
ಮುಂಬೈ(ನ.02): ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬಾರಿಸಿದ ಸ್ಪೋಟಕ ಅರ್ಧಶತಕಗಳ ನೆರವಿನಿಂದ ಶ್ರೀಲಂಕಾ ಎದುರು ಟೀಂ ಇಂಡಿಯಾ 8 ವಿಕೆಟ್ ಕಳೆದುಕೊಂಡು 357 ರನ್ ಬಾರಿಸಿದ್ದು ಶ್ರೀಲಂಕಾಗೆ ಕಠಿಣ ಗುರಿ ನೀಡಿದೆ. 2023ರ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ರೇಸ್ನಲ್ಲಿ ಉಳಿಯಬೇಕಿದ್ದರೇ ಲಂಕಾ ಬೃಹತ್ ಮೊತ್ತವನ್ನು ಬೆನ್ನತ್ತಿ ಗೆಲುವು ಸಾಧಿಸಬೇಕಾದ ಒತ್ತಡಕ್ಕೆ ಸಿಲುಕಿದೆ
ಇಲ್ಲಿನ ವಾಂಖೇಡೆ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಇನಿಂಗ್ಸ್ನ ಎರಡನೇ ಎಸೆತದಲ್ಲೇ ನಾಯಕ ರೋಹಿತ್ ಶರ್ಮಾ(4) ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಮಧುಶಂಕ ಲಂಕಾಗೆ ಮೊದಲ ಯಶಸ್ಸು ತಂದುಕೊಟ್ಟರು.
ಸಚಿನ್ ತೆಂಡುಲ್ಕರ್ ಹೆಸರಿನಲ್ಲಿದ್ದ ಮತ್ತೊಂದು ಸಾರ್ವಕಾಲಿಕ ದಾಖಲೆ ಮುರಿದ ವಿರಾಟ್ ಕೊಹ್ಲಿ..!
ಕೊಹ್ಲಿ-ಗಿಲ್ ಶತಕದ ಜುಗಲ್ಬಂದಿ: ಮೊದಲ ಓವರ್ನಲ್ಲೇ ಇನ್ಫಾರ್ಮ್ ಬ್ಯಾಟರ್ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡ ಆರಂಭಿಕ ಆಘಾತಕ್ಕೊಳಗಾಗಿದ್ದ ಟೀಂ ಇಂಡಿಯಾಗೆ ಎರಡನೇ ವಿಕೆಟ್ಗೆ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಶುಭ್ಮನ್ ಗಿಲ್ ಆಸರೆಯಾದರು. ಆರಂಭದಿಂದಲೇ ಆಕರ್ಷಕ ಜತೆಯಾಟ ನಿಭಾಯಿಸಿದ ಈ ಜೋಡಿ 189 ರನ್ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಈ ಇಬ್ಬರು ಶತಕದ ಹೊಸ್ತಿಲಲ್ಲಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. ಶುಭ್ಮನ್ ಗಿಲ್ 92 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 92 ರನ್ ಬಾರಿಸಿ ಮಧುಶಂಕಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ 49ನೇ ಏಕದಿನ ಶತಕದತ್ತ ದಾಪುಗಾಲಿಡುತ್ತಿದ್ದ ವಿರಾಟ್ ಕೊಹ್ಲಿ 88 ರನ್ ಬಾರಿಸಿ ಮಧುಶಂಕಗೆ ಮೂರನೇ ಬಲಿಯಾದರು.
ಇನ್ನು ಕೇವಲ 3 ರನ್ ಅಂತರದಲ್ಲಿ ಗಿಲ್ ಹಾಗೂ ಕೊಹ್ಲಿ ವಿಕೆಟ್ ಪತನದ ಬಳಿಕ 4ನೇ ವಿಕೆಟ್ಗೆ ಶ್ರೇಯಸ್ ಅಯ್ಯರ್ ಹಾಗೂ ಕೆ ಎಲ್ ರಾಹುಲ್ ಚುರುಕಿನ 60 ರನ್ಗಳ ಜತೆಯಾಟ ನಿಭಾಯಿಸಿದರು. ಈ ಜೋಡಿ ಕೇವಲ 47 ಎಸೆತಗಳನ್ನು ಎದುರಿಸಿ 60 ರನ್ಗಳ ಜತೆಯಾಟವಾಡಿತು. ಈ ವೇಳೆ ಕೆ ಎಲ್ ರಾಹುಲ್ 21 ರನ್ ಗಳಿಸಿ ದುಶ್ಮಂತ್ ಚಮೀರಾಗೆ ವಿಕೆಟ್ ಒಪ್ಪಿಸಿದರು.
ICC World Cup: ಭಾರತ ಎದುರು ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ
ಶ್ರೇಯಸ್ ಅಯ್ಯರ್ ಜವಾಬ್ದಾರಿಯುತ ಬ್ಯಾಟಿಂಗ್: ಕಳೆದ ಕೆಲ ಪಂದ್ಯಗಳಲ್ಲಿ ಕೆಟ್ಟ ಹೊಡೆತಕ್ಕೆ ಕೈಹಾಕಿ ವಿಕೆಟ್ ಒಪ್ಪಿಸುತ್ತಿದ್ದ ಶ್ರೇಯಸ್ ಅಯ್ಯರ್, ಇಂದು ಜವಾಬ್ದಾರಿಯುತ ಬ್ಯಾಟಿಂಗ್ ಮೂಲಕ ತಂಡಕ್ಕೆ ಆಸರೆಯಾದರು. ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮೊರೆ ಹೋದ ಅಯ್ಯರ್ ಕೇವಲ 36 ಎಸೆತಗಳನ್ನು ಎದುರಿಸಿ ಅರ್ಧಶತಕ ಪೂರೈಸಿದರು. ಇದಾದ ಬಳಿಕವೂ ಶ್ರೇಯಸ್ ಅಯ್ಯರ್ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದರು. ಅಂತಿಮವಾಗಿ ಅಯ್ಯರ್ 56 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 82 ರನ್ ಬಾರಿಸಿ ಮಧುಶಂಕಗೆ 5ನೇ ಬಲಿಯಾದರು.
ಇನ್ನು ಕೊನೆಯಲ್ಲಿ ಆಲ್ರೌಂಡರ್ ರವೀಂದ್ರ ಜಡೇಜಾ ಚುರುಕಿನ ಬ್ಯಾಟಿಂಗ್ ನಡೆಸಿ 24 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 35 ರನ್ ಬಾರಿಸಿ ಕೊನೆಯ ಎಸೆತದಲ್ಲಿ ರನೌಟ್ ಆದರು.
ಮಧುಶಂಕಗೆ 5 ವಿಕೆಟ್ ಗೊಂಚಲು: ಶ್ರೀಲಂಕಾ ಪರ ಬೌಲಿಂಗ್ನಲ್ಲಿ ದಿಲ್ಷ್ಯಾನ್ ಮಧುಶಂಕ ಕೊಂಚ ದುಬಾರಿಯಾದರೂ, ಟೀಂ ಇಂಡಿಯಾದ ಐವರು ಪ್ರಮುಖ ಬ್ಯಾಟರ್ಗಳನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಮಧುಶಂಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಹಾಗೂ ಶ್ರೇಯಸ್ ಅಯ್ಯರ್ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ಮಧುಶಂಕ 10 ಓವರ್ ಬೌಲಿಂಗ್ ಮಾಡಿ 80 ರನ್ ನೀಡಿ 5 ವಿಕೆಟ್ ಕಬಳಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.