
ಬೆಂಗಳೂರು(ಜು.30): ವಿಧಾನಸೌಧದ ಆವರಣದಲ್ಲಿ ಅನುಮತಿ ಇಲ್ಲದೆ ಡ್ರೋನ್ ಕ್ಯಾಮರಾ ಹಾರಾಟ ನಡೆಸುತಿದ್ದ ಆರೋಪದಡಿ ಇಬ್ಬರು ಯುವಕರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದಾರೆ.
ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಉದ್ಯೋಗಿಗಳಾದ ಅರುಣ್ ಮತ್ತು ವಿನೋದ್ ಬಾಬು ಬಂಧಿತರು. ಜು.28ರಂದು ಬೆಳಗ್ಗೆ ವಿಧಾನಸೌಧದ ಪೂರ್ವ ಪ್ರವೇಶದ್ವಾರದ ಬಳಿಯ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮೇಲೆ ಡ್ರೋನ್ ಕ್ಯಾಮೆರಾ ಹಾರಿಸುತ್ತಿದ್ದರು. ಇದನ್ನು ನೋಡಿದ್ದ ಗಸ್ತು ಪೊಲೀಸ್ ಸಿಬ್ಬಂದಿ ಇಬ್ಬರನ್ನೂ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಬಳಿಕ ಅತಿಕ್ರಮ ಪ್ರವೇಶ ಹಾಗೂ ನಿರ್ಲಕ್ಷ್ಯದ ಆರೋಪದಡಿ ಪ್ರಕರಣ ದಾಖಲಿಸಿದ್ದರು. ಬಳಿಕ ವಿಚಾರಣೆ ನಡೆಸಿ ಠಾಣಾ ಜಾಮೀನಿನ ಮೇಲೆ ಆರೋಪಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಹತ್ತುವ ವೇಳೆ ಮಹಿಳೆಯ ಚಿನ್ನಾಭರಣ ಕಳ್ಳತನ; ಇಬ್ಬರು ಸರಗಳ್ಳಿಯರ ಬಂಧನ
ಕಂಪನಿ ಸ್ಥಾಪಿಸಿ 15 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನೆನಪಿಗಾಗಿ ವಿಶೇಷ ವಿಡಿಯೊ ಸಿದ್ಧಪಡಿಸುವ ಸಲುವಾಗಿ ವಿಧಾನಸೌಧದ ದೃಶ್ಯ ಸೆರೆ ಹಿಡಿಯಲು ಬಂದಿದ್ದಾಗಿ ವಿಚಾರಣೆ ವೇಳೆ ಆರೋಪಿಗಳು ಹೇಳಿದ್ದಾರೆ. ವಿಧಾನಸೌಧದ ಆವರಣ ‘ನೋ ಫ್ಲೈಯಿಂಗ್ ವಲಯ’ ಎಂಬುದು ತಮಗೆ ಗೊತ್ತಿರಲಿಲ್ಲ. ಹೀಗಾಗಿ ಡ್ರೋನ್ ಕ್ಯಾಮರಾ ಬಳಸಿ ವಿಧಾನಸೌಧ ಚಿತ್ರೀಕರಿಸಲು ಪ್ರಯತ್ನಿಸಿದ್ದಾಗಿ ಹೇಳಿದ್ದಾರೆ. ಈ ಪ್ರದೇಶದಲ್ಲಿ ಅನುಮತಿ ಇಲ್ಲದೆ ಯಾವುದೇ ಡ್ರೋನ್ ಕ್ಯಾಮರಾ ಬಳಸಿ ಚಿತ್ರೀಕರಣ ನಿಷೇಧಿಸಲಾಗಿದೆ. ಇನ್ನು ಮುಂದೆ ಇಂತಹ ತಪ್ಪು ಮಾಡದಂತೆ ಎಚ್ಚರಿಕೆ ನೀಡಿ ವಿಧಾನಸೌಧ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ