2025ರ ಐಪಿಎಲ್ನಲ್ಲಿ ಹಾರ್ದಿಕ್ ಪಾಂಡ್ಯ ಒಂದು ಪಂದ್ಯಕ್ಕೆ ಬ್ಯಾನ್ ಆಗಿದ್ದು, ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಗಾಯದ ಸಮಸ್ಯೆಯಿಂದ ಜಸ್ಪ್ರೀತ್ ಬುಮ್ರಾ ಕೂಡಾ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಇದೇ ಮಾರ್ಚ್ 22ರಿಂದ ಆರಂಭವಾಗಲಿದೆ. ಇನ್ನು 5 ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಮಾರ್ಚ್ 23ರಂದು ಚೆನ್ನೈ ಸೂಪರ್ ಕಿಂಗ್ಸ್ ಎದುರು ತನ್ನ ಅಭಿಯಾನವನ್ನು ಆರಂಭಿಸಲಿದೆ. ಇನ್ನು ಮೊದಲ ಪಂದ್ಯವನ್ನು ಹಾರ್ದಿಕ್ ಪಾಂಡ್ಯ ಆಡುತ್ತಿಲ್ಲ. ಹೀಗಾಗಿ ಪಾಂಡ್ಯ ಅನುಪಸ್ಥಿತಿಯಲ್ಲಿ ಅನುಭವಿ ಆಟಗಾರ ಸೂರ್ಯಕುಮಾರ್ ಯಾದವ್, ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಈ ವಿಚಾರವನ್ನು ಇಂದು ಸ್ವತಃ ಹಾರ್ದಿಕ್ ಪಾಂಡ್ಯ ಬಹಿರಂಗ ಪಡಿಸಿದ್ದಾರೆ.
ಒಂದು ಪಂದ್ಯದ ಮಟ್ಟಿಗೆ ಹಾರ್ದಿಕ್ ಪಾಂಡ್ಯ ಬ್ಯಾನ್:
ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಮೂರು ಬಾರಿ ಸ್ಲೋ ಓವರ್ ರೇಟ್ ಮಾಡಿತ್ತು. ಈ ತಪ್ಪಿಗಾಗಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಇದೀಗ ಒಂದು ಪಂದ್ಯದ ಮಟ್ಟಿಗೆ ನಿಷೇಧಕ್ಕೆ ಗುರಿಯಾಗಿದ್ದಾರೆ. ಈ ಕಾರಣಕ್ಕಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಮೊದಲ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ಅಲಭ್ಯರಾಗಿದ್ದಾರೆ. ಹೀಗಾಗಿ ತಮ್ಮ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ಚೆನ್ನೈ ಸೂಪರ್ ಕಿಂಗ್ಸ್ ಎದುರು ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಪಾಂಡ್ಯ ಖಚಿತಪಡಿಸಿದ್ದಾರೆ.
ಇದನ್ನೂ ಓದಿ: ಐಪಿಎಲ್ನಲ್ಲಿ ಒಮ್ಮೆಯೂ ಕ್ಯಾಪ್ಟನ್ ಆಗದ ಟಾಪ್ 3 ದಿಗ್ಗಜ ಕ್ರಿಕೆಟಿಗರಿವರು!
ಜಸ್ಪ್ರೀತ್ ಬುಮ್ರಾ ಕೂಡಾ ಔಟ್:
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯಕ್ಕೆ ತಂಡದ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಕೂಡಾ ಅಲಭ್ಯರಾಗಿದ್ದಾರೆ. ಯಾಕೆಂದರೆ ಬುಮ್ರಾ ಗಾಯದ ಸಮಸ್ಯೆಯಿಂದಾಗಿ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ದೂರವೇ ಉಳಿದಿದ್ದಾರೆ. ಇತ್ತೀಚೆಗಷ್ಟೇ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೂ ಬುಮ್ರಾ ಅಲಭ್ಯರಾಗಿದ್ದರು. ಹೀಗಾಗಿ ಟೀಂ ಇಂಡಿಯಾದ ಇಬ್ಬರು ಸ್ಟಾರ್ ಆಟಗಾರರು ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯಕ್ಕೆ ಅಲಭ್ಯರಾಗಿರುವುದು ಮುಂಬೈ ಇಂಡಿಯನ್ಸ್ಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸುವ ಸಾಧ್ಯತೆಯಿದೆ. ಜಸ್ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ಪ್ರವಾಸದಲ್ಲಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳೆಯಲ್ಲಿಯೇ ಗಾಯಕ್ಕೆ ತುತ್ತಾಗಿದ್ದರು.
ಬುಮ್ರಾ ಅನುಪಸ್ಥಿತಿಯಲ್ಲಿ ಆರಂಭಿಕ ಕೆಲ ಪಂದ್ಯಗಳಲ್ಲಿ ದೀಪಕ್ ಚಹರ್, ಟ್ರೆಂಟ್ ಬೌಲ್ಟ್ ಹಾಗೂ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ವೇಗದ ಬೌಲಿಂಗ್ ಜವಾಬ್ದಾರಿ ಮುನ್ನಡೆಸಬೇಕಿದೆ.
ಇದನ್ನೂ ಓದಿ: IPL ಇತಿಹಾಸದಲ್ಲಿ ಹೆಚ್ಚು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಟಾಪ್ 5 ಕ್ರಿಕೆಟರ್ಸ್!
2025ರ ಐಪಿಎಲ್ ಟೂರ್ನಿಗೆ ಮುಂಬೈ ಇಂಡಿಯನ್ಸ್ ತಂಡ ಹೀಗಿದೆ:
ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯಾದವ್, ರೋಹಿತ್ ಶರ್ಮಾ, ತಿಲಕ್ ವರ್ಮಾ, ಜಸ್ಪ್ರಿತ್ ಬುಮ್ರಾ, ಬೆವನ್ ಜೇಕೊಬ್ಸ್, ರಯಾನ್ ರಿಕೆಲ್ಟನ್, ರಾಬಿನ್ ಮಿನ್ಜು, ಕೃಷ್ಣನ್ ಶ್ರೀಜಿತ್, ನಮನ್ ಧಿರ್, ರಾಜಾ ಅಂಗದ್ ಭಾವ, ವಿಘ್ನೇಸ್ ಪ್ರಥುರ್, ವಿಲ್ ಜ್ಯಾಕ್ಸ್, ಮಿಚೆಲ್ ಸ್ಯಾಂಟ್ನರ್, ಅರ್ಜುನ್ ತೆಂಡುಲ್ಕರ್, ಅಶ್ವಿನಿ ಕುಮಾರ್, ರೀಸ್ ಟಾಪ್ಲೆ, ಕರ್ಣ್ ಶರ್ಮಾ, ಟ್ರೆಂಟ್ ಬೌಲ್ಟ್, ದೀಪಕ್ ಚಹರ್, ವೆಂಕಟ್ ಸತ್ಯನಾರಾಯಣ ರಾಜು, ಮುಜೀಬ್ ಉರ್ ರೆಹಮಾನ್, ಕಾರ್ಬಿನ್ ಬಾಷ್.