
ನವದೆಹಲಿ(ಏ.24): ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್ ಹಾಗೂ ರಶೀದ್ ಖಾನ್ ಸ್ಪೋಟಕ ಬ್ಯಾಟಿಂಗ್ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟಾನ್ಸ್ ಎದುರು 4 ರನ್ ರೋಚಕ ಜಯ ಸಾಧಿಸಿದೆ. ಗೆಲ್ಲಲು 225 ರನ್ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು 8 ವಿಕೆಟ್ ಕಳೆದುಕೊಂಡು 220 ರನ್ ಗಳಿಸಲಷ್ಟೇ ಶಕ್ತವಾಯಿತು.
ಗೆಲ್ಲಲು 225 ರನ್ಗಳ ಕಠಿಣ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಎರಡನೇ ಓವರ್ನಲ್ಲೇ ನಾಯಕ ಶುಭ್ಮನ್ ಗಿಲ್(6) ವಿಕೆಟ್ ಕಳೆದುಕೊಂಡಿತು. ಆದರೆ ಎರಡನೇ ವಿಕೆಟ್ಗೆ ವೃದ್ದಿಮಾನ್ ಸಾಹ ಹಾಗೂ ಬಿ ಸಾಯಿ ಸುದರ್ಶನ್ ಕೇವಲ 49 ಎಸೆತಗಳಲ್ಲಿ 82 ರನ್ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ವೃದ್ದಿಮಾನ್ ಸಾಹ 39 ರನ್ ಗಳಿಸಿ ಕುಲ್ದೀಪ್ ಯಾದವ್ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಸಾಯಿ ಸುದರ್ಶನ್ ಕೇವಲ 39 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 65 ರನ್ ಬಾರಿಸಿ ರಸಿಕ್ ಸಲಾಮ್ಗೆ ವಿಕೆಟ್ ಒಪ್ಪಿಸಿದರು.
ಅಕ್ಷರ್-ಪಂತ್ ಸ್ಪೋಟಕ ಬ್ಯಾಟಿಂಗ್: ಗುಜರಾತ್ಗೆ ಕಠಿಣ ಗುರಿ ನೀಡಿದ ಡೆಲ್ಲಿ ಕ್ಯಾಪಿಟಲ್ಸ್
ಕೈಕೊಟ್ಟ ಮಧ್ಯಮ ಕ್ರಮಾಂಕ: ಸಾಹ ಹಾಗೂ ಸುದರ್ಶನ ವಿಕೆಟ್ ಪತನವಾಗುತ್ತಿದ್ದಂತೆಯೇ ಗುಜರಾತ್ ಟೈಟಾನ್ಸ್ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು. ಓಮರ್ಝೈ ಒಂದು ರನ್ ಗಳಿಸಿದರೆ, ಶಾರುಕ್ ಖಾನ್ 8 ಹಾಗೂ ರಾಹುಲ್ ತೆವಾಟಿಯಾ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಗೆಲುವಿನ ಆಸೆ ಮೂಡಿಸಿದ ಮಿಲ್ಲರ್: ಒಂದು ಹಂತದಲ್ಲಿ 16 ಓವರ್ ಅಂತ್ಯದ ವೇಳೆಗೆ ಗುಜರಾತ್ ತಂಡವು 6 ವಿಕೆಟ್ ಕಳೆದುಕೊಂಡು 152 ರನ್ ಬಾರಿಸುವ ಮೂಲಕ ಸೋಲಿನತ್ತ ಮುಖಮಾಡಿತ್ತು. ಆದರೆ ಕೊನೆಯಲ್ಲಿ ಡೇವಿಡ್ ಮಿಲ್ಲರ್ ಕೇವಲ 23 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಸ್ಪೋಟಕ 55 ರನ್ ಸಿಡಿಸುವ ಮೂಲಕ ಗುಜರಾತ್ ಪಾಳಯದಲ್ಲಿ ಗೆಲುವಿನ ಆಸೆ ಮೂಡಿಸಿದ್ದರು.
ಇನ್ನು ಕೊನೆಯಲ್ಲಿ ರಶೀದ್ ಖಾನ್ 11 ಎಸೆತಗಳಲ್ಲಿ ಅಜೇಯ 21 ರನ್ ಸಿಡಿಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಕ್ಷರ್ ಪಟೇಲ್(66) ಹಾಗೂ ನಾಯಕ ರಿಷಭ್ ಪಂತ್(88*) ಸ್ಪೋಟಕ ಅರ್ಧಶತಕಗಳ ನೆರವಿನಿಂದ 4 ವಿಕೆಟ್ ಕಳೆದುಕೊಂಡು 224 ರನ್ ಕಲೆಹಾಕಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.