
ವೆಲ್ಲಿಂಗ್ಟನ್(ನ.27): ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಉಭಯ ತಂಡಗಳಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.
ಹೌದು, ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಎರಡನೇ ಏಕದಿನ ಪಂದ್ಯಕ್ಕೆ ಇಲ್ಲಿನ ಸೆಡನ್ ಪಾರ್ಕ್ ಮೈದಾನ ಆತಿಥ್ಯವನ್ನು ವಹಿಸಿದೆ. ಇನ್ನು ನ್ಯೂಜಿಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಆಡಂ ಮಿಲ್ನೆ ಬದಲಿಗೆ ಮೈಕಲ್ ಬ್ರಾಸ್ವೆಲ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಭಾರತ ಕ್ರಿಕೆಟ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಶಾರ್ದೂಲ್ ಠಾಕೂರ್ ಹಾಗೂ ಸಂಜು ಸ್ಯಾಮ್ಸನ್ಗೆ ವಿಶ್ರಾಂತಿ ನೀಡಲಾಗಿದ್ದು, ಇವರ ಬದಲಿಗೆ ದೀಪಕ್ ಚಹರ್ ಹಾಗೂ ದೀಪಕ್ ಹೂಡಾಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಕಲ್ಪಿಸಲಾಗಿದೆ.
Ind vs NZ ನ್ಯೂಜಿಲೆಂಡ್ ಎದುರಿನ ಎರಡನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ..?
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯವು ಸರಣಿ ಗೆಲುವಿನ ಆಸೆ ಜೀವಂತವಾಗಿರಿಸಿಕೊಳ್ಳಲು ಟೀಂ ಇಂಡಿಯಾಗೆ ಗೆಲುವು ಅನಿವಾರ್ಯ ಎನಿಸಿದೆ. ಮೊದಲ ಪಂದ್ಯದಲ್ಲಿ 300ಕ್ಕೂ ಹೆಚ್ಚು ಕಲೆಹಾಕಿದ ಹೊರತಾಗಿಯೂ ಭಾರತ ಸೋಲುಂಡಿತ್ತು. ಆರಂಭದಲ್ಲಿ ನಿಧಾನಗತಿಯ ಬ್ಯಾಟಿಂಗ್ ಹಾಗೂ ಕೇವಲ 5 ಬೌಲರ್ಗಳೊಂದಿಗೆ ಕಣಕ್ಕಿಳಿದಿದ್ದು ಭಾರತಕ್ಕೆ ಮುಳುವಾಗಿತ್ತು. ಈ ಪಂದ್ಯದಲ್ಲಿ ವಿಭಿನ್ನ ರಣತಂತ್ರದೊಂದಿಗೆ ಭಾರತ ಕಣಕ್ಕಿಳಿದಿದ್ದು, ಆರಂಭಿಕರಾದ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಮೇಲೆ ಹೆಚ್ಚಿನ ಒತ್ತಡವಿದೆ. ಹಿರಿಯರ ಅನುಪಸ್ಥಿತಿಯಲ್ಲಿ ಬೌಲಿಂಗ್ ದಾಳಿಯ ಹೊಣೆ ಹೊತ್ತಿರುವ ಅಶ್ರ್ದೀಪ್, ಉಮ್ರಾನ್ ಹಾಗೂ ದೀಪಕ್ ಚಹರ್ ಮೇಲೂ ಹೆಚ್ಚಿನ ನಿರೀಕ್ಷೆ ಇದೆ.
ತವರಿನಲ್ಲಿ ಕಳೆದ 13 ಏಕದಿನ ಪಂದ್ಯಗಳನ್ನು ಗೆದ್ದಿರುವ ನ್ಯೂಜಿಲೆಂಡ್ ತನ್ನ ಜಯದ ಓಟ ಮುಂದುವರಿಸಿ ಸರಣಿ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ. ಟಾಮ್ ಲೇಥಮ್, ಕೇನ್ ವಿಲಿಯಮ್ಸನ್ ಉತ್ತಮ ಲಯದಲ್ಲಿದ್ದಾರೆ. ಕಿವೀಸ್ ಈ ಪಂದ್ಯದಲ್ಲಿ ತನ್ನ ಬೌಲರ್ಗಳಿಂದ ಸುಧಾರಿತ ಪ್ರದರ್ಶನ ನಿರೀಕ್ಷೆ ಮಾಡುತ್ತಿದೆ. ಹ್ಯಾಮಿಲ್ಟನ್ನ ಸೆಡ್ಡನ್ ಪಾರ್ಕ್ ಬ್ಯಾಟಿಂಗ್ ಸ್ನೇಹಿ ಎನಿಸಿದ್ದು ಮತ್ತೊಂದು ದೊಡ್ಡ ಮೊತ್ತದ ಪಂದ್ಯಕ್ಕೆ ಸಾಕ್ಷಿಯಾಗಬಹುದು.
ತಂಡಗಳು ಹೀಗಿವೆ ನೋಡಿ
ನ್ಯೂಜಿಲೆಂಡ್ ತಂಡ: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್(ನಾಯಕ), ಡೇರಲ್ ಮಿಚೆಲ್, ಟಾಮ್ ಲೇಥಮ್(ವಿಕೆಟ್ ಕೀಪರ್), ಗ್ಲೆನ್ ಫಿಲಿಫ್ಸ್, ಮಿಚೆಲ್ ಸ್ಯಾಂಟ್ನರ್, ಮೈಕಲ್ ಬ್ರಾಸ್ವೆಲ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗ್ಯೂಸನ್.
ಭಾರತ ತಂಡ: ಶಿಖರ್ ಧವನ್(ನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್, ಉಮ್ರಾನ್ ಮಲಿಕ್, ಆರ್ಶದೀಪ್ ಸಿಂಗ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.