
ನವದೆಹಲಿ(ಫೆ.20): ಆಸ್ಟ್ರೇಲಿಯಾ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಮಧ್ಯದಲ್ಲಿಯೇ ತೊರೆದು ಆಸ್ಟ್ರೇಲಿಯಾಗೆ ವಾಪಾಸ್ಸಾಗಿದ್ದಾರೆ. ಭಾರತ ಎದುರಿನ ಡೆಲ್ಲಿ ಟೆಸ್ಟ್ ಪಂದ್ಯ ಸೋಲಿನ ಬೆನ್ನಲ್ಲೇ ವೈಯುಕ್ತಿಕ ವಿಚಾರವಾಗಿ ಪ್ಯಾಟ್ ಕಮಿನ್ಸ್, ಕಾಂಗರೂ ನಾಡಿಗೆ ಹಾರಿದ್ದಾರೆ.
ಹೌದು, ಆಸೀಸ್ ನಾಯಕ ಪ್ಯಾಟ್ ಕಮಿನ್ಸ್, ರಾಷ್ಟ್ರ ರಾಜಧಾನಿ ನವದೆಹಲಿಯಿಂದ ನೇರವಾಗಿ ಸಿಡ್ನಿಗೆ ವಿಮಾನವೇರಿದ್ದಾರೆ. ತಮ್ಮ ಕುಟುಂಬದಲ್ಲಿ ಗಂಭೀರ ಸಮಸ್ಯೆ ಎದುರಾಗಿರುವುದಾಗಿ ಕ್ರಿಕೆಟ್ ಆಸ್ಟ್ರೇಲಿಯಾಗೆ ಮಾಹಿತಿ ನೀಡಿ ತವರಿಗೆ ವಾಪಾಸ್ಸಾಗಿದ್ದಾರೆ. ಇನ್ನು ಆಸೀಸ್ ಟೀಂ ಮ್ಯಾನೇಜ್ಮೆಂಟ್, ಪ್ಯಾಟ್ ಕಮಿನ್ಸ್, ಮೂರನೇ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನವೇ ತಂಡ ಕೂಡಿಕೊಳ್ಳುವ ವಿಶ್ವಾಸವನ್ನು ಹೊಂದಿದೆ. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಮಾರ್ಚ್ 01ರಿಂದ ಇಂದೋರ್ನ ಹೋಲ್ಕರ್ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿದೆ. ಇನ್ನು 4 ಪಂದ್ಯಗಳ ಟೆಸ್ಟ್ ಸರಣಿ ಮುಕ್ತಾಯದ ಬಳಿಕ ಟೀಂ ಇಂಡಿಯಾ ಎದುರು ಆಸ್ಟ್ರೇಲಿಯಾ ತಂಡವು ಮಾರ್ಚ್ 17ರಿಂದ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.
"ಪ್ಯಾಟ್ ಕಮಿನ್ಸ್ ಅವರು ವೈಯುಕ್ತಿಕ ಕಾರಣದಿಂದ ತವರಿಗೆ ವಾಪಸ್ಸಾಗಿದ್ದಾರೆ. ಅವರ ಕುಟುಂಬವು ಗಂಭೀರ ಕಾಯಿಲೆಯಿಂದ ಬಳಲುತ್ತಿದೆ ಎಂದು ತಿಳಿದು ಬಂದಿದೆ. ಅವರು ಈ ವಾರಾಂತ್ಯದಲ್ಲಿಯೇ ತಂಡವನ್ನು ಕೂಡಿಕೊಳ್ಳಲಿದ್ದಾರೆ. ಈ ಮೂಲಕ ಇಂದೋರ್ ಟೆಸ್ಟ್ಗೆ ಅಭ್ಯಾಸ ನಡೆಸಲಿದ್ದಾರೆ. ಅವರ ಖಾಸಗಿತನವನ್ನು ಕಾಪಾಡಿಕೊಳ್ಳಲು ಮಾಧ್ಯಮದವರು ಅವಕಾಶ ಮಾಡಿಕೊಂಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇವೆ" ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕೆ ಎಲ್ ರಾಹುಲ್ ಫಾರ್ಮ್ ಬಗ್ಗೆ ಕೊನೆಗೂ ಮೌನ ಮುರಿದ ನಾಯಕ ರೋಹಿತ್ ಶರ್ಮಾ..!
ಇನ್ನು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳ ಬಗ್ಗೆ ಹೇಳುವುದಾದರೇ, ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಮೊದಲೆರಡು ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ 2-0 ಮುನ್ನಡೆ ಸಾಧಿಸಿದೆ. ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನಿಂಗ್ಸ್ ಹಾಗೂ 132 ರನ್ಗಳ ಗೆಲುವು ಸಾಧಿಸಿತ್ತು. ಇನ್ನು ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ಗಳ ಜಯ ಸಾಧಿಸಿದೆ. ಮೊದಲೆರಡು ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಮಾರಕ ದಾಳಿಗೆ ಆಸ್ಟ್ರೇಲಿಯಾ ಅಕ್ಷರಶಃ ತತ್ತರಿಸಿ ಹೋಗಿದೆ.
ಟೆಸ್ಟ್ ವಿಶ್ವಕಪ್ ಫೈನಲ್ಗೆ ಭಾರತ ಪ್ರವೇಶ ಖಚಿತ?
ಆಸ್ಟ್ರೇಲಿಯಾ ಎದುರಿನ 2ನೇ ಟೆಸ್ಟ್ ಗೆಲ್ಲುವ ಮೂಲಕ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಭಾರತ ಪ್ರವೇಶಿಸುವುದು ಬಹುತೇಕ ಖಚಿತವೆನಿಸಿದೆ. ಆಸೀಸ್ ವಿರುದ್ಧ ಬಾಕಿ ಇರುವ 2 ಟೆಸ್ಟ್ಗಳಲ್ಲಿ ಒಂದರಲ್ಲಿ ಗೆದ್ದರೆ ಸಾಕು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಫೈನಲ್ಗೇರಲಿದೆ. ಮತ್ತೊಂದೆಡೆ ಆಸ್ಪ್ರೇಲಿಯಾ ಕೊನೆ 2 ಪಂದ್ಯಗಳಲ್ಲಿ ಸೋತರೂ ಫೈನಲ್ಗೇರಬಹುದು. ನ್ಯೂಜಿಲೆಂಡ್ನಲ್ಲಿ ಶ್ರೀಲಂಕಾ 2 ಪಂದ್ಯಗಳ ಸರಣಿಯಲ್ಲಿ 2-0ಯಲ್ಲಿ ಗೆದ್ದರಷ್ಟೇ ಆಸೀಸ್ ಫೈನಲ್ ರೇಸಿಂದ ಹೊರಬೀಳಲಿದೆ. ಇನ್ನೊಂದು ಟೆಸ್ಟ್ ಪಂದ್ಯದ ಗೆಲುವು ಟೀಂ ಇಂಡಿಯಾವನ್ನು ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂ1 ಸ್ಥಾನಕ್ಕೇರುವುದು ಮಾತ್ರವಲ್ಲದೇ, ಸತತ ಎರಡನೇ ಬಾರಿಗೆ ಟೆಸ್ಟ್ ವಿಶ್ವ ಚಾಂಪಿಯನ್ಶಿಪ್ ಫೈನಲ್ಗೆ ಲಗ್ಗೆಯಿಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.