
ಮುಂಬೈ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ಕ್ರಿಕೆಟ್ ತಂಡ ಪ್ರಕಟವಾಗಿದ್ದು, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ತಂಡ ಕೂಡಿಕೊಂಡಿದ್ದಾರೆ. ಶುಭ್ಮನ್ ಗಿಲ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು, ಪಂತ್ ಉಪನಾಯಕನಾಗಿ ಕಮ್ಬ್ಯಾಕ್ ಮಾಡಿದ್ದಾರೆ. ಆದರೆ ಇಬ್ಬರು ಅನುಭವಿ ಕ್ರಿಕೆಟ್ ವೃತ್ತಿಬದುಕು ಕೊನೆಯಾಯಿತಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.
ರಿಷಭ್ ಪಂತ್, ಇಂಗ್ಲೆಂಡ್ ಪ್ರವಾಸದಲ್ಲಿ ನಾಲ್ಕನೇ ಟೆಸ್ಟ್ ವೇಳೆ ಪಾದದ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಇಂಗ್ಲೆಂಡ್ ಎದುರಿನ ಐದನೇ ಟೆಸ್ಟ್ ಹಾಗೂ ತವರಿನಲ್ಲಿ ವೆಸ್ಟ್ ಇಂಡೀಸ್ ಎದುರಿನ ಎರಡು ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದರು. ಇದೀಗ ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು, ಬಲಿಷ್ಠ ಭಾರತ ತಂಡವನ್ನು ಆಯ್ಕೆ ಮಾಡಿದೆ. ಇನ್ನು ವೆಸ್ಟ್ ಇಂಡೀಸ್ ಎದುರಿನ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ವೇಗಿ ಪ್ರಸಿದ್ದ್ ಕೃಷ್ಣ ಹಾಗೂ ಎನ್ ಜಗದೀಶನ್ ಅವರನ್ನು ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ರಿಷಭ್ ಪಂತ್ ಹಾಗೂ ಆಕಾಶ್ದೀಪ್ ತಂಡ ಕೂಡಿಕೊಂಡಿದ್ದಾರೆ.
ಇನ್ನು ಇತ್ತೀಚೆಗೆ ರಣಜಿ ಟ್ರೋಫಿ ಟೂರ್ನಿಯಲ್ಲಿ ಅನುಭವಿ ವೇಗಿ ಮೊಹಮ್ಮದ್ ಶಮಿ ಮಾರಕ ದಾಳಿ ನಡೆಸುವ ಮೂಲಕ ತಾವು ಸಂಪೂರ್ಣ ಫಿಟ್ ಆಗಿದ್ದು, ಆಯ್ಕೆಗೂ ಲಭ್ಯವಿದ್ದೇವೆ ಎನ್ನುವ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಹೀಗಿದ್ದೂ ಶಮಿ ಕಡೆಗಣಿಸಲಾಗಿದೆ. ಇನ್ನು ಕರ್ನಾಟಕ ಪರ ರಣಜಿ ಟ್ರೋಫಿ ಟೂರ್ನಿಯಲ್ಲಿ ಶತಕ ಹಾಗೂ ದ್ವಿಶತಕ ಸಿಡಿಸಿ ಮಿಂಚಿರುವ ಕರುಣ್ ನಾಯರ್ ಅವರನ್ನು ಮತ್ತೊಮ್ಮೆ ಆಯ್ಕೆ ಸಮಿತಿ ಕಡೆಗಣಿಸಿದೆ. ಇದನ್ನೆಲ್ಲಾ ಗಮನಿಸಿದರೇ, ಈ ಇಬ್ಬರು ಕ್ರಿಕೆಟಿಗರ ವೃತ್ತಿ ಬದುಕು ಮುಗಿಯಿತಾ ಎನ್ನುವ ಪ್ರಶ್ನೆ ಕಾಡಲಾರಂಭಿಸಿದೆ.
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯವು ನವೆಂಬರ್ 14ರಂದು ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.
ಶುಭ್ಮನ್ ಗಿಲ್(ನಾಯಕ), ರಿಷಭ್ ಪಂತ್(ಉಪನಾಯಕ&ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್ದೀಪ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.