
ಬೆಂಗಳೂರು: ಇತ್ತೀಚೆಗಷ್ಟೇ ಮುಕ್ತಾಯವಾದ ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಶುಭ್ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ 1-2 ಅಂತರದಲ್ಲಿ ಸೋಲು ಅನುಭವಿಸಿದೆ. 2027ರ ಏಕದಿನ ವಿಶ್ವಕಪ್ ಟೂರ್ನಿಗೆ ಸಿದ್ದತೆ ಆರಂಭಿಸಿರುವ ಟೀಂ ಇಂಡಿಯಾ, ಯುವ ಕ್ರಿಕೆಟಿಗರನ್ನು ನಂಬಿಕೊಂಡು ಕೈಸುಟ್ಟುಕೊಂಡಿದೆ.
ಇನ್ನು ಕ್ರಿಕೆಟ್ ವೃತ್ತಿಜೀವನದ ಮಾಡು ಇಲ್ಲವೇ ಮಡಿ ಎನ್ನುವಂತಹ ಸ್ಥಿತಿಯಲ್ಲಿದ್ದ ರೋಹಿತ್ ಶರ್ಮಾ, ಇಂಗ್ಲೆಂಡ್ ಎದುರು ಲಾರ್ಡ್ಸ್ ಮೈದಾನದಲ್ಲಿ ಶತಕ ಸಿಡಿಸುವ ಮೂಲಕ 2027ರ ಏಕದಿನ ವಿಶ್ವಕಪ್ಗೆ ನಾನು ರೆಡಿ ಎನ್ನುವ ಸ್ಪಷ್ಟ ಸಂದೇಶವನ್ನು ರವಾನಿಸಿದರು. ಇದರ ಬೆನ್ನಲ್ಲೇ ಟೀಂ ಇಂಡಿಯಾ ಸೀನಿಯರ್ಸ್ ಪ್ಲೇಯರ್ಸ್ ಅದೃಷ್ಟ ಖುಲಾಯಿಸಿದ್ದು, ಮುಂಬರುವ ದಿನಗಳಲ್ಲಿ ಹಿರಿಯ ಆಟಗಾರರಿಗೆ ಬಿಸಿಸಿಐ ಆಯ್ಕೆ ಸಮಿತಿ ಮಣೆಹಾಕುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಇಂಗ್ಲೆಂಡ್ ಎದುರಿನ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಸೀನಿಯರ್ಸ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಗಮನಾರ್ಹ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಗಿದ್ದರು. ಆದರೆ ಯುವ ಆಟಗಾರರಾದ ಗುರ್ನೂರ್ ಬ್ರಾರ್, ಪ್ರಿನ್ಸ್ ಯಾದವ್ ಸೇರಿದಂತೆ ಹಲವು ಯುವ ಕ್ರಿಕೆಟಿಗರು ನಿರೀಕ್ಷೆ ಉಳಿಸಿಕೊಳ್ಳುವಂತಹ ಪ್ರದರ್ಶನ ತೋರಲಿಲ್ಲ. ಹೀಗಾಗಿ 2027ರ ಏಕದಿನ ವಿಶ್ವಕಪ್ ಟೂರ್ನಿಗೆ ಇನ್ನೊಂದೇ ವರ್ಷ ಬಾಕಿ ಇರುವ ಹಿನ್ನೆಲೆಯಲ್ಲಿ ಹಿರಿಯ ಆಟಗಾರರಿಗೆ ಮಣೆ ಹಾಕಲು ಬಿಸಿಸಿಐ ಆಯ್ಕೆ ಸಮಿತಿ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಹೀಗಾದಲ್ಲಿ ಹಿರಿಯ ಕ್ರಿಕೆಟಿಗರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಬ್ಯಾಟಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಇದಷ್ಟೇ ಅಲ್ಲದೇ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ, ಅನುಭವಿ ವೇಗಿಗಳಾದ ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಕೂಡಾ ಭಾರತ ಏಕದಿನ ತಂಡಕ್ಕೆ ಕಮ್ಬ್ಯಾಕ್ ಮಾಡಲಿದ್ದು, ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.
ಇನ್ನು ಹಿರಿಯ ಕ್ರಿಕೆಟಿಗರ ವೃತ್ತಿಬದುಕಿನ ಜತೆ ಆಟವಾಡುತ್ತಿರುವ ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರ ಜತೆಗಿನ ಒಪ್ಪಂದ ಮುಂಬರುವ ಸೆಪ್ಟೆಂಬರ್ನಲ್ಲಿ ಕೊನೆಯಾಗಲಿದೆ. ಈಗಾಗಲೇ ಭಾರತ ತಂಡವು ಐರ್ಲೆಂಡ್, ಇಂಗ್ಲೆಂಡ್ ಎದುರಿನ ಸೀಮಿತ ಓವರ್ಗಳ ಸರಣಿಯಲ್ಲಿ ಅವಮಾನಕಾರಿ ಸೋಲು ಅನುಭವಿಸಿದೆ. ಹೀಗಾಗಿ ಬಿಸಿಸಿಐ, ಅಗರ್ಕರ್ ಅವರ ಜತೆಗಿನ ಒಪ್ಪಂದವನ್ನು ಕೊನೆಗೊಳಿಸುವ ಚಿಂತನೆಯಲ್ಲಿದ್ದು, ಸೆಪ್ಟೆಂಬರ್ ಬಳಿಕ ಹೊಸ ಆಯ್ಕೆ ಸಮಿತಿ ಮುಖ್ಯಸ್ಥರ ನೇಮಕವಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಶುರುವಾಗಿದೆ.
ಭಾರತದ ಪರ 400 ಅಂತಾರಾಷ್ಟ್ರೀಯ ಪಂದ್ಯವಾಡಿದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ರೋಹಿತ್-ಕೊಹ್ಲಿ ಪಾತ್ರರಾಗಿದ್ದಾರೆ. ವಿಶ್ವ ಕ್ರಿಕೆಟಿಗರ ಪೈಕಿ ಈ ಸಾಧನೆ ಮಾಡಿದ 6ನೇ ಜೋಡಿ. ಶ್ರೀಲಂಕಾದ ಸಂಗಕ್ಕರ-ಜಯವರ್ಧನೆ ಜೊತೆಯಾಗಿ 550 ಪಂದ್ಯವಾಡಿದ್ದು, ಅಗ್ರಸ್ಥಾನದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.