
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಶುಕ್ರವಾರ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ನಡೆಯುತ್ತಿರುವ ಸಿದ್ಧತೆ ಬಗ್ಗೆ ರಾಜ್ಯ ಸರ್ಕಾರ ನೇಮಿಸಿರುವ ತಜ್ಞರ ಸಮಿತಿಗೆ ಸಂಪೂರ್ಣ ಮಾಹಿತಿ ನೀಡಿತು.
2025ರ ಜೂ.4ರಂದು ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಘಟನೆಯಲ್ಲಿ 11 ಜನ ಮೃತಪಟ್ಟ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಮತ್ತೆ ಪಂದ್ಯಗಳ ಆಯೋಜನೆಗೆ ಸರ್ಕಾರ ನೇಮಿಸಿದ್ದ ನ್ಯಾ.ಕುನ್ಹಾ ಸಮಿತಿ ಹಲವು ಬದಲಾವಣೆಗಳನ್ನು ಮಾಡಲು ಶಿಫಾರಸು ಮಾಡಿತ್ತು. ಜೊತೆಗೆ ಕೆಎಸ್ಸಿಎನಲ್ಲಿ ಆಗಬೇಕಿರುವ ಬದಲಾವಣೆಗಳ ಮೇಲ್ವಿಚಾರಣೆಗೆ ಸರ್ಕಾರ, ಹಲವು ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ತಜ್ಞರ ಸಮಿತಿಯನ್ನೂ ರಚಿಸಿತ್ತು.
ಈ ಸಮಿತಿ ಶುಕ್ರವಾರ ಕ್ರೀಡಾಂಗಣಕ್ಕೆ ಆಗಮಿಸಿ, ಕೆಎಸ್ಸಿಎ ಕೈಗೊಂಡಿರುವ ಕೆಲಸಗಳನ್ನು ಪರಿಶೀಲಿಸಿತು. ಈ ವೇಳೆ ಆರ್ಸಿಬಿ ಸಿಬ್ಬಂದಿ ಕೂಡ ಇದ್ದರು. ಕ್ರೀಡಾಂಗಣಕ್ಕೆ ಆಗಮಿಸುವ ಪ್ರೇಕ್ಷಕರ ಸುರಕ್ಷತೆಗಾಗಿ ಗೇಟ್ಗಳ ಸಂಖ್ಯೆ ಹೆಚ್ಚಿಸಿರುವ ಕೆಎಸ್ಸಿಎ, ಪ್ರವೇಶ ದ್ವಾರಗಳನ್ನು 9 ಮೀ.ಗೆ ವಿಸ್ತರಿಸಿದೆ. ಅಲ್ಲದೇ ಇನ್ನೂ ಹಲವು ಕ್ರಮಗಳನ್ನು ಕೈಗೊಂಡಿದೆ. ಎಲ್ಲದರ ಮಾಹಿತಿ ಪಡೆದಿರುವ ತಜ್ಞರ ಸಮಿತಿ, ಸೋಮವಾರ ಪಂದ್ಯಗಳ ಆಯೋಜನೆಗೆ ಅಧಿಕೃತವಾಗಿ ಹಸಿರು ನಿಶಾನೆ ತೋರುವ ನಿರೀಕ್ಷೆ ಇದೆ.
ಈಗಾಗಲೇ ಐಪಿಎಲ್ನ ಆರಂಭಿಕ 20 ಪಂದ್ಯಗಳ ವೇಳಾಪಟ್ಟಿ ಪ್ರಕಟಗೊಂಡಿದ್ದು ಉದ್ಘಾಟನಾ ಪಂದ್ಯದ ಆತಿಥ್ಯವನ್ನು ಬೆಂಗಳೂರಿಗೆ ನೀಡಲಾಗಿದೆ. ಅಲ್ಲದೇ ಮೊದಲ ಹಂತದಲ್ಲಿ ಏ.5ರಂದು ಮತ್ತೊಂದು ಪಂದ್ಯ ನಿಗದಿಯಾಗಿದೆ. ಟೂರ್ನಿ ಆರಂಭಕ್ಕೂ ಮುನ್ನ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮ ಸಹ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಯಬೇಕಿದೆ. ಹೀಗಾಗಿ, ಮುಂದಿನ ವಾರದಲ್ಲಿ ಕೆಎಸ್ಸಿಎ ಕ್ರೀಡಾಂಗಣವನ್ನು ಆರ್ಸಿಬಿಗೆ ಬಿಟ್ಟುಕೊಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.