
ಹುಬ್ಬಳ್ಳಿ: 2025-26ನೇ ಸಾಲಿನ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಎದುರು ಜಮ್ಮು ಮತ್ತು ಕಾಶ್ಮೀರ ತಂಡವು ಮೊದಲ ಇನ್ನಿಂಗ್ಸ್ನಲ್ಲಿ ಬೃಹತ್ ಮೊತ್ತ ಕಲೆಹಾಕಿದೆ. ಮೊದಲ ಇನ್ನಿಂಗ್ಸ್ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವು 584 ರನ್ಗಳಿಗೆ ಸರ್ವಪತನ ಕಂಡಿದೆ. ಇದಾದ ಬಳಿಕ ಕರ್ನಾಟಕ ತಂಡವು ಎಚ್ಚರಿಕೆಯ ಆರಂಭವನ್ನು ಪಡೆದಿದೆ.
ಇಲ್ಲಿನ ರಾಜನಗರದ ಕೆಎಸ್ಸಿಎ ಮೈದಾನದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಎರಡನೇ ದಿನದಾಟದಂತ್ಯಕ್ಕೆ ಆರು ವಿಕೆಟ್ ಕಳೆದುಕೊಂಡು 527 ರನ್ ಬಾರಿಸಿತ್ತು. ಆದರೆ ಮೂರನೇ ದಿನದಾಟದಲ್ಲಿ ಮಾರಕ ದಾಳಿ ಸಂಘಟಿಸಿದ ಕರ್ನಾಟಕ ತಂಡವು, ಎದುರಾಳಿ ಪಡೆಯನ್ನು 584 ರನ್ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ.
ಮೊದಲ ದಿನವೇ ಜಮ್ಮು ಮತ್ತು ಕಾಶ್ಮೀರ ತಂಡದ ಪರ ಶುಭಂ ಪುಂಡಿರ್ ಶತಕ ಸಿಡಿಸಿದರೆ(121), ಆರಂಭಿಕ ಬ್ಯಾಟರ್ ಯಶ್ವೀರ್ ಹಸನ್(88), ನಾಯಕ ಪರಾಸ್ ದೋಗ್ರಾ(70), ಅಬ್ದುಲ್ ಸಮದ್(61), ವಿಕೆಟ್ ಕೀಪರ್ ಬ್ಯಾಟರ್ ಕನ್ನಯ್ಯ ವಧ್ವಾನ್(70) ಹಾಗೂ ಸಾಹಿಲ್ ಲೋಥ್ರಾ ಆಕರ್ಷಕ 72 ರನ್ ಸಿಡಿಸುವ ಮೂಲಕ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾದರು.
ಕರ್ನಾಟಕ ತಂಡದ ಪರ ಅನುಭವಿ ವೇಗಿ ಪ್ರಸಿದ್ದ್ ಕೃಷ್ಣ 98 ರನ್ ನೀಡಿ 5 ವಿಕೆಟ್ ಕಬಳಿಸುವ ಮೂಲಕ ಯಶಸ್ವಿ ಬೌಲರ್ ಎನಿಸಿಕೊಂಡರು. ಇನ್ನುಳಿದಂತೆ ಶಿಖರ್ ಶೆಟ್ಟಿ, ಶ್ರೇಯಸ್ ಗೋಪಾಲ್, ವಿದ್ಯಾಧರ್ ಪಾಟೀಲ್ ಹಾಗೂ ವೈಶಾಕ್ ವಿಜಯ್ಕುಮಾರ್ ತಲಾ ಒಂದೊಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.
ಇನ್ನು ಸವಾಲಿನ ಗುರಿ ಬೆನ್ನತ್ತಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ತಂಡವು ಎಚ್ಚರಿಕೆಯ ಆರಂಭ ಪಡೆದಿದೆ. ಟೀಂ ಇಂಡಿಯಾ ಕ್ರಿಕೆಟಿಗರಾದ ಕೆ ಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ರಾಜ್ಯ ತಂಡದ ಪರ ಕಣಕ್ಕಿಳಿದಿದ್ದು, ಮೊದಲ 11 ಓವರ್ ಅಂತ್ಯದ ವೇಳೆಗೆ 27 ರನ್ ಕಲೆಹಾಕಿದೆ. ಕೆ ಎಲ್ ರಾಹುಲ್(13) ಹಾಗೂ ಮಯಾಂಕ್ ಅಗರ್ವಾಲ್ 12 ರನ್ ಗಳಿಸಿ ಕ್ರೀಸ್ನಲ್ಲಿದ್ದು, ಕರ್ನಾಟಕ ತಂಡವು ಇನ್ನೂ 557 ರನ್ಗಳ ಹಿನ್ನಡೆಯಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.