
ಅಹಮದಾಬಾದ್: 2025-26ನೇ ಸಾಲಿನ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಮಯಾಂಕ್ ಅಗರ್ವಾಲ್ ನೇತೃತ್ವದ ಕರ್ನಾಟಕ ತಂಡವು ಹ್ಯಾಟ್ರಿಕ್ ಗೆಲುವು ಸಾಧಿಸಿ ಬೀಗಿದೆ. ನೆರೆಯ ತಮಿಳುನಾಡು ಎದುರು 4 ವಿಕೆಟ್ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡವು ಹ್ಯಾಟ್ರಿಕ್ ಗೆಲುವು ಸಾಧಿಸಿ ಬೀಗಿದೆ.
ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಹಾಲಿ ಚಾಂಪಿಯನ್ ಕರ್ನಾಟಕ ತಂಡವು ಮೊದಲ ಪಂದ್ಯದಲ್ಲೇ ಜಾರ್ಖಂಡ್ ಎದುರು ದಾಖಲೆಯ ಮೊತ್ತವನ್ನು ಬೆನ್ನತ್ತಿ ರೋಚಕ ಗೆಲುವು ಸಾಧಿಸಿತ್ತು. ಇದಾದ ಬಳಿಕ ಎರಡನೇ ಪಂದ್ಯದಲ್ಲಿ ಕೇರಳ ಎದುರು 8 ವಿಕೆಟ್ಗಳ ಸುಲಭ ಗೆಲುವು ಸಾಧಿಸಿತ್ತು. ಇದೀಗ ತಮಿಳುನಾಡು ಎದುರು ರೋಚಕ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದೆ.
ತಮಿಳುನಾಡು ನೀಡಿದ್ದ 289 ರನ್ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಕರ್ನಾಟಕ ತಂಡವು ಆರಂಭದಲ್ಲೇ ದೇವದತ್ ಪಡಿಕ್ಕಲ್ ವಿಕೆಟ್ ಕಳೆದುಕೊಂಡಿತು. ಮೊದಲೆರಡು ಪಂದ್ಯಗಳಲ್ಲಿ ಶತಕ ಸಿಡಿಸಿದ್ದ ಪಡಿಕ್ಕಲ್, ತಮಿಳುನಾಡು ಎದುರು 12 ಎಸೆತಗಳಲ್ಲಿ 5 ಬೌಂಡರಿ ಸಹಿತ 22 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಇನ್ನು ಕರುಣ್ ನಾಯರ್ 17 ಹಾಗೂ ಸ್ಮರಣ್ ರವಿಚಂದ್ರನ್ 15 ಕೂಡಾ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ.
ಆರಂಭದಲ್ಲಿ ಕರ್ನಾಟಕ ತಂಡವು ಕೆಲವು ವಿಕೆಟ್ಗಳನ್ನು ಕಳೆದುಕೊಂಡಿತಾದರೂ, ನಾಯಕ ಮಯಾಂಕ್ ಅಗರ್ವಾಲ್ ಹಾಗೂ ಮಧ್ಯಮ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಕೃಷ್ಣನ್ ಶ್ರೀಜಿತ್ ಹಾಗೂ ಆಲ್ರೌಂಡರ್ ಶ್ರೇಯಸ್ ಗೋಪಾಲ್ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಭಾರತಕ್ಕೆ ರೋಚಕ ಗೆಲುವು ತಂದುಕೊಟ್ಟರು. ನಾಯಕ ಮಯಾಂಕ್ ಅಗರ್ವಾಲ್ 58 ರನ್ ಸಿಡಿಸಿದರೆ, ಶ್ರೀಜಿತ್ 78 ಎಸೆತಗಳಲ್ಲಿ 77 ರನ್ ಸಿಡಿಸಿದರು. ಇನ್ನು ಶ್ರೇಯಸ್ ಗೋಪಾಲ್ ಆಕರ್ಷಕ 55 ರನ್ ಸಿಡಿಸಿದರು. ಕೊನೆಯಲ್ಲಿ ಅಭಿನವ್ ಮನೋಹರ್ ಅಜೇಯ 20 ಹಾಗೂ ವಿದ್ಯಾಧರ್ ಪಾಟೀಲ್ ಅಜೇಯ 17 ರನ್ ಸಿಡಿಸುವ ಮೂಲಕ ಇನ್ನೂ 17 ಎಸೆತ ಬಾಕಿ ಇರುವಂತೆಯೇ ಕರ್ನಾಟಕ ತಂಡವನ್ನು ಗೆಲುವಿನ ದಡ ಸೇರಿಸಿದರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟ್ ಮಾಡಲಿಳಿದ ತಮಿಳುನಾಡು ತಂಡವು ನಾಯಕ ಎನ್ ಜಗದೀಶನ್(65) ಹಾಗೂ ಪ್ರದೋಷ್ ಪೌಲ್(57) ಬಾರಿಸಿದ ಆಕರ್ಷಕ ಅರ್ಧಶತಕಗಳ ನೆರವಿನಿಂದ 288 ರನ್ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತ್ತು.
ಉಡುಪಿ ಮೂಲದ ಪ್ರತಿಭಾನ್ವಿತ ವೇಗಿ ಅಭಿಲಾಷ್ ಶೆಟ್ಟಿ ಮಾರಕ ದಾಳಿಗೆ ತಮಿಳುನಾಡು ತಂಡವು ತತ್ತರಿಸಿ ಹೋಯಿತು. ಅಭಿಲಾಷ್ ಶೆಟ್ಟಿ 57 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ವಿದ್ಯಾಧರ್ ಪಾಟೀಲ್ ಹಾಗೂ ಶ್ರೀಶಾ ಆಚಾರ್ ತಲಾ ಎರಡು ಮತ್ತು ಶ್ರೇಯಸ್ ಗೋಪಾಲ್ ಒಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.