
ಬೆಂಗಳೂರು: 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಈಗಾಗಲೇ ಎಲ್ಲಾ ತಂಡಗಳು ಭರ್ಜರಿ ಸಿದ್ದತೆ ಆರಂಭಿವೆ. ಹೀಗಿರುವಾಗಲೇ ಕಳೆದ ಸೀಸನ್ ರನ್ನರ್-ಅಪ್ ಭಾರತ ತಂಡವು ಇದೀಗ ಶತಾಯಗತಾಯ ಏಕದಿನ ವಿಶ್ವಕಪ್ ಗೆಲ್ಲಲು ರಣತಂತ್ರ ಹೆಣೆಯುತ್ತಿದೆ. ಇದರ ನಡುವೆ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆಯಬಹುದು ಎನ್ನುವ ಚರ್ಚೆ ಇದೀಗ ಕ್ರಿಕೆಟ್ ವಲಯದಲ್ಲಿ ಜೋರಾಗಿ ನಡೆಯುತ್ತಿದೆ. ಇದರ ಬೆನ್ನಲ್ಲೇ 2011ರ ಏಕದಿನ ವಿಶ್ವಕಪ್ ವಿಜೇತ ಆಟಗಾರ ಹಾಗೂ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್, ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಬಲಿಷ್ಠ ಭಾರತ ತಂಡವನ್ನು ಆಯ್ಕೆ ಮಾಡಿದ್ದಾರೆ. ಆದರೆ ಓರ್ವ ಚಾಂಪಿಯನ್ ಆಟಗಾರನನ್ನು ಕೈಬಿಟ್ಟಿದ್ದು ಚರ್ಚೆಗೆ ಗ್ರಾಸವಾಗಿದೆ.
ಯುವರಾಜ್ ಸಿಂಗ್ ಆಯ್ಕೆ ಮಾಡಿದ ತಂಡದಲ್ಲಿ ನಿರೀಕ್ಷೆಯಂತೆಯೇ ಶುಭ್ಮನ್ ಗಿಲ್ ತಂಡದ ನಾಯಕರಾಗಿದ್ದು, ಗಿಲ್ ಜತೆಗೆ ಅನುಭವಿ ಬ್ಯಾಟರ್ ರೋಹಿತ್ ಶರ್ಮಾ ಸ್ಥಾನ ಪಡೆದಿದ್ದಾರೆ. ಇತ್ತೀಚೆಗಷ್ಟೇ ಇಂಗ್ಲೆಂಡ್ ಎದುರಿನ ಲಾರ್ಡ್ಸ್ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಸಿಡಿಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಅನಾವರಣ ಮಾಡಿದ್ದರು. ಇವರಿಬ್ಬರ ಜತೆಗೆ ಅಗ್ರಕ್ರಮಾಂಕದಲ್ಲಿ ಬ್ಯಾಕ್ಅಪ್ ಓಪನ್ನರ್ ರೂಪದಲ್ಲಿ ಯಶಸ್ವಿ ಜೈಸ್ವಾಲ್ಗೆ ಮಣೆ ಹಾಕಿದ್ದಾರೆ.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಕೊಹ್ಲಿ ಜತೆಗೆ ಶ್ರೇಯಸ್ ಅಯ್ಯರ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ಗಳಾದ ಕೆ ಎಲ್ ರಾಹುಲ್ ಹಾಗೂ ರಿಷಭ್ ಪಂತ್ಗೂ ಯುವಿ ತಮ್ಮ ಕನಸಿನ ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಿದ್ದಾರೆ. ಆಲ್ರೌಂಡರ್ಗಳ ರೂಪದಲ್ಲಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ರವೀಂದ್ರ ಜಡೇಜಾಗೆ ಯುವಿ ಸ್ಥಾನ ಕಲ್ಪಿಸಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಭಾರತದ ವೇಗದ ದಾಳಿಯನ್ನು ಮುನ್ನಡೆಸಲಿದ್ದು, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್ ಹಾಗೂ ಹರ್ಷಿತ್ ರಾಣಾ ಸಾಥ್ ನೀಡಲಿದ್ದಾರೆ. ಇನ್ನು ಕುಲ್ದೀಪ್ ಯಾದವ್ ಏಕೈಕ ತಜ್ಞ ಸ್ಪಿನ್ನರ್ ಆಗಿ ಭಾರತ ವಿಶ್ವಕಪ್ ಟೂರ್ನಿಗೆ ಯುವಿ ಕನಸಿನ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು ಯುವರಾಜ್ ಸಿಂಗ್ ಆಯ್ಕೆ ಮಾಡಿದ ವಿಶ್ವಕಪ್ ಟೂರ್ನಿಗೆ ಭಾರತ ತಂಡದ ಪೈಕಿ ಅನುಭವಿ ಹಾಗೂ ಮ್ಯಾಚ್ ವಿನ್ನಿಂಗ್ ಪ್ಲೇಯರ್ ಮೊಹಮ್ಮದ್ ಶಮಿಯನ್ನು ಕೈಬಿಟ್ಟಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಶಮಿ ಐಸಿಸಿ ಟೂರ್ನಿಯಲ್ಲಿ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದಾರೆ. 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲಿ ಶಮಿ ಪ್ರಮುಖ ಪಾತ್ರ ವಹಿಸಿದ್ದರು. ಇದಷ್ಟೇ ಅಲ್ಲದೇ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶಮಿ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದರು. ಹೀಗಿದ್ದೂ ಶಮಿಯನ್ನು ಯುವಿ ಕೈಬಿಟ್ಟಿದ್ದು ಚರ್ಚೆಗೆ ಗ್ರಾಸವಾಗಿದೆ.
ಶುಭ್ಮನ್ ಗಿಲ್(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ರಿಷಭ್ ಪಂತ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.