
ನವದೆಹಲಿ(ಸೆ.07): ಮುಂದಿನ ತಿಂಗಳು ಆರಂಭವಾಗಲಿರುವ ಟಿ20 ವಿಶ್ವಕಪ್ಗೆ ಮಂಗಳವಾರ(ಸೆ.7) ಅಥವಾ ಬುಧವಾರ(ಸೆ.08) ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ತಂಡ ಆಯ್ಕೆಯಾಗಿದ್ದು, ಅಧಿಕೃತ ಪ್ರಕಟಣೆಯಷ್ಟೇ ಬಾಕಿ ಉಳಿದಿದೆ ಎಂದು ವರದಿಯಾಗಿದೆ
ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ನೇತೃತ್ವದಲ್ಲಿ ಮುಂಬೈನ ಬಿಸಿಸಿಐ ಮುಖ್ಯ ಕಚೇರಿಯಲ್ಲಿ ಆಯ್ಕೆ ಸಮಿತಿ ಸಭೆ ಸೇರಲಿದ್ದು, ಈ ವೇಳೆ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿರನ್ನು ಇನ್ನೆರಡು ದಿನದಲ್ಲಿ ಸಂಪರ್ಕಿಸುವ ನಿರೀಕ್ಷೆಯಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಮುಕ್ತಾಯದ ಬೆನ್ನಲ್ಲೇ ಟೀಂ ಇಂಡಿಯಾ ಪ್ರಕಟಿಸುವ ಸಾಧ್ಯತೆಯಿದೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ ಕೋಚ್ ರವಿಶಾಸ್ತ್ರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಒಂದು ದಿನ ತಡವಾಗಿ ಬಿಸಿಸಿಐ ಆಯ್ಕೆ ಸಮಿತಿ ಟೀಂ ಇಂಡಿಯಾದ ಅಂತಿಮ ಆಟಗಾರರ ಹೆಸರನ್ನು ಇಂದು ಅಥವಾ ನಾಳೆ ಪ್ರಕಟಿಸುವುದು ಬಹುತೇಕ ಖಚಿತ ಎನಿಸಿದೆ.
ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಪಾಕ್ ತಂಡ ಪ್ರಕಟ, ಬಾಬರ್ ಅಜಂ ನಾಯಕ
ಟಿ20 ವಿಶ್ವಕಪ್ನಲ್ಲಿ ಆರಂಭಿಕನಾಗಿ ಶಿಖರ್ ಧವನ್ ಮುಂದುವರೆಯುತ್ತಾರಾ ಅಥವಾ ಬೇರೆ ಕ್ರಿಕೆಟಿಗರಿಗೆ ಮಣೆಹಾಕಲಾಗುತ್ತಾ? ಹಾರ್ದಿಕ್ ಪಾಂಡ್ಯ ಸಂಪೂರ್ಣ ಫಿಟ್ ಆಗಿದ್ದಾರಾ? ಹಾಗೂ ವಾಷಿಂಗ್ಟನ್ ಸುಂದರ್ ಬದಲಿಗೆ ಟೀಂ ಇಂಡಿಯಾದಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎನ್ನುವ ಕುತೂಹಲಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ.
ಅಕ್ಟೋಬರ್ 17ರಿಂದ ಯುಎಇನಲ್ಲಿ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಪ್ರಕಟವಾಗಲಿದೆ. ತಂಡವನ್ನು ಪ್ರಕಟಿಸಲು ಸೆಪ್ಟೆಂಬರ್ 10 ಕಡೆಯ ದಿನವಾಗಿದೆ. ಭಾರತ ಅಕ್ಟೋಬರ್ 24ರಂದು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.