೂರನೇ ದಿನದಾಟ ಆರಂಭಕ್ಕೂ ಮೊದಲೇ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇದರೊಂದಿಗೆ ಭಾರತ ಮೊದಲ ಇನ್ನಿಂಗ್ಸ್ನಲ್ಲಿ 286 ರನ್ಗಳ ಬೃಹತ್ ಮುನ್ನಡೆ ಸಾಧಿಸಿತ್ತು. ಭಾರತ ಪರ ಕೆ ಎಲ್ ರಾಹುಲ್ 100, ಧ್ರುವ್ ಜುರೆಲ್ 125 ಹಾಗೂ ಉಪನಾಯಕ ರವೀಂದ್ರ ಜಡೇಜಾ ಅಜೇಯ 104 ರನ್ ಸಿಡಿಸಿದರೆ, ನಾಯಕ ಶುಭ್ಮನ್ ಗಿಲ್ 50 ರನ್ ಸಿಡಿಸಿದರು.
ಇನ್ನು ಭಾರೀ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡವು ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್ ಮಾರಕ ದಾಳಿಗೆ ತತ್ತರಿಸಿ ಹೋಯಿತು. 24 ರನ್ ಗಳಿಸುವಷ್ಟರಲ್ಲಿ ವಿಂಡೀಸ್ ಆರಂಭಿಕರಿಬ್ಬರೂ ಪೆವಿಲಿಯನ್ ಸೇರಿದರು. ಮಧ್ಯಮ ಕ್ರಮಾಂಕದಲ್ಲಿ ಅಲಿಕ್ ಅಥನಾಜೆ(38) ಹಾಗೂ ಜಸ್ಟೀನ್ ಗ್ರೀವಿಸ್(25) ಕೊಂಚ ಪ್ರತಿರೋಧ ತೋರಿದ್ದು ಬಿಟ್ಟರೇ ಉಳಿದ್ಯಾವ ಬ್ಯಾಟರ್ಗಳು ನೆಲಕಚ್ಚಿ ಆಡುವ ಪ್ರಯತ್ನ ಮಾಡಲಿಲ್ಲ. ಅಂತಿಮವಾಗಿ ವೆಸ್ಟ್ ಇಂಡೀಸ್ ತಂಡವು 162 ರನ್ಗಳಿಗೆ ಸರ್ವಪತನ ಕಂಡಿತು.
ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ 4 ವಿಕೆಟ್ ಪಡೆದರೆ, ಮೊಹಮ್ಮದ್ ಸಿರಾಜ್ 3, ಕುಲ್ದೀಪ್ ಯಾದವ್ 2 ಹಾಗೂ ವಾಷಿಂಗ್ಟನ್ ಸುಂದರ್ ಒಂದು ವಿಕೆಟ್ ಪಡೆದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.