
ಸಿಡ್ನಿ(ನ.22): ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಅನುಪಸ್ಥಿತಿ ಭಾರತ ತಂಡದ ಬ್ಯಾಟಿಂಗ್ ಕ್ರಮಾಂಕದಲ್ಲಿ ದೊಡ್ಡ ರಂಧ್ರ ಸೃಷ್ಟಿಸಲಿದೆ ಎಂದು ಆಸ್ಟ್ರೇಲಿಯಾ ಮಾಜಿ ನಾಯಕ ಇಯಾನ್ ಚಾಪೆಲ್ ಅಭಿಪ್ರಾಯಪಟ್ಟಿದ್ದಾರೆ.
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮೊದಲಿಗೆ ಅಂದರೆ ನವೆಂಬರ್ 27ರಿಂದ 3 ಪಂದ್ಯಗಳ ಏಕದಿನ ಸರಣಿಯಾಡಲಿದೆ. ನಂತರ ಮೂರು ಪಂದ್ಯಗಳ ಟಿ20 ಸರಣಿಯಾಡಲಿದೆ. ಇದಾದ ಬಳಿಕ ಕೊನೆಯಲ್ಲಿ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಾಡಲಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಏಕದಿನ ಹಾಗೂ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದ್ದು, ಡಿಸೆಂಬರ್ 17ರಿಂದ ಆರಂಭವಾಗಲಿರುವ ಅಡಿಲೇಡ್ ಟೆಸ್ಟ್ ಪಂದ್ಯದ ಬಳಿಕ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿರಾಟ್ ಕೊಹ್ಲಿ ಪಿತೃತ್ವದ ರಜೆಯ ಮೇರೆಗೆ ತವರಿಗೆ ವಾಪಾಸಾಗಲಿದ್ದಾರೆ.
ವಿರಾಟ್ ಕೊಹ್ಲಿ ತವರಿಗೆ ಮರಳಿದ ಬಳಿಕ ಟೀಂ ಇಂಡಿಯಾ ದೊಡ್ಡ ಗೊಂದಲಕ್ಕೆ ಸಿಲುಕುವ ಸಾಧ್ಯತೆಯಿದೆ. ಇದು ಭಾರತ ಕ್ರಿಕೆಟ್ ತಂಡದ ಬ್ಯಾಟಿಂಗ್ ಕ್ರಮಾಂಕದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಇದೇ ವೇಳೆ ಪ್ರತಿಭಾನ್ವಿತ ಯುವ ಆಟಗಾರ ಈ ಅವಕಾಶವನ್ನು ಬಳಸಿಕೊಳ್ಳಲು ನೆರವಾಗುವ ಸಾಧ್ಯತೆಯು ಇದೆ ಎಂದು ಇಎಸ್ಪಿಎನ್ ಕ್ರಿಕ್ಇನ್ಫೋಗೆ ನೀಡಿದ ಸಂದರ್ಶನದಲ್ಲಿ ಚಾಪೆಲ್ ಈ ರೀತಿ ಅಭಿಪ್ರಾಯಪಟ್ಟಿದ್ದಾರೆ.
ಯಾವುದೇ ಕ್ರಮಾಂಕದಲ್ಲಿ ಬೇಕಿದ್ದರೂ ಬ್ಯಾಟಿಂಗ್ ಮಾಡಲು ಸಿದ್ದ: ರೋಹಿತ್ ಶರ್ಮಾ
13ನೇ ಆವೃತ್ತಿಯ ಐಪಿಎಲ್ ಟೂರ್ನಿ ಮುಗಿಸಿ ಕಳೆದ ವಾರವೇ ಟೀಂ ಇಂಡಿಯಾ ಆಸೀಸ್ಗೆ ಬಂದಿಳಿದಿದ್ದು, ಸಿಡ್ನಿಯಲ್ಲಿ ಕ್ವಾರಂಟೈನ್ನಲ್ಲಿರುವಾಗಲೇ ನೆಟ್ಸ್ ಪ್ರಾಕ್ಟೀಸ್ ಮಾಡುವ ಮೂಲಕ ಹೈವೋಲ್ಟೇಜ್ ಸರಣಿಗೆ ಸಜ್ಜಾಗುತ್ತಿದೆ.
2018-19ನೇ ಸಾಲಿನ ಆಸೀಸ್ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 2-1 ಅಂತರದಲ್ಲಿ ಅಸ್ಟ್ರೇಲಿಯಾ ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಕಾಂಗರೂ ನಾಡಿನಲ್ಲಿ ಟೆಸ್ಟ್ ಸರಣಿ ಜಯಿಸಿ ದಾಖಲೆ ಬರೆದಿತ್ತು. ಇದೀಗ ಟೀಂ ಇಂಡಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಳ್ಳಲು ಎದುರು ನೋಡುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.