
ಲಖನೌ: ಗೆಲ್ಲಲು ಕೇವಲ 142 ರನ್ ಟಾರ್ಗೆಟ್, ಆದರೆ 26 ರನ್ಗಳಿಗೆ 4 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ಕೊನೆಗೂ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ. ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿದ ಸಮೀರ್ ರಿಜ್ವಿ ಆಕರ್ಷಕ ಅರ್ಧಶತಕ ಹಾಗೂ ನಂಬಿಗಸ್ಥ ಬ್ಯಾಟರ್ ಟ್ರಿಸ್ಟಿನ್ ಸ್ಟಬ್ಸ್ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ 6 ವಿಕೆಟ್ ಭರ್ಜರಿ ಜಯ ಸಾಧಿಸಿದೆ. ಲಖನೌಗೆ ತವರಿನಲ್ಲೇ ಮರ್ಮಾಘಾತ ಎದುರಾಗಿದೆ.
ಸುಲಭ ಗುರಿ ಬೆನ್ನತ್ತಿದ ಡೆಲ್ಲಿ ಮೊದಲ ಓವರ್ನ ಮೊದಲ ಎಸೆತದಲ್ಲೇ ಕೆ ಎಲ್ ರಾಹುಲ್ ವಿಕೆಟ್ ಕಳೆದುಕೊಂಡಿತು. ಅನುಭವಿ ವೇಗಿ ಶಮಿ, ರಾಹುಲ್ಗೆ ಪೆವಿಲಿಯನ್ ಹಾದಿ ತೋರಿಸಿದರು. ಇದರ ಬೆನ್ನಲ್ಲೇ ನಿತೀಶ್ ರಾಣಾ 15 ರನ್ ಗಳಿಸಿ ಮೊಹ್ಸಿನ್ ಖಾನ್ಗೆ ವಿಕೆಟ್ ಒಪ್ಪಿಸಿದರು. ಆರಂಭಿಕ ಬ್ಯಾಟರ್ ಪಥುಮ್ ನಿಸ್ಸಾಂಕ ಕೇವಲ ಒಂದು ರನ್ ಗಳಿಸಿ ಪ್ರಿನ್ಸ್ ಯಾದವ್ಗೆ ವಿಕೆಟ್ ಒಪ್ಪಿಸಿದರು. ನಾಯಕ ಅಕ್ಷರ್ ಪಟೇಲ್ ಸೊನ್ನೆ ಸುತ್ತಿ ಪೆವಿಲಿಯನ್ ಪೆರೇಡ್ ನಡೆಸಿದರು.
26 ರನ್ಗಳಿಗೆ 4 ವಿಕೆಟ್ ಕಳೆದುಕೊಂಡು ಅಕ್ಷರಶಃ ಸೋಲಿನತ್ತ ಮುಖ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ಗೆ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿದ ಸಮೀರ್ ರಿಜ್ವಿ ಹಾಗೂ ಟ್ರಿಸ್ಟಿನ್ ಸ್ಟಬ್ಸ್ ಐದನೇ ವಿಕೆಟ್ಗೆ ಮುರಿಯದ 119 ರನ್ಗಳ ಜತೆಯಾಟವಾಡುವ ಮೂಲಕ 17 ಎಸೆತ ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದರು. ಸ್ಪೋಟಕ ಬ್ಯಾಟಿಂಗ್ ನಡೆಸಿದ ರಿಜ್ವಿ 47 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 70 ರನ್ ಸಿಡಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸ್ಟಬ್ಸ್ 32 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 39 ರನ್ ಬಾರಿಸಿದರು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಲಖನೌ ಸೂಪರ್ ಜೈಂಟ್ಸ್ ಟಿ20 ನಟರಾಜನ್ ಮಾರಕ ದಾಳಿಗೆ ತತ್ತರಿಸಿ ಹೋಯಿತು. ಆರಂಭಿಕನಾಗಿ ಕಣಕ್ಕಿಳಿದ ನಾಯಕ ರಿಷಭ್ ಪಂತ್ 7 ರನ್ ಗಳಿಸಿ ರನೌಟ್ ಆದರೆ, ಏಯ್ಡನ್ ಮಾರ್ಕ್ರಮ್ 11 ರನ್ ಗಳಿಸಿ ಅಕ್ಷರ್ ಪಟೇಲ್ಗೆ ವಿಕೆಟ್ ಒಪ್ಪಿಸಿದರು. ಇನ್ನು ಆಯುಷ್ ಬದೋನಿ ಖಾತೆ ತೆರೆಯುವ ಮುನ್ನವೇ ನಟರಾಜನ್ಗೆ ಎರಡನೇ ಬಲಿಯಾದರು. ಇನ್ನು ಬಿಗ್ ಹಿಟ್ಟರ್ ನಿಕೋಲಸ್ ಪೂರನ್ ಬ್ಯಾಟಿಂಗ್ ಕೇವಲ 8 ರನ್ಗೆ ಸೀಮಿತವಾಯಿತು.
ಒಂದು ಕಡೆ ನಿರಂತರವಾಗಿ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಮಿಚೆಲ್ ಮಾರ್ಷ್ 28 ಎಸೆತಗಳಲ್ಲಿ 35 ರನ್ ಸಿಡಿಸಿ ಕುಲ್ದೀಪ್ ಯಾದವ್ಗೆ ವಿಕೆಟ್ ಒಪ್ಪಿಸಿದರು. ಆಗ ಲಖನೌ ಸ್ಕೋರ್ 9.3 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 71 ರನ್. ಇನ್ನು ಮಧ್ಯಮ ಕ್ರಮಾಂಕದಲ್ಲಿ ಅಬ್ದುಲ್ ಸಮದ್ 36 ರನ್ ಸಿಡಿಸುವ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ಡಾಟಿಸುವಲ್ಲಿ ಯಶಸ್ವಿಯಾದರು. ಸಮದ್ಗೆ ಮುಕುಲ್ ಚೌಧರಿ 14 ರನ್ ಸಿಡಿಸುವ ಮೂಲಕ ಉತ್ತಮ ಸಾಥ್ ನೀಡಿದರು. ಇನ್ನು ಶಹಬಾಜ್ ಅಹಮದ್ 15 ರನ್ ಗಳಿಸಿ ಅಜೇಯರಾಗುಳಿದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ಲುಂಗಿ ಎಂಗಿಡಿ ಹಾಗೂ ಟಿ ನಟರಾಜನ್ ತಲಾ 3 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 2 ಹಾಗೂ ನಾಯಕ ಅಕ್ಷರ್ ಪಟೇಲ್ ಒಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.