
ಕೊಲಂಬೊ: ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಟೀಂ ಇಂಡಿಯಾಗೆ ಗಾಯದ ಸಮಸ್ಯೆ ದೊಡ್ಡ ತಲೆನೋವಾಗಿದೆ. ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಬ್ಯಾಟರ್ ಸಾಯಿ ಸುದರ್ಶನ್ ಈಗಾಗಲೇ ಗಾಯದಿಂದಾಗಿ ಸರಣಿಯಿಂದ ಹೊರಬಿದ್ದಿದ್ದಾರೆ. ಈಗ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಕೂಡ ಗಾಯದ ಕಾರಣ ಇಡೀ ಸರಣಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.
ಇಂಗ್ಲೆಂಡ್ ಪ್ರವಾಸದ ವೇಳೆ ಸುಂದರ್ಗೆ ಹ್ಯಾಮ್ಸ್ಟ್ರಿಂಗ್ ಇಂಜುರಿ ಆಗಿತ್ತು. ಅದರಿಂದ ಅವರು ಇನ್ನೂ ಪೂರ್ತಿಯಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಮೊದಲ ಟೆಸ್ಟ್ನಿಂದ ಅವರನ್ನು ಕೈಬಿಡಲಾಗಿತ್ತು. ಎರಡನೇ ಟೆಸ್ಟ್ನಲ್ಲಿ ಆಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಬಿಸಿಸಿಐ ವೈದ್ಯಕೀಯ ತಂಡ ಮತ್ತು ಟೀಮ್ ಮ್ಯಾನೇಜ್ಮೆಂಟ್, ಸುಂದರ್ ಅವರನ್ನು ಆಡಿಸಿ ರಿಸ್ಕ್ ತೆಗೆದುಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಬಂದಿದೆ. ಸದ್ಯ ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿರುವ ಸುಂದರ್ ಬಗ್ಗೆ ಮುಂದಿನ ವಾರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.
ಈ ಮೊದಲು, ಕಾಲ್ಬೆರಳಿನ ಗಾಯದಿಂದಾಗಿ ಹೊರಗುಳಿದಿದ್ದ ಸಾಯಿ ಸುದರ್ಶನ್ ಬದಲಿಗೆ ಮುಂಬೈ ಬ್ಯಾಟರ್ ಸರ್ಫರಾಜ್ ಖಾನ್ರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಬದಲಿಗೆ ಜಮ್ಮು ಮತ್ತು ಕಾಶ್ಮೀರದ ವೇಗಿ ಆಕಿಬ್ ನಬಿಗೆ ಅವಕಾಶ ನೀಡಲಾಗಿತ್ತು.
ಆಗಸ್ಟ್ 15 ರಂದು ಗಾಲೆಯಲ್ಲಿ ಮೊದಲ ಟೆಸ್ಟ್ ಮತ್ತು ಆಗಸ್ಟ್ 23 ರಂದು ಕೊಲಂಬೊದಲ್ಲಿ ಎರಡನೇ ಟೆಸ್ಟ್ ಆರಂಭವಾಗಲಿದೆ. ಪ್ರಮುಖ ಆಟಗಾರರ ಗಾಯದ ಸಮಸ್ಯೆ ತಂಡಕ್ಕೆ ಸವಾಲಾಗಿದೆ. ಆದರೂ, ಶ್ರೀಲಂಕನ್ ಕ್ರಿಕೆಟ್ XI ವಿರುದ್ಧ ನಡೆದ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಅವರ ಶತಕದ (142) ನೆರವಿನಿಂದ ಭಾರತ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಇದು ನಾಯಕ ಶುಭಮನ್ ಗಿಲ್ ಮತ್ತು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.
ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್, ದೇವದತ್ ಪಡಿಕ್ಕಲ್, ಶುಭ್ಮನ್ ಗಿಲ್(ನಾಯಕ), ರಿಷಭ್ ಪಂತ್, ಸರ್ಫರಾಜ್ ಖಾನ್/ಧ್ರುವ್ ಜುರೆಲ್, ರವೀಂದ್ರ ಜಡೇಜಾ, ಸಾರಾನ್ಶ್ ಜೈನ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಗುರ್ನೂರ್ ಬ್ರಾರ್/ಪ್ರಸಿದ್ದ್ ಕೃಷ್ಣ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.