
ಬೆಂಗಳೂರು: ಆಫ್ಘಾನಿಸ್ತಾನ ಎದುರು ಇದೇ ಸೆಪ್ಟೆಂಬರ್ 13ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದೆ. ನಿನ್ನೆಯಷ್ಟೇ ಬಿಸಿಸಿಐ ಆಯ್ಕೆ ಸಮಿತಿಯು ಆಫ್ಘಾನಿಸ್ತಾನ ಎದುರಿನ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಿದ್ದು, ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್, ಜಸ್ಪ್ರೀತ್ ಬುಮ್ರಾ, ಸೇರಿದಂತೆ ಹಲವು ಕ್ರಿಕೆಟಿಗರು ಕಮ್ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಜಿಂಬಾಬ್ವೆ ಎದುರಿನ ಟಿ20 ಸರಣಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ಎಂಟು ಪ್ರಮುಖ ಆಟಗಾರರು ಇದೀಗ ಆಫ್ಘಾನ್ ಎದುರಿನ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಈ ಪೈಕಿ ಓರ್ವ ಸ್ಟಾರ್ ಕ್ರಿಕೆಟಿಗನ ವೃತ್ತಿಬದುಕು ಮುಗಿದೇ ಹೋಯಿತಾ ಎನ್ನುವ ಅನುಮಾನ ಕಾಡಲಾರಂಭಿಸಿದೆ.
ಜಿಂಬಾಬ್ವೆ ಎದುರಿನ ಟಿ20 ಸರಣಿಯಲ್ಲಿ 8 ಯುವ ಆಟಗಾರರಿಗೆ ಬಿಸಿಸಿಐ ಆಯ್ಕೆ ಸಮಿತಿ ಮಣೆ ಹಾಕಿತ್ತು. ಆದರೆ ಇದೀಗ ಸೀನಿಯರ್ ಆಟಗಾರರು ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದರಿಂದ ಈ 8 ಯುವ ಆಟಗಾರರನ್ನು ತಂಡದಿಂದ ಕೈಬಿಡಲಾಗಿದೆ. ವೇಗದ ಬೌಲರ್ಗಳಾದ ಮಯಾಂಕ್ ಯಾದವ್, ಪ್ರಿನ್ಸ್ ಯಾದವ್, ಯಶ್ ಠಾಕೂರ್ ಹಾಗೂ ಅಶೋಕ್ ಶರ್ಮಾ ಅವರನ್ನು ಕೈಬಿಡಲಾಗಿದೆ. ಈ ನಾಲ್ವರು ಯುವ ವೇಗಿಗಳು ಜಿಂಬಾಬ್ವೆ ಎದುರಿನ ಟಿ20 ಸರಣಿಯಲ್ಲಿ ಸ್ಥಾನ ಪಡೆದಿದ್ದರು. ಇನ್ನು ಆಲ್ರೌಂಡರ್ಗಳಾದ ಸೂರ್ಯಾನ್ಶ್ ಶೆಡ್ಗೆ, ಹರ್ಷ್ ದುಬೆ ಅವರನ್ನು ಸಹ ತಂಡದಿಂದ ಕೈಬಿಡಲಾಗಿದೆ. ಇದರ ಜತೆಗೆ ಸಂಜು ಸ್ಯಾಮ್ಸನ್ ಕಮ್ಬ್ಯಾಕ್ ಮಾಡಿರುವುದರಿಂದ ವಿಕೆಟ್ ಕೀಪರ್ ಬ್ಯಾಟರ್ ಪ್ರಭ್ಸಿಮ್ರನ್ ಸಿಂಗ್ ಅವರನ್ನು ಕೈಬಿಡಲಾಗಿದೆ.
2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಮುಕ್ತಾಯದ ಬಳಿಕ ಭಾರತ ಟಿ20 ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿರುವ ರಿಂಕು ಸಿಂಗ್, ಇತ್ತೀಚಿಗಿನ ದಿನಗಳಲ್ಲಿ ಸ್ಥಿರ ಪ್ರದರ್ಶನ ತೋರಲು ಪದೇ ಪದೇ ವಿಫಲವಾಗುತ್ತಿದ್ದಾರೆ. ಇದೇ ಕಾರಣಕ್ಕೆ ಇದೀಗ ಆಫ್ಘಾನಿಸ್ತಾನ ಎದುರಿನ ಸರಣಿಯಿಂದ ರಿಂಕು ಅವರನ್ನು ಕೈಬಿಡಲಾಗಿದೆ. ಹೀಗಾಗಿ ಭಾರತ ಟಿ20 ತಂಡದಲ್ಲಿ ರಿಂಕು ಕ್ರಿಕೆಟ್ ವೃತ್ತಿಬದುಕು ಮುಗಿಯಿತಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.
ಇನ್ನು ಆಫ್ಘಾನಿಸ್ತಾನ ಎದುರಿನ ಸರಣಿಗೆ ಭಾರತ ತಂಡದಲ್ಲಿ ಹಲವು ಸ್ಟಾರ್ ಕ್ರಿಕೆಟಿಗರು ಕಮ್ಬ್ಯಾಕ್ ಮಾಡಿದ್ದಾರೆ. ಈ ಪೈಕಿ, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್ ಕಮ್ಬ್ಯಾಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಜತೆಗೆ ಅಕ್ಷರ್ ಪಟೇಲ್ ಹಾಗೂ ವರುಣ್ ಚಕ್ರವರ್ತಿ ಕೂಡಾ ಭಾರತ ತಂಡಕ್ಕೆ ಎಂಟ್ರಿಕೊಟ್ಟಿದ್ದಾರೆ. ಇದಷ್ಟೇ ಅಲ್ಲದೇ ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಕೂಡಾ ಭಾರತ ತಂಡಕ್ಕೆ ವಾಪಾಸ್ಸಾತಿ ಮಾಡಿದ್ದಾರೆ.
ಶ್ರೇಯಸ್ ಅಯ್ಯರ್(ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ತಿಲಕ್ ವರ್ಮಾ(ಉಪನಾಯಕ), ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ ವರುಣ್ ಚಕ್ರವರ್ತಿ, ರವಿ ಬಿಷ್ಣೋಯಿ, ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.