
ಬೆಂಗಳೂರು(ಏ.20): 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 31ನೇ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಲಖನೌ ಸೂಪರ್ ಜೈಂಟ್ಸ್ ಎದುರು 18 ರನ್ಗಳ ಅಂತರದ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ಆರ್ಸಿಬಿ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.
ಈ ಪಂದ್ಯಕ್ಕೂ ಮುನ್ನ ಹಿಂದಿನ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಲಯದೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದವು. ಆರ್ಸಿಬಿ ಎದುರು ಟಾಸ್ ಗೆದ್ದ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ದೊಡ್ಡ ಮೊತ್ತ ಕಲೆಹಾಕುವ ನಿರೀಕ್ಷೆಯೊಂದಿಗೆ ಕಣಕ್ಕಿಳಿದಿದ್ದ ಆರ್ಸಿಬಿ ತಂಡಕ್ಕೆ ಮೊದಲ ಓವರ್ನಲ್ಲೇ ದುಸ್ಮಂತ ಚಮೀರಾ ಶಾಕ್ ನೀಡಿದರು. ಅನೂಜ್ ರಾವತ್ ಹಾಗೂ ವಿರಾಟ್ ಕೊಹ್ಲಿಯನ್ನು ಮೊದಲ ಓವರ್ನಲ್ಲೇ ಪೆವಿಲಿಯನ್ನಿಗಟ್ಟುವ ಮೂಲಕ ಆರ್ಸಿಬಿ ತಂಡಕ್ಕೆ ಆಘಾತ ನೀಡಿದರು. ಇನ್ನು ಗ್ಲೆನ್ ಮ್ಯಾಕ್ಸ್ವೆಲ್ ಆರ್ಸಿಬಿ ತಂಡಕ್ಕೆ ಕೊಂಚ ಆಸರೆಯಾಗಲು ಯತ್ನಿಸಿದರಾದರು, ಕೃನಾಲ್ ಪಾಂಡ್ಯ ಅವರನ್ನು ಹೆಚ್ಚು ಹೊತ್ತು ಕ್ರೀಸ್ನಲ್ಲಿರಲು ಅವಕಾಶ ನೀಡಲಿಲ್ಲ.
ಕೇವಲ 62 ರನ್ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಆರ್ಸಿಬಿ ತಂಡಕ್ಕೆ ನಾಯಕ ಫಾಫ್ ಡು ಪ್ಲೆಸಿಸ್ ಆಸರೆಯಾದರು. ಫಾಫ್ ಕೇವಲ 64 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 96 ರನ್ ಬಾರಿಸಿ, ಕೇವಲ 4 ರನ್ಗಳ ಅಂತರದಲ್ಲಿ ಚೊಚ್ಚಲ ಐಪಿಎಲ್ ಶತಕದಿಂದ ವಂಚಿತರಾದರು. ಶಾಬಾಜ್ ಅಹಮ್ಮದ್ ಹಾಗೂ ದಿನೇಶ್ ಕಾರ್ತಿಕ್ ಬಾರಿಸಿದ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತ್ತು.
ಇನ್ನು ಈ ಸವಾಲಿನ ಗುರಿ ಬೆನ್ನತ್ತಿದ ಲಖನೌ ಸೂಪರ್ ಜೈಂಟ್ಸ್ ತಂಡವು ಆರಂಭದಲ್ಲೇ ಕ್ವಿಂಟನ್ ಡಿ ಕಾಕ್ ಹಾಗೂ ಮನೀಶ್ ಪಾಂಡೆ ವಿಕೆಟ್ ಕಳೆದುಕೊಂಡಿತು. ನಾಯಕ ಕೆ.ಎಲ್. ರಾಹುಲ್(30) ಹಾಗೂ ಕೃನಾಲ್ ಪಾಂಡ್ಯ(42) ಸ್ಪೋಟಕ ಬ್ಯಾಟಿಂಗ್ ಮೂಲಕ ರನ್ ವೇಗಕ್ಕೆ ಚುರುಕು ಮುಟ್ಟಿಸಲು ಯತ್ನಿಸಿದರು. ಆದರೆ ಹರ್ಷಲ್ ಪಟೇಲ್ ಹಾಗೂ ಜೋಶ್ ಹೇಜಲ್ವುಡ್ ಮಾರಕ ದಾಳಿಗೆ ತತ್ತರಿಸಿ 8 ವಿಕೆಟ್ ಕಳೆದುಕೊಂಡು 163 ರನ್ ಗಳಿಸಲಷ್ಟೇ ಶಕ್ತವಾಯಿತು. ಆರ್ಸಿಬಿ ವರ್ಸಸ್ ಲಖನೌ ನಡುವಿನ ಪಂದ್ಯವನ್ನು ಕೆಜಿಎಫ್-2 ಚಿತ್ರದ ನಟ ನಟಿಯರಾದ ಸಂಜಯ್ ದತ್, ರವೀನಾ ಟಂಡನ್ ಸೇರಿದಂತೆ ಹಲವು ಸಿನಿ ತಾರೆಯರು ಮೈದಾನಕ್ಕೆ ಬಂದು ಆರ್ಸಿಬಿ ತಂಡವನ್ನು ಬೆಂಬಲಿಸಿದರು. ಲಖನೌ ಎದುರಿನ ಪಂದ್ಯಕ್ಕೂ ಮುನ್ನ ಆರ್ಸಿಬಿ ಆಟಗಾರರು ಕೆಜಿಎಫ್ ಸಿನೆಮಾ ನೋಡಿದ್ದರಿಂದಲೇ ಫಾಫ್ ಪಡೆ ಭರ್ಜರಿ ಗೆಲುವು ದಾಖಲಿಸಿತು ಎನ್ನುವ ಮಾತುಗಳು ಕೇಳಿ ಬಂದಿವೆ.
ಆರ್ಸಿಬಿ ಹಾಗೂ ಲಖನೌ ತಂಡಗಳ ನಡುವಿನ ಪಂದ್ಯ ಮುಕ್ತಾಯದ ಬಳಿಕ ಈ 10 ಮೀಮ್ಸ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.