
ದುಬೈ: ಏಷ್ಯಾಕಪ್ನ ಮೊದಲ ಪಂದ್ಯದಲ್ಲಿ ಯುಎಇ ವಿರುದ್ಧ ಕಣಕ್ಕಿಳಿಯಲಿರುವ ಭಾರತ ತಂಡದಲ್ಲಿ ಸಂಜು ಸ್ಯಾಮ್ಸನ್ಗೆ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಮೊದಲ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಭಾರತ ತಂಡದ ಆಡುವ ಹನ್ನೊಂದರ ಬಗ್ಗೆ ಸುಳಿವು ಸಿಕ್ಕಿದೆ ಎಂದು ಕ್ರಿಕ್ಬಜ್ ವರದಿ ಮಾಡಿದೆ. ಜಿತೇಶ್ ಶರ್ಮಾ, ರಿಂಕು ಸಿಂಗ್, ಶುಭ್ಮನ್ ಗಿಲ್ ಮಧ್ಯದ ವಿಕೆಟ್ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ ಸಂಜು ಹೆಚ್ಚಿನ ಸಮಯ ಐಸ್ ಬಾಕ್ಸ್ನಲ್ಲಿ ಕಾಲ ಕಳೆದರು.
ಅಭ್ಯಾಸದ ಮೊದಲ ಸೆಷನ್ನಲ್ಲಿ ಗಿಲ್, ಅಭಿಷೇಕ್ ಶರ್ಮ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮ, ಜಿತೇಶ್ ಶರ್ಮಾ, ರಿಂಕು ಸಿಂಗ್ ಬ್ಯಾಟಿಂಗ್ ಮಾಡಿದರು. ಆದರೆ ಸಂಜುಗೆ ಬ್ಯಾಟಿಂಗ್ ಅವಕಾಶ ಸಿಕ್ಕಲಿಲ್ಲ. 12 ವರ್ಷದೊಳಗಿನವರ ತಂಡದಿಂದಲೂ ಒಟ್ಟಿಗೆ ಆಡುತ್ತಿರುವ ಶುಭ್ಮನ್ ಗಿಲ್ ಮತ್ತು ಅಭಿಷೇಕ್ ಶರ್ಮಾ ಒಟ್ಟಿಗೆ ಬ್ಯಾಟಿಂಗ್ ಅಭ್ಯಾಸ ನಡೆಸಿದರು. ಇದು ಭಾರತದ ಆರಂಭಿಕ ಜೋಡಿಯ ಬಗ್ಗೆ ಸುಳಿವು ನೀಡಿದೆ. ನಂತರ ಇಬ್ಬರೂ ಫೀಲ್ಡಿಂಗ್ ಕೋಚ್ ಟಿ. ದಿಲೀಪ್ ಮಾರ್ಗದರ್ಶನದಲ್ಲಿ ಕ್ಯಾಚಿಂಗ್ ಅಭ್ಯಾಸ ಮಾಡಿದರು. ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ ಹೊಸ ಚೆಂಡಿನಲ್ಲಿ ಬೌಲಿಂಗ್ ಮಾಡಿದರು. ಪಕ್ಕದ ನೆಟ್ನಲ್ಲಿ ಸ್ಪೋಟಕ ಬ್ಯಾಟರ್ ರಿಂಕು ಸಿಂಗ್ ಸ್ಪಿನ್ನರ್ಗಳಾದ ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ಬೌಲಿಂಗ್ ಎದುರಿಸಿದರು. ರಿಂಕು ಫಿನಿಷರ್ ಆಗಿ ಆಡುವ ಸಾಧ್ಯತೆ ಇದೆ ಎನ್ನುವ ಸುಳಿವು ಈ ಪ್ರಾಕ್ಟೀಸ್ ಸೆಷನ್ನಲ್ಲಿ ಸಿಕ್ಕಿದೆ.
ರಿಂಕು ಸಿಂಗ್ ನಂತರ ತಿಲಕ್ ವರ್ಮಾ ಕೂಡ ನೆಟ್ನಲ್ಲಿ ಅಭ್ಯಾಸ ನಡೆಸಿದರು. ಸಂಜು ಸ್ಯಾಮ್ಸನ್ ಕೊನೆಯಲ್ಲಿ ಬ್ಯಾಟಿಂಗ್ ಅಭ್ಯಾಸಕ್ಕೆ ಇಳಿದರು. ಇದಲ್ಲದೆ ಸಂಜುಗೆ ಹೆಚ್ಚಿನ ಫೀಲ್ಡಿಂಗ್ ಅಭ್ಯಾಸವೂ ಸಿಕ್ಕಿಲ್ಲ. ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಜೊತೆ ಸೈಡ್ ನೆಟ್ನಲ್ಲಿ ಸಂಜು ಬ್ಯಾಟ್ ಬೀಸಿದರು. ಆದರೆ ಈ ವೇಳೆ ಕೋಚ್ ಗೌತಮ್ ಗಂಭೀರ್, ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಉಪನಾಯಕ ಶುಭ್ಮನ್ ಗಿಲ್ ಗಂಭೀರ ಚರ್ಚೆಯಲ್ಲಿ ತೊಡಗಿದ್ದರು.
ಅಭ್ಯಾಸದಿಂದಲೇ ಆಡುವ ಹನ್ನೊಂದನ್ನು ನಿರ್ಧರಿಸಲು ಸಾಧ್ಯವಿಲ್ಲ. ಆದರೆ ಅಭ್ಯಾಸದ ವೇಳೆ ಆಡುವ ಹನ್ನೊಂದರ ಬಗ್ಗೆ ಸುಳಿವು ಸಿಗುತ್ತದೆ. ಭಾರತ ತಂಡದ ಅಭ್ಯಾಸ ನೋಡಿದರೆ ಯುಎಇ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಕಡಿಮೆ ಎಂದು ತಿಳಿದುಬರುತ್ತದೆ.
ಏಷ್ಯಾಕಪ್ ಟೂರ್ನಿಗೆ ಭಾರತದ ವೇಳಾಪಟ್ಟಿ:
ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ಸೆಪ್ಟೆಂಬರ್ 10ರಂದು ಯುಎಇ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಇದಾದ ಬಳಿಕ ಸೆಪ್ಟೆಂಬರ್ 14ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಾದಾಡಲಿದೆ. ಇನ್ನು ಸೆಪ್ಟೆಂಬರ್ 19ರಂದು ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಓಮಾನ್ ತಂಡವನ್ನು ಎದುರಿಸಲಿದೆ. ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವು ಎಂಟು ಬಾರಿ ಚಾಂಪಿಯನ್ ಆಗುವ ಮೂಲಕ ಅತ್ಯಂತ ಯಶಸ್ವಿ ತಂಡವಾಗಿ ಹೊರಹೊಮ್ಮಿದೆ. ಹಾಲಿ ಚಾಂಪಿಯನ್ ಭಾರತ 9ನೇ ಏಷ್ಯಾಕಪ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ.
ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಹೀಗಿದೆ:
ಸೂರ್ಯಕುಮಾರ್ ಯಾದವ್(ನಾಯಕ), ಶುಭ್ಮನ್ ಗಿಲ್(ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಕುಮಾರ್(ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಹರ್ಷಿತ್ ರಾಣಾ, ರಿಂಕು ಸಿಂಗ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.