
ಜೋಹಾನ್ಸ್ಬರ್ಗ್(ಜ.03): ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾಗೆ (Team India ಆರಂಭಿಕ ಆಘಾತ ಎದುರಾಗಿದೆ. ಮೊದಲ ದಿನದಾಟದ ಲಂಚ್ ಬ್ರೇಕ್ ವೇಳೆಗೆ ಭಾರತ ಕ್ರಿಕೆಟ್ ತಂಡವು ಮೂರು ವಿಕೆಟ್ ಕಳೆದುಕೊಂಡು 53 ರನ್ ಬಾರಿಸಿದ್ದು, ಕೊಂಚ ಒತ್ತಡಕ್ಕೆ ಒಳಗಾಗಿದೆ. ಮತ್ತೊಮ್ಮೆ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯ ರಹಾನೆ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದ್ದಾರೆ
ಇಲ್ಲಿನ ವಾಂಡರರ್ಸ್ ಮೈದಾನದಲ್ಲಿ ಆರಂಭವಾದ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ (Virat Kohli) ಅನುಪಸ್ಥಿತಿಯಲ್ಲಿ ಕೆ.ಎಲ್. ರಾಹುಲ್ (KL Rahul) ಭಾರತ ಟೆಸ್ಟ್ ತಂಡವನ್ನು ಮೊದಲ ಬಾರಿಗೆ ಮುನ್ನಡೆಸುತ್ತಿದ್ದಾರೆ. ಸೆಂಚೂರಿಯನ್ನಲ್ಲಿ ಕನ್ನಡದ ಜೋಡಿಯಾದ ಮಯಾಂಕ್ ಅಗರ್ವಾಲ್ (Mayank Agarwal) ಹಾಗೂ ಕೆ.ಎಲ್. ರಾಹುಲ್ ಶತಕದ ಜತೆಯಾಟ ನಿಭಾಯಿಸಿದ್ದರು. ಅಂತಹದ್ದೇ ಇನಿಂಗ್ಸ್ ಆಡುವ ಹುರುಪಿನೊಂದಿಗೆ ಕಣಕ್ಕಿಳಿದ ಈ ಜೋಡಿಯನ್ನು ಹೆಚ್ಚುಹೊತ್ತು ಕ್ರೀಸ್ನಲ್ಲಿರಲು ದಕ್ಷಿಣ ಆಫ್ರಿಕಾ ವೇಗಿ ಮಾರ್ಕೊ ಜಾನ್ಸನ್ (Marco Jansen) ಅವಕಾಶ ನೀಡಲಿಲ್ಲ. ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಈ ಜೋಡಿ 14 ಓವರ್ ಎದುರಿಸಿ 36 ರನ್ ಗಳಿಸಿತ್ತು. ಈ ವೇಳೆ ದಾಳಿಗಿಳಿದ ಮಾರ್ಕೊ ಜಾನ್ಸನ್, ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಮಯಾಂಕ್ ಅಗರ್ವಾಲ್ ಅವರನ್ನು ಬಲಿ ಪಡೆಯುವಲ್ಲಿ ಯಶಸ್ವಿಯಾದರು. ಮಯಾಂಕ್ ಅಗರ್ವಾಲ್ 37 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 26 ರನ್ ಬಾರಿಸಿ ವಿಕೆಟ್ ಕೀಪರ್ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.
ಪೂಜಾರ-ರಹಾನೆ ಮತ್ತೆ ಫೇಲ್: ಕಳೆದ ಕೆಲ ದಿನಗಳಿಂದ ದಯನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ ಹಾಗೂ ಅಜಿಂಕ್ಯ ರಹಾನೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸುವ ಮೂಲಕ ತಮ್ಮ ಕಳಪೆ ಫಾರ್ಮ್ ಮುಂದುವರೆಸಿದ್ದಾರೆ. ಚೇತೇಶ್ವರ್ ಪೂಜಾರ 33 ಎಸೆತಗಳನ್ನು ಎದುರಿಸಿ ಕೇವಲ 3 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಕ್ರೀಸ್ಗಿಳಿದ ಅಜಿಂಕ್ಯ ರಹಾನೆ ಒಲಿವಿಯರ್ ಬೌಲಿಂಗ್ನಲ್ಲಿ ಕೀಗನ್ ಪೀಟರ್ಸನ್ಗೆ ಕ್ಯಾಚಿತ್ತು ಶೂನ್ಯ ಸುತ್ತಿ ಪೆವಿಲಿಯನ್ ಪೆರೆಡ್ ನಡೆಸಿದರು. ಇದೇ ರೀತಿ ಎರಡನೇ ಇನಿಂಗ್ಸ್ನಲ್ಲೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರೆ, ಮೂರನೇ ಟೆಸ್ಟ್ನಲ್ಲಿ ಈ ಇಬ್ಬರು ಬ್ಯಾಟರ್ಗಳು ಬೆಂಚ್ ಕಾಯಿಸುವ ಪರಿಸ್ಥಿತಿ ಬರುವ ಸಾಧ್ಯತೆಯಿದೆ.
Ind vs SA: ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ, ಕೆ.ಎಲ್. ರಾಹುಲ್ ಟೀಂ ಇಂಡಿಯಾ ನಾಯಕ..!
ಎಚ್ಚರಿಕೆಯ ಬ್ಯಾಟಿಂಗ್ ನಿಭಾಯಿಸುತ್ತಿರುವ ರಾಹುಲ್: ಮೊದಲ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಕೆ.ಎಲ್. ರಾಹುಲ್ ಇದೀಗ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿ ನಾಯಕನಾಗಿ ರಾಹುಲ್ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸುತ್ತಿದ್ದಾರೆ. ರಾಹುಲ್ 74 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ 19 ರನ್ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇನ್ನು ಮತ್ತೊಂದು ತುದಿಯಲ್ಲಿ ಕೊಹ್ಲಿ ಬದಲಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನಗಿಟ್ಟಿಸಿಕೊಂಡಿರುವ ಹನುಮ ವಿಹಾರಿ 12 ಎಸೆತಗಳಲ್ಲಿ 4 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.