
ಮೊಹಾಲಿ(ಏ.20): ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಇಲ್ಲಿನ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿವೆ. ಎರಡೂ ತಂಡಗಳು ಈ ಪಂದ್ಯದಲ್ಲಿ ಹಂಗಾಮಿ ನಾಯಕರೊಂದಿಗೆ ಕಣಕ್ಕಿಳಿದಿವೆ. ಆರ್ಸಿಬಿ ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸುತ್ತಿದ್ದರೆ, ಪಂಜಾಬ್ ಕಿಂಗ್ಸ್ ತಂಡವನ್ನು ಸ್ಯಾಮ್ ಕರ್ರನ್ ಮುನ್ನಡೆಸುತ್ತಿದ್ದಾರೆ.
ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಸತತ ಎರಡನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇನ್ನೊಂದೆಡೆ ಫಾಫ್ ಡು ಪ್ಲೆಸಿಸ್ ಕಣಕ್ಕಿಳಿದರೂ ಸಹಾ ವಿರಾಟ್ ಕೊಹ್ಲಿ ನಾಯಕರಾಗಿ ಆರ್ಸಿಬಿ ತಂಡವನ್ನು ಮುನ್ನಡೆಸುತ್ತಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಯಿತು. ವಿರಾಟ್ ಕೊಹ್ಲಿ 2021ರ ಐಪಿಎಲ್ ಬಳಿಕ ಆರ್ಸಿಬಿ ನಾಯಕತ್ವದಿಂದ ಕೆಳಗಿಳಿದಿದ್ದರು. ಇದಾದ ಬಳಿಕ ಬರೋಬ್ಬರಿ 556 ದಿನಗಳ ಬಳಿಕ ವಿರಾಟ್ ಕೊಹ್ಲಿ, ಆರ್ಸಿಬಿ ತಂಡದ ನಾಯಕರಾಗಿ ಮತ್ತೊಮ್ಮೆ ಕಾಣಿಸಿಕೊಂಡಿದ್ದಾರೆ.
ಇನ್ನು ಫಾಫ್ ಡು ಪ್ಲೆಸಿಸ್ ಬ್ಯಾಟಿಂಗ್ ಮಾಡಲು ಇಳಿದರೂ ವಿರಾಟ್ ಕೊಹ್ಲಿ ನಾಯಕರಾಗಿ ಕಾರ್ಯನಿರ್ವಹಿಸುತ್ತಿರುವುದೇಕೆ ಎನ್ನುವುದನ್ನು ವಿರಾಟ್ ಟಾಸ್ ವೇಳೆ ವಿವರಿಸಿದ್ದಾರೆ. ಫಾಫ್ ಡು ಪ್ಲೆಸಿಸ್ ಪಕ್ಕೆಲುಬಿನ ನೋವಿನ ಸಮಸ್ಯೆಯನ್ನು ಎದುರಿಸುತ್ತಿದ್ದು, ಫೀಲ್ಡಿಂಗ್ ಮಾಡುವಷ್ಟು ಫಿಟ್ ಆಗಿಲ್ಲ. ಹೀಗಾಗಿ ಅವರು ಇಂಪ್ಯಾಕ್ಟ್ ಆಟಗಾರನಾಗಿ ಬ್ಯಾಟಿಂಗ್ ಮಾಡುತ್ತಾರೆ ಎಂದು ವಿರಾಟ್ ಕೊಹ್ಲಿ ವಿವರಿಸಿದ್ದಾರೆ.
IPL ಇಬ್ಬರು ಸಾರ್ವಕಾಲಿಕ ಶ್ರೇಷ್ಠ ಆಟಗಾರರನ್ನು ಹೆಸರಿಸಿದ ವಿರಾಟ್ ಕೊಹ್ಲಿ..! ಧೋನಿ, ರೋಹಿತ್ ಅಲ್ಲವೇ ಅಲ್ಲ
" ಫಾಫ್ ಇಂದು ಫೀಲ್ಡಿಂಗ್ ಮಾಡುವಷ್ಟು ಫಿಟ್ ಆಗಿಲ್ಲ. ಹೀಗಾಗಿ ಅವರು ಇಂಪ್ಯಾಕ್ಟ್ ಆಟಗಾರರಾಗಿ ಕಣಕ್ಕಿಳಿಯಲಿದ್ದಾರೆ. ನಾವು ಕೂಡಾ ಟಾಸ್ ಗೆದ್ದರೆ ಬ್ಯಾಟಿಂಗ್ ಮಾಡಬೇಕು ಎಂದುಕೊಂಡಿದ್ದೆವು. ಅದರಂತೆ ನಾವೇನು ಅಂದುಕೊಂಡಿದ್ದೆವೋ ಅದೇ ಆಗಿದೆ. ಇನ್ನು ತಂಡದಲ್ಲಿ ಇದನ್ನು ಹೊರತುಪಡಿಸಿ ಮತ್ತೆ ಯಾವುದೇ ಬದಲಾವಣೆ ಮಾಡಿಲ್ಲ" ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ತಂಡಗಳು ಹೀಗಿವೆ:
ಆರ್ಸಿಬಿ: ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್ವೆಲ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ಶಾಬಾಜ್ ಅಹಮ್ಮದ್, ವನಿಂದು ಹಸರಂಗ, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.
ಪಂಜಾಬ್: ಅಥರ್ವ್ ಟೈಡೆ, ಮ್ಯಾಥ್ಯೂ ಶಾರ್ಟ್, ಹಪ್ರೀರ್ತ್ ಬ್ರಾರ್, ಲಿಯಾಮ್ ಲಿವಿಂಗ್ಸ್ಟೋನ್, ಸ್ಯಾಮ್ ಕರ್ರನ್(ನಾಯಕ), ಜಿತೇಶ್ ಶರ್ಮಾ, ಶಾರೂಖ್ ಖಾನ್, ರಾಹುಲ್ ಚಹಲ್, ಅಶ್ರ್ದೀಪ್ ಸಿಂಗ್, ನೇಥನ್ ಎಲ್ಲೀಸ್.
ಇನ್ನು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರಂಭಿಕ ಬ್ಯಾಟರ್ಗಳಾದ ಫಾಫ್ ಡು ಪ್ಲೆಸಿಸ್ (84) ಹಾಗೂ ವಿರಾಟ್ ಕೊಹ್ಲಿ(59) ಬಾರಿಸಿದ ಸ್ಪೋಟಕ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 174 ರನ್ ಗಳಿಸಿದ್ದು, ಆತಿಥೇಯ ಪಂಜಾಬ್ ಕಿಂಗ್ಸ್ ತಂಡಕ್ಕೆ ಸವಾಲಿನ ಗುರಿ ನೀಡಿದೆ.
ಇನ್ನು ಸವಾಲಿನ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 10 ಓವರ್ ಅಂತ್ಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 77 ರನ್ ಗಳಿಸಿದ್ದು, ಆರ್ಸಿಬಿ ತಂಡವು ಆರಂಭಿಕ ಮುನ್ನಡೆ ಗಳಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.