
ನಾರ್ಥ್ಹ್ಯಾಂಪ್ಟನ್: 2024ನೇ ಸಾಲಿನ ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೀಗ್ ಟೂರ್ನಿಯ ಸೆಮಿಫೈನಲ್ನಲ್ಲಿ ಸಿಕ್ಸರ್ ಸಿಂಗ್ ಖ್ಯಾತಿಯ ಯುವರಾಜ್ ಸಿಂಗ್ ಮತ್ತೊಮ್ಮೆ ಘರ್ಜಿಸುವ ಮೂಲಕ ಆಸ್ಟ್ರೇಲಿಯನ್ನರಿಗೆ ಸಿಂಹಸ್ವಪ್ನವಾಗಿ ಕಾಡಿದ್ದಾರೆ. ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್ ಸ್ಪೋಟಕ ಅರ್ಧಶತಕ ಹಾಗೂ ಬೌಲರ್ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಇಂಡಿಯನ್ಸ್ ತಂಡವು 86 ಅಂತರದಲ್ಲಿ ಆಸ್ಟ್ರೇಲಿಯಾ ಚಾಂಪಿಯನ್ಸ್ ತಂಡವನ್ನು ಬಗ್ಗುಬಡಿದು ಫೈನಲ್ಗೆ ಲಗ್ಗೆಯಿಟ್ಟಿದೆ.
ಇಲ್ಲಿನ ಕೌಂಟಿ ಗ್ರೌಂಡ್ನಲ್ಲಿ ಜುಲೈ 12ರಂದು ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 254 ರನ್ ಕಲೆಹಾಕಿತ್ತು. ಇನ್ನು ಕಠಿಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಚಾಂಪಿಯನ್ಸ್ ತಂಡವು, 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 168 ರನ್ ಗಳಿಸಲಷ್ಟೇ ಶಕ್ತವಾಯಿತು. ಇದೀಗ ಇಂದು ಪ್ರಶಸ್ತಿಗಾಗಿ ಬರ್ಮಿಂಗ್ಹ್ಯಾಮ್ನಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡವು ಬದ್ದ ಎದುರಾಳಿ ಪಾಕಿಸ್ತಾನ ಚಾಂಪಿಯನ್ಸ್ ಎದುರು ಕಾದಾಡಲಿದೆ.
ಮಗನ ಮದುವೆ ಬೆನ್ನಲ್ಲೇ ಭಾರತೀಯರೆಲ್ಲರಿಗೂ ಬಂಪರ್ ಗಿಫ್ಟ್ ಕೊಟ್ಟ ಮುಕೇಶ್ ಅಂಬಾನಿ..!
ಇಂಡಿಯಾ ಚಾಂಪಿಯನ್ಸ್ ತಂಡದ ನಾಯಕ ಯುವರಾಜ್ ಸಿಂಗ್, ಮೈಚಳಿ ಬಿಟ್ಟು ಬ್ಯಾಟ್ ಬೀಸುವ ಮೂಲಕ ಕಾಂಗರೂ ಪಡೆಯನ್ನು ಸಿಂಹಸ್ವಪ್ನದಂತೆ ಕಾಡಿದರು. ಆಸ್ಟ್ರೇಲಿಯಾ ಎದುರು ಯುವರಾಜ್ ಸಿಂಗ್ ಕೇವಲ 28 ಎಸೆತಗಳನ್ನು ಎದುರಿಸಿ 5 ಮುಗಿಲೆತ್ತರದ ಸಿಕ್ಸರ್ ಹಾಗೂ 4 ಬೌಂಡರಿ ಸಹಿತ ಸ್ಪೋಟಕ 59 ರನ್ ಸಿಡಿಸಿದರು.
ಹೀಗಿತ್ತು ನೋಡಿ ಯುವಿ ಬ್ಯಾಟಿಂಗ್:
ಈ ಹಿಂದೆಯೂ ಯುವರಾಜ್ ಸಿಂಗ್, ಆಸ್ಟ್ರೇಲಿಯಾ ಎದುರು ಅಮೋಘ ಪ್ರದರ್ಶನ ತೋರುವ ಮೂಲಕ ಏಕಾಂಗಿಯಾಗಿ ಭಾರತಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಅದರಲ್ಲೂ 2011ರ ಏಕದಿನ ವಿಶ್ವಕಪ್ ಸೆಮಿಫೈನಲ್ನಲ್ಲಿ ಭಾರತ ತಂಡದ ಪರ ಯುವರಾಜ್ ಅದ್ಭುತ ಅರ್ಧಶತಕ ಸಿಡಿಸುವ ಮೂಲಕ ಆಸೀಸ್ ನೀಡಿದ್ದ 262 ರನ್ಗಳ ಸವಾಲಿನ ಗುರಿ ಬೆನ್ನತ್ತುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅದೇ ಪಂದ್ಯದಲ್ಲಿ 2 ವಿಕೆಟ್ ಕಬಳಿಸಿದ್ದ ಯುವಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.