
ತಿರುವನಂತಪುರ(ಸೆ.29): ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, 8 ವಿಕೆಟ್ಗಳ ಅಂತರದ ಸುಲಭ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಕ್ಯಾಪ್ಟನ್ ಕೂಲ್ ಎಂ ಎಸ್ ಧೋನಿ ಹೆಸರಿನಲ್ಲಿದ್ದ ಅಪರೂಪದ ದಾಖಲೆ ಇದೀಗ ರೋಹಿತ್ ಶರ್ಮಾ ಪಾಲಾಗಿದೆ.
ಹೌದು, ಕ್ಯಾಲೆಂಡರ್ ವರ್ಷವೊಂದರಲ್ಲಿ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಅತಿಹೆಚ್ಚು ಗೆಲುವು ದಾಖಲಿಸಿದ ಟೀಂ ಇಂಡಿಯಾ ನಾಯಕ ಎನ್ನುವ ದಾಖಲೆ ಇದೀಗ ರೋಹಿತ್ ಶರ್ಮಾ ಪಾಲಾಗಿದೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, 2022ರ ಕ್ಯಾಲೆಂಡರ್ ವರ್ಷದಲ್ಲಿ 16 ಗೆಲುವು ದಾಖಲಿಸಿದೆ. ಈ ಮೊದಲು 2016ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ 15 ಟಿ20 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದು ಇಲ್ಲಿಯವರೆಗಿನ ದಾಖಲೆಯಾಗಿತ್ತು. ಇದೀಗ ಆ ದಾಖಲೆಯನ್ನು ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಆರ್ಶದೀಪ್ ಸಿಂಗ್ ಟೀಂ ಇಂಡಿಯಾ ಗೆಲುವಿನ ರೂವಾರಿ:
ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ರೋಹಿತ್ ಶರ್ಮಾ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡಿದ ಟೀಂ ಇಂಡಿಯಾ ಬೌಲರ್ಗಳು, ಹರಿಣಗಳ ಬ್ಯಾಟರ್ಗಳನ್ನು ಆರಂಭದಲ್ಲೇ ಇನ್ನಿಲ್ಲದಂತೆ ಕಾಡಿದರು. ದೀಪಕ್ ಚಹರ್ ಮೊದಲ ಓವರ್ನಲ್ಲೇ ದಕ್ಷಿಣ ಆಫ್ರಿಕಾ ನಾಯಕ ತೆಂಬ ಬವುಮಾ ಅವರನ್ನು ಪೆವಿಲಿಯನ್ನಿಗಟ್ಟಿದರೆ, ಮರು ಓವರ್ನಲ್ಲಿ ಆರ್ಶದೀಪ್ ಸಿಂಗ್, ಕ್ವಿಂಟನ್ ಡಿ ಕಾಕ್ ಹಾಗೂ ರೌಸೋ ಅವರಿಗೆ ಪೆವಿಲಿಯನ್ ಹಾದಿ ತೋರಿಸಿದರು. ಇನ್ನು ಡೇವಿಡ್ ಮಿಲ್ಲರ್ ಕೂಡಾ ಆರ್ಶದೀಪ್ ಸಿಂಗ್ಗೆ ಮೂರನೇ ಬಲಿಯಾದರು. ಒಂದು ಹಂತದಲ್ಲಿ ದಕ್ಷಿಣ ಆಫ್ರಿಕಾ ತಂಡವು 9 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಐವರು ಬ್ಯಾಟರ್ಗಳು ಪೆವಿಲಿಯನ್ ಸೇರಿದ್ದರು.
T20 World Cup: ಜಸ್ಪ್ರೀತ್ ಬುಮ್ರಾ ಟಿ20 ವಿಶ್ವಕಪ್ನಿಂದ ಔಟ್
ಇನ್ನು ಮಧ್ಯಮ ಕ್ರಮಾಂಕದಲ್ಲಿ ಏಯ್ಡನ್ ಮಾರ್ಕ್ರಮ್(25) ಹಾಗೂ ವೇಯ್ನ್ ಪಾರ್ನೆಲ್(24) ಕೆಲಕಾಲ ನೆಲಕಚ್ಚಿ ಆಡುವ ಪ್ರಯತ್ನ ಮಾಡಿದರು. ಇನ್ನು ಕೊನೆಯಲ್ಲಿ ಕೇಶವ್ ಮಹರಾಜ್ ಸಮಯೋಚಿತ 41 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಲು ನೆರವಾದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡವು ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತ್ತು.
ಇನ್ನು ಹರಿಣಗಳ ಪಡೆ ನೀಡಿದ್ದ ಸಾಧಾರಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ, ಆರಂಭದಲ್ಲೇ ನಾಯಕ ರೋಹಿತ್ ಶರ್ಮಾ(೦) ಹಾಗೂ ವಿರಾಟ್ ಕೊಹ್ಲಿ(2) ವಿಕೆಟ್ ಕಳೆದುಕೊಂಡಿತಾದರೂ, ಮೂರನೇ ವಿಕೆಟ್ಗೆ ಸೂರ್ಯಕುಮಾರ್ ಯಾದವ್(50*) ಹಾಗೂ ಕೆ ಎಲ್ ರಾಹುಲ್(51*) ಮುರಿಯದ 93 ರನ್ಗಳ ಜತೆಯಾಟವಾಡುವ ಮೂಲಕ ತಂಡವನ್ನು ಭರ್ಜರಿಯಾಗಿಯೇ ಗೆಲುವಿನ ದಡ ಸೇರಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.