
ಮುಂಬೈ(ಡಿ.16): ವಿರಾಟ್ ಕೊಹ್ಲಿ (Virat Kohli) ನೇತೃತ್ವದ ಟೀಂ ಇಂಡಿಯಾ (Team India), ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ಗುರುವಾರ(ಡಿ.16) ಬೆಳಗ್ಗೆ ಮುಂಬೈನಿಂದ ದಕ್ಷಿಣ ಆಫ್ರಿಕಾದತ್ತ ವಿಮಾನದಲ್ಲಿ ಪ್ರಯಾಣ ಆರಂಭಿಸಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯು ಡಿಸೆಂಬರ್ 26ರಿಂದ ಆರಂಭವಾಗಲಿದೆ. ಇದಾದ ಬಳಿಕ ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಂ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದೀಗ ಟೀಂ ಇಂಡಿಯಾ ಆಟಗಾರರು, ದಕ್ಷಿಣ ಆಫ್ರಿಕಾ ಪ್ರವಾಸ ಮಾಡುತ್ತಿರುವ ಕೆಲವು ಫೋಟೋಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) (BCCI) ತಮ್ಮ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಟ್ವೀಟ್ ಮಾಡಿದೆ. ಭಾರತ ತಂಡವು ದಕ್ಷಿಣ ಆಫ್ರಿಕಾದ ಜೊಹಾನ್ಸ್ಬರ್ಗ್ಗೆ ಬಂದಿಳಿಯಲಿದೆ.
ಮುಂಬೈನಿಂದ ದಕ್ಷಿಣ ಆಫ್ರಿಕಾ ಪ್ರವಾಸ ತೆರಳುವುದಕ್ಕೂ (India Tour of South Africa) ಮುನ್ನ ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿ, ತಾವು ಟೆಸ್ಟ್ ಸರಣಿಯ ಮುಕ್ತಾಯದ ಬಳಿಕ ಏಕದಿನ ಸರಣಿಗೂ ತಂಡದ ಆಯ್ಕೆಗೆ ಲಭ್ಯವಿರುವುದಾಗಿ ಸ್ಪಷ್ಟಪಡಿಸಿದ್ದರು. ಇದಷ್ಟೇ ಅಲ್ಲದೇ ನನ್ನ ಹಾಗೂ ರೋಹಿತ್ ಶರ್ಮಾ ನಡುವೆ ಯಾವುದೇ ಮನಸ್ತಾಪವಿಲ್ಲ. ಕಳೆದೆರಡುವರೆ ವರ್ಷಗಳಿಂದಲೂ ಈ ವಿಚಾರವನ್ನು ಪುನರುಚ್ಚರಿಸಿ ಸಾಕಾಗಿ ಹೋಗಿದೆ. ನನ್ನ ಗುರಿ ಏನಿದ್ದರೂ ರೋಹಿತ್ ಶರ್ಮಾ ನಾಯಕತ್ವದಲ್ಲಿ, ರಾಹುಲ್ ದ್ರಾವಿಡ್ (Rahul Dravid) ಮಾರ್ಗದರ್ಶನದಲ್ಲಿ ತಂಡಕ್ಕೆ ಉತ್ತಮ ಕಾಣಿಕೆ ನೀಡುವುದಾಗಿದೆ ಎಂದು ಕೊಹ್ಲಿ ಹೇಳಿದ್ದಾರೆ. ಈ ಮೂಲಕ ಹಲವು ಗಾಳಿ ಸುದ್ದಿಗಳಿಗೆ ತೆರೆ ಎಳೆದಿದ್ದರು.
ಸ್ನಾಯು ಸೆಳೆತಕ್ಕೆ ಒಳಗಾಗಿರುವ ರೋಹಿತ್ ಶರ್ಮಾ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಅವರ ಅನುಪಸ್ಥಿತಿ ತಂಡವನ್ನು ಕಾಡಲಿದೆ ಎಂದು ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ರೋಹಿತ್ ಶರ್ಮಾ ಬದಲಿಗೆ ಪ್ರಿಯಾಂಕ್ ಪಾಂಚಲ್ ಭಾರತ ಕ್ರಿಕೆಟ್ ತಂಡ (Indian Cricket Team) ಕೂಡಿಕೊಂಡಿದ್ದಾರೆ.
Virat Kohli Press Conference: ಬಿಸಿಸಿಐ ಬಣ್ಣ ಬಯಲು ಮಾಡಿದ ಕಿಂಗ್ ಕೊಹ್ಲಿ..!
ರೋಹಿತ್ ಶರ್ಮಾ ಅವರ ಸಾಮರ್ಥ್ಯವನ್ನು ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಮಿಸ್ ಮಾಡಿಕೊಳ್ಳಲಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ತಾವೆಷ್ಟು ಉಪಯುಕ್ತ ಆಟಗಾರ ಎನ್ನುವುದನ್ನು ರೋಹಿತ್ ಶರ್ಮಾ, ಇಂಗ್ಲೆಂಡ್ ಪ್ರವಾಸದಲ್ಲಿ ಸಾಬೀತುಪಡಿಸಿದ್ದಾರೆ. ಆ ಸರಣಿಯಲ್ಲಿ ಆರಂಭಿಕರ ಜತೆಯಾಟ ನಮಗೆ ಸಾಕಷ್ಟು ಮಹತ್ವದ್ದಾಗಿತ್ತು. ಸಹಜವಾಗಿಯೇ ಅವರ ಅನುಭವ, ಕೌಶಲ್ಯ ಮುಂತಾದವುಗಳನ್ನು ತಂಡ ಮಿಸ್ ಮಾಡಿಕೊಳ್ಳಲಿದೆ ಎಂದು ವಿರಾಟ್ ಕೊಹ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ್ದರು.
ಹೀಗಾಗಿ ಮಯಾಂಕ್ ಅಗರ್ವಾಲ್ (Mayank Agarwal) ಹಾಗೂ ಕೆ.ಎಲ್. ರಾಹುಲ್ (KL Rahul) ಅವರ ಪಾಲಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ಉತ್ತಮ ಆರಂಭ ಒದಗಿಸಿಕೊಡುವ ಮೂಲಕ ತಂಡಕ್ಕೆ ಆಸರೆಯಾಗುವ ವಿಶ್ವಾಸವಿದೆ ಎಂದು ನಾಯಕ ಕೊಹ್ಲಿ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆಯಾದ ಭಾರತ ಟೆಸ್ಟ್ ತಂಡ ಹೀಗಿದೆ ನೋಡಿ:
ವಿರಾಟ್ ಕೊಹ್ಲಿ(ನಾಯಕ), ಪ್ರಿಯಾಂಕ್ ಪಾಂಚಲ್, ಕೆ. ಎಲ್. ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ವೃದ್ದಿಮಾನ್ ಸಾಹ(ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.