
ಚಿತ್ತಗಾಂಗ್(ಡಿ.16): ಕುಲ್ದೀಪ್ ಯಾದವ್ ಮಿಂಚಿನ ದಾಳಿ ಹಾಗೂ ಆರಂಭಿಕ ಬ್ಯಾಟರ್ಗಳ ಆಕರ್ಷಕ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಆರಂಭದಲ್ಲೇ ಆತಿಥೇಯ ಬಾಂಗ್ಲಾದೇಶ ಎದುರು ಬಿಗಿ ಹಿಡಿತ ಸಾಧಿಸಿದೆ. ಬಾಂಗ್ಲಾದೇಶ ತಂಡವನ್ನು ಕೇವಲ 150 ರನ್ಗಳಿಗೆ ಕಟ್ಟಿಹಾಕಿದ ಟೀಂ ಇಂಡಿಯಾ ಇದೀಗ ಎರಡನೇ ಇನಿಂಗ್ಸ್ ಆರಂಭಿಸಿದ್ದು, ಮೂರನೇ ದಿನದಾಟದ ಲಂಚ್ ಬ್ರೇಕ್ ವೇಳೆಗೆ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ 36 ರನ್ ಬಾರಿಸಿದ್ದು, ಒಟ್ಟಾರೆ 290 ರನ್ಗಳ ಬೃಹತ್ ಮುನ್ನಡೆ ಸಾಧಿಸಿದೆ.
ಎರಡನೇ ದಿನದಾಟದಂತ್ಯದ ವೇಳೆಗೆ 8 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿದ್ದ ಬಾಂಗ್ಲಾದೇಶ ತಂಡವು, ಮೂರನೇ ದಿನದಾಟದ ಆರಂಭದಲ್ಲಿ ತನ್ನ ಖಾತೆಗೆ ಕೇವಲ 17 ರನ್ ಸೇರಿಸಿ ಸರ್ವಪತನ ಕಂಡಿತು. ಎಬೊದತ್ ಹೊಸೈನ್ 17 ರನ್ ಬಾರಿಸಿ ಕುಲ್ದೀಪ್ ಯಾದವ್ಗೆ ವಿಕೆಟ್ ಒಪ್ಪಿಸಿದರು. ಇದು ಕುಲ್ದೀಪ್ ಯಾದವ್ ಪಾಲಿಗೆ 5ನೇ ವಿಕೆಟ್ ಎನಿಸಿಕೊಂಡಿತು. ಈ ಮೂಲಕ ಟೆಸ್ಟ್ ಕ್ರಿಕೆಟ್ ವೃತ್ತಿಜೀವನದಲ್ಲಿ ಮೂರನೇ ಬಾರಿಗೆ 5+ ವಿಕೆಟ್ ಕಬಳಿಸುವಲ್ಲಿ ಕುಲ್ದೀಪ್ ಯಾದವ್ ಯಶಸ್ವಿಯಾದರು. ಇನ್ನು ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾವನ್ನು ಕಾಡಿದ್ದ ಮೆಹದಿ ಹಸನ್ ಮಿರಜ್ 25 ರನ್ ಬಾರಿಸಿ ಅಕ್ಷರ್ ಪಟೇಲ್ಗೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. ಇದರೊಂದಿಗೆ ಟೀಂ ಇಂಡಿಯಾ, 254 ರನ್ಗಳ ಮೊದಲ ಇನಿಂಗ್ಸ್ ಮುನ್ನಡೆ ಗಳಿಸಿತು.
ಇನ್ನು ಬೃಹತ್ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ ಆರಂಭಿಕರಾದ ನಾಯಕ ಕೆ ಎಲ್ ರಾಹುಲ್ ಹಾಗೂ ಶುಭ್ಮನ್ ಗಿಲ್ ಎಚ್ಚರಿಕೆಯ ಆರಂಭ ಒದಗಿಸಿಕೊಟ್ಟಿದ್ದಾರೆ. ಮೂರನೇ ದಿನದಾಟದ ಲಂಚ್ ಬ್ರೇಕ್ ವೇಳೆಗೆ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೇ 36 ರನ್ ಗಳಿಸಿದೆ. ನಾಯಕ ಕೆ ಎಲ್ ರಾಹುಲ್ ಅಜೇಯ 20 ರನ್ ಬಾರಿಸಿದರೆ, ಮತ್ತೋರ್ವ ಆರಂಭಿಕ ಬ್ಯಾಟರ್ ಶುಭ್ಮನ್ ಗಿಲ್ ಅಜೇಯ 15 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.