
ಹೊಸಕೋಟೆ (ಜೂ.10): ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಪಕ್ಕದಲ್ಲಿರುವ ಡಾ.ಬಿ. ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೂಲಿಬೆಲೆ ಹೋಬಳಿಯ ತಿಮ್ಮಪ್ಪನಹಳ್ಳಿ ಗ್ರಾಮದ ನಿವಾಸಿ ಸಾಯಿಭವನ್ (13) ಮೃತ ದುರ್ದೈವಿ.
ಮೃತ ಸಾಯಿಭವನ್ ನಗರದ ಬಾಲಕರ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡಿಕೊಂಡು ವಸತಿ ನಿಲಯದಲ್ಲಿ ವಾಸವಾಗಿದ್ದ. ಶನಿವಾರ ಸಂಜೆ ಬಟ್ಟೆ ಒಗೆದು ಮಹಡಿಯ ಮೇಲೆ ಒಣಗಿ ಹಾಕಿದ್ದ. ಭಾನುವಾರ ಬೆಳಗಿನ ಜಾವ 6 ಗಂಟೆಯಲ್ಲೇ ತನ್ನ ತಮ್ಮನಾದ ಸಾಯಿಕುಶಾಲ್ನನ್ನು ಕರೆದುಕೊಂಡು ಮಹಡಿಯ ಮೇಲೆ ಹೋಗಿ ಒಣಗಲು ಹಾಕಿದ್ದ ಬಟ್ಟೆಯನ್ನು ತೆಗೆದುಕೊಂಡು ನಂತರ ಪಕ್ಕದಲ್ಲೇ ಇದ್ದ ಮಾವಿನ ಮರದಲ್ಲಿ ಮಾವಿನ ಕಾಯಿ ಕೀಳಲು ಮಹಡಿಯ ಮೇಲೆ ಇದ್ದ ಕಬ್ಬಿಣದ ಸಲಾಕೆಯನ್ನು ತೆಗೆದುಕೊಂಡು ಹೋದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ.
ಕಳೆದ ಎರಡು ವರ್ಷಗಳಿ೦ದ ವಿದ್ಯಾರ್ಥಿ ಸಾಯಿಭವನ್ ಇದೇ ವಸತಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಳೆದ ಮೂರು ದಿನಗಳ ಹಿಂದೆ ಪೋಷಕರು ಆಗಮಿಸಿ ವಸತಿ ನಿಲಯಕ್ಕೆ ಬಿಟ್ಟು ಹೋಗಿದ್ದರು. ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರಾಕೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಅನುರಾಧ, ಜಂಟಿ ನಿರ್ದೇಶಕ ದೇವ ರಾಜು, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೆಶಕ ಟಿಎಲ್ಎಸ್ ಪ್ರೇಮ, ಭೇಟಿ ನೀಡಿ ಪರಿಶೀಲಿಸಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.
ಜಾತಿ, ಧರ್ಮ ಮೀರಿದ ಸಮಾಜ ನಿರ್ಮಾಣವಾಗಬೇಕು: ಸಚಿವ ಮಹದೇವಪ್ಪ
ಆಯುಕ್ತ ರಾಕೇಶ್ ಕುಮಾರ್ಮಾತನಾಡಿ, ಕಟ್ಟಡದ ಪಕ್ಕದಲ್ಲಿ ಹಾದುಹೋಗಿರುವ ವಿದ್ಯುತ್ ಲೈನ್ ಬದಲಾವಣೆಗೆ ಬೆಸ್ಕಾಂಗೆ ಮೂರು ಬಾರಿ ನಮ್ಮ ಇಲಾಖೆ ಸಿಬ್ಬಂದಿ ಪತ್ರ ಸಲ್ಲಿಸಿದ್ದರೂ ಬೆಸ್ಕಾಂ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಆದ್ದರಿಂದ ಮೃತರ ಕುಟುಂಬಕ್ಕೆ ನಮ್ಮ ಇಲಾಖೆ ಯಿಂದ 5 ಲಕ್ಷ ರು. ಕೊಡಿಸುವ ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ