ನವದೆಹಲಿ: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಆತಿಥೇಯ ಟೀಂ ಇಂಡಿಯಾಗೆ ವಿಂಡೀಸ್ ತಿರುಗೇಟು ನೀಡುವತ್ತ ದಿಟ್ಟ ಹೆಜ್ಜೆಯಿಟ್ಟಿದೆ. ಮೊದಲ ಇನ್ನಿಂಗ್ಸ್ನಲ್ಲಿ ಬರೋಬ್ಬರಿ 270 ರನ್ ಹಿನ್ನಡೆ ಅನುಭವಿಸಿದರ ಪರಿಣಾಮ ಫಾಲೋ ಆನ್ಗೆ ಒಳಗಾದ ವೆಸ್ಟ್ ಇಂಡೀಸ್ ತಂಡವು ಎರಡನೇ ಇನ್ನಿಂಗ್ಸ್ನಲ್ಲಿ ಭಾರತದ ಎದುರು ದಿಟ್ಟ ಪ್ರತಿರೋಧ ತೋರಿದೆ. ಮೂರನೇ ದಿನದಾಟದಂತ್ಯಕ್ಕೆ ವೆಸ್ಟ್ ಇಂಡೀಸ್ ತಂಡವು ತಂಡವು ನಾಲ್ಕು ವಿಕೆಟ್ ಕಳೆದುಕೊಂಡು 173 ರನ್ ಬಾರಿಸಿದ್ದು, ಇನ್ನೂ 97 ರನ್ಗಳ ಹಿನ್ನಡೆಯಲ್ಲಿದೆ.
ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಎರಡನೇ ದಿನದಾಟದಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 140 ರನ್ ಗಳಿಸಿತ್ತು. ಇನ್ನು ಮೂರನೇ ದಿನದಾಟ ಆರಂಭಿಸಿದ ವಿಂಡೀಸ್ ತಂಡಕ್ಕೆ ಮಣಿಕಟ್ಟು ಸ್ಪಿನ್ನರ್ ಕುಲ್ದೀಪ್ ಯಾದವ್ ಆರಂಭದಲ್ಲೇ ಶಾಕ್ ನೀಡಿದರು. ವೆಸ್ಟ್ ಇಂಡೀಸ್ ತಂಡವು ತನ್ನ ಖಾತೆಗೆ 19 ರನ್ ಸೇರಿಸುವಷ್ಟರಲ್ಲಿ ಮಧ್ಯಮ ಕ್ರಮಾಂಕದ 4 ಪ್ರಮುಖ ವಿಕೆಟ್ ಕಳೆದುಕೊಳ್ಳುವ ಮೂಲಕ ನಾಟಕೀಯ ಕುಸಿತ ಕಂಡಿತು.
ಕೇವಲ 175 ರನ್ಗಳಿಗೆ 8 ವಿಕೆಟ್ ಕಳೆದುಕೊಂಡಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಬಾಲಂಗೋಚಿಗಳು ಆಸರೆಯಾದರು. ಕೊನೆಯಲ್ಲಿ ಖಾರೆ ಪಿಯರೆ(23), ಜೇಡನ್ ಸೀಲ್ಸ್(13) ಹಾಗೂ ಆಂಡರ್ಸನ್ ಫಿಲಿಫ್ ಅಜೇಯ 24 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 240ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.
ಭಾರತ ಪರ ಮಿಂಚಿನ ದಾಳಿ ನಡೆಸಿದ ಮಣಿಕಟ್ಟು ಸ್ಪಿನ್ನರ್ ಕುಲ್ದೀಪ್ ಯಾದವ್ 82 ರನ್ ನೀಡಿ 5 ವಿಕೆಟ್ ಪಡೆದರು. ಇನ್ನು ರವೀಂದ್ರ ಜಡೇಜಾ 3 ಹಾಗೂ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದೊಂದು ವಿಕೆಟ್ ಪಡೆದರು.
ಇನ್ನು ಫಾಲೋ-ಆನ್ಗೆ ಒಳಗಾದ ವೆಸ್ಟ್ ಇಂಡೀಸ್ ತಂಡವು ಮತ್ತೊಮ್ಮೆ ಇನ್ನಿಂಗ್ಸ್ ಸೋಲಿನ ಭೀತಿಗೆ ಸಿಲುಕಿತ್ತು. 35 ರನ್ ಗಳಿಸುವಷ್ಟರಲ್ಲಿ ವೆಸ್ಟ್ ಇಂಡೀಸ್ ತಂಡವು ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ಮೂರನೇ ವಿಕೆಟ್ಗೆ ಜತೆಯಾದ ಜಾನ್ ಕ್ಯಾಂಪ್ಬೆಲ್ ಹಾಗೂ ಶಾಯ್ ಹೋಪ್ ಶತಕದ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಮೂರನೇ ವಿಕೆಟ್ಗೆ ಈ ಜೋಡಿ ಮುರಿಯದ 138 ರನ್ಗಳ ಜತೆಯಾಟವಾಡುವ ತಂಡಕ್ಕೆ ಆಸರೆಯಾದರು. ಶಾಯ್ ಹೋಪ್ 66 ಹಾಗೂ ಜಾನ್ ಕ್ಯಾಂಪ್ಬೆಲ್ 87 ರನ್ ಸಿಡಿಸಿ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.