
ದಾವಣಗೆರೆ (ಫೆ.14): ಹಸಿ ಕಸ, ಒಣ ಕಸ ವಿಂಗಡಿಸಿ ಕೊಡುವಂತೆ ಹೇಳಿದ್ದಕ್ಕೆ ಪುಂಡರು ಪೌರಕಾರ್ಮಿಕನ ಮೇಲೆ ದಾಳಿ ಮಾಡಿ ಮೈಮೇಲಿನ ಬಟ್ಟೆ ಹರಿದು ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆಯ ಮೆಹಬೂಬ್ ನಗರದಲ್ಲಿ ನಡೆದಿದೆ.
ಇತ್ತೀಚೆಗೆ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ದಾಳಿ ಮಾಡಿದ ಘಟನೆ ಮಾಸುವ ಮುನ್ನವೇ ಇದೀಗ ನಾಗರಿಕರ ಸೇವೆ ಮಾಡುವ ಪೌರಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆಯ ಮೆಹಬೂಬ್ ನಗರದಲ್ಲಿ ನಿನ್ನೆ ಬೆಳಿಗ್ಗೆ ಎಂದಿನಂತೆ ಪೌರಕಾರ್ಮಿಕರು ಕಸ ಸಂಗ್ರಹಣೆಗೆ ತೆರಳಿದ್ದರು. ಈ ವೇಳೆ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ನೀಡುವಂತೆ ಪೌರಕಾರ್ಮಿಕರು ಮನವಿ ಮಾಡಿದರು. ಆದರೆ, ಇದೇ ವಿಷಯಕ್ಕೆ ಕಿರಿಕ್ ತೆಗೆದ ಸ್ಥಳೀಯ ನಿವಾಸಿಗಳಾದ ಅಜ್ಜು ಮತ್ತು ನೂರ್ ಎಂಬುವವರು ಪೌರಕಾರ್ಮಿಕರ ಮೇಲೆ ವಿನಾಕಾರಣ ಜಗಳಕ್ಕೆ ಇಳಿದಿದ್ದಾರೆ.
ಜಗಳ ವಿಕೋಪಕ್ಕೆ ತಿರುಗಿದಾಗ ಆರೋಪಿಗಳು ಕಸದ ವಾಹನ ಚಾಲಕ ಕರಿಬಸಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟಕ್ಕೇ ಸುಮ್ಮನಾಗದ ಪುಂಡರು, ಕರಿಬಸಪ್ಪ ಅವರ ಟೀ ಶರ್ಟ್ ಹರಿದು ಹಾಕಿ ಎಳೆದಾಡಿದ್ದಾರೆ. ಜೊತೆಗೆ ಸ್ಥಳದಲ್ಲಿದ್ದ ಪೌರಕಾರ್ಮಿಕ ಮಹಿಳೆ ರಾಜೇಶ್ವರಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾನಸಿಕ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ತಮ್ಮ ಸಹೋದ್ಯೋಗಿಗಳ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಪೌರಕಾರ್ಮಿಕರು ರೊಚ್ಚಿಗೆದ್ದರು. ಕೂಡಲೇ ಕಸ ಸಂಗ್ರಹಣಾ ವಾಹನಗಳನ್ನು ಆಜಾದ್ ನಗರ ಪೊಲೀಸ್ ಠಾಣೆಯ ಮುಂದೆಯೇ ತಂದು ನಿಲ್ಲಿಸಿ ಬೃಹತ್ ಪ್ರತಿಭಟನೆ ನಡೆಸಿದರು. ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪಟ್ಟು ಹಿಡಿದರು. ಪರಿಸ್ಥಿತಿಯ ಗಂಭೀರತೆ ಅರಿತ ಪೊಲೀಸರು ಸೂಕ್ತ ಕ್ರಮದ ಭರವಸೆ ನೀಡಿದ್ದರು.
ದೂರಿನ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಆಜಾದ್ ನಗರ ಪೊಲೀಸರು, ಹಲ್ಲೆ ನಡೆಸಿದ ಆರೋಪಿಗಳಾದ ಅಜ್ಜು ಮತ್ತು ನೂರ್ ಅವರನ್ನು ಬಂಧಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಹಲ್ಲೆ ನಡೆಸಿದ ಪ್ರಕರಣದಡಿ ದೂರು ದಾಖಲಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ