
ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಭಾನುವಾರ ಆರಂಭವಾಗಲಿದ್ದು, ಭಾರತದ ಪ್ಲೇಯಿಂಗ್ XIನಲ್ಲಿ ಯಾರೆಲ್ಲಾ ಇರುತ್ತಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಕೆಎಲ್ ರಾಹುಲ್ ನಾಯಕತ್ವದ ತಂಡದಲ್ಲಿ ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ, ಅವರ ಬದಲಿಗೆ ಯಾರು ತಂಡಕ್ಕೆ ಬರುತ್ತಾರೆ ಎಂದು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.
ನಾಯಕ ಶುಭಮನ್ ಗಿಲ್ ಅನುಪಸ್ಥಿತಿಯಲ್ಲಿ, ಮಾಜಿ ನಾಯಕ ರೋಹಿತ್ ಶರ್ಮಾ ಜೊತೆ ಯಶಸ್ವಿ ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯುವ ನಿರೀಕ್ಷೆಯಿದೆ. ಭಾರತದ ಪರ ಯಶಸ್ವಿ ಜೈಸ್ವಾಲ್ ಇದುವರೆಗೆ ಕೇವಲ ಒಂದೇ ಒಂದು ಏಕದಿನ ಪಂದ್ಯವನ್ನು ಆಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ತಂಡದಲ್ಲಿದ್ದರೂ, ಯಶಸ್ವಿ ಜೈಸ್ವಾಲ್ಗೆ ಯಾವುದೇ ಪಂದ್ಯದಲ್ಲೂ ಆಡುವ ಅವಕಾಶ ಸಿಕ್ಕಿರಲಿಲ್ಲ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿದ್ದ ವಿರಾಟ್ ಕೊಹ್ಲಿ, ಮೂರನೇ ಏಕದಿನದಲ್ಲಿ ಅರ್ಧಶತಕ ಬಾರಿಸಿ ಫಾರ್ಮ್ಗೆ ಮರಳಿದ್ದರು. ಕೊಹ್ಲಿಯೇ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಯಾರು ಆಡುತ್ತಾರೆ ಎಂಬ ಕುತೂಹಲವಿದೆ. ತಿಲಕ್ ವರ್ಮಾ ಅಥವಾ ರಿಷಭ್ ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಆಡಬಹುದು ಎಂದು ನಿರೀಕ್ಷಿಸಲಾಗಿದೆ. ಈ ವರ್ಷ ಇಬ್ಬರೂ ಭಾರತದ ಪರ ಏಕದಿನ ಪಂದ್ಯಗಳನ್ನು ಆಡಿಲ್ಲ. ಆದರೆ, ನಾಯಕ ರಾಹುಲ್ ಕೀಪರ್ ಆಗಿ ತಂಡದಲ್ಲಿರುವುದರಿಂದ ರಿಷಭ್ ಪಂತ್ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ.
ರಾಹುಲ್ ಐದನೇ ಕ್ರಮಾಂಕದಲ್ಲಿ ಆಡಿದರೆ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಆಲ್ರೌಂಡರ್ಗಳಾಗಿ ತಂಡದಲ್ಲಿರುತ್ತಾರೆ. ಕುಲ್ದೀಪ್ ಯಾದವ್ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಆಡಿದರೆ, ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಹರ್ಷಿತ್ ರಾಣಾ ಮತ್ತು ಅರ್ಷದೀಪ್ ಸಿಂಗ್ ವೇಗಿಗಳಾಗಿ ಕಣಕ್ಕಿಳಿಯಲಿದ್ದಾರೆ. ಪ್ರಸಿದ್ಧ್ ಕೃಷ್ಣ ಕೂಡ ತಂಡದಲ್ಲಿದ್ದರೂ, ಹರ್ಷಿತ್ ರಾಣಾಗೆ ಆಡುವ XI ರಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ.
ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಭಾರತ ತಂಡವು ತವರಿನಲ್ಲೇ ದಕ್ಷಿಣ ಆಫ್ರಿಕಾ ಎದುರು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೈಟ್ವಾಷ್ ಆಗುವ ಮೂಲಕ ಮುಖಭಂಗ ಅನುಭವಿಸಿದೆ. ಇದೀಗ ಏಕದಿನ ಸರಣಿ ಗೆದ್ದು ಹರಿಣಗಳಿಗೆ ತಿರುಗೇಟು ನೀಡಲು ಟೀಂ ಇಂಡಿಯಾ ಸಜ್ಜಾಗಿದೆ. ಇನ್ನೊಂದೆಡೆ ಬುಮ್ರಾ, ಸಿರಾಜ್ ಅನುಪಸ್ಥಿತಿಯಲ್ಲಿ ಅನನುಭವಿ ವೇಗದ ಪಡೆ ದಕ್ಷಿಣ ಆಫ್ರಿಕಾ ಬ್ಯಾಟರ್ಗಳನ್ನು ಹೇಗೆ ಕಟ್ಟಿಹಾಕಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.