
ಬೆಂಗಳೂರು (ಸೆ.06): ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ಅಳಿಯನೊಬ್ಬ ತನ್ನ ಅತ್ತೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೇಣುಗೋಪಾಲ್ ಎಂಬ ವ್ಯಕ್ತಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ತನ್ನ ಅತ್ತೆ ರುಕ್ಮಿಣಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಘಟನೆಯ ಹಿನ್ನೆಲೆ
ಆನೇಕಲ್ನ ಶಂಕರ್ ನಾಗ್ ರಸ್ತೆಯ ನಿವಾಸಿಗಳಾದ ರುಕ್ಮಿಣಿ ಅವರ ಮಗಳು ನಂದಿನಿಯನ್ನು ವೇಣುಗೋಪಾಲ್ 7 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಕಳೆದ ಒಂದು ತಿಂಗಳಿನಿಂದ ಗಂಡ-ಹೆಂಡತಿ ನಡುವೆ ನಿರಂತರ ಜಗಳ ನಡೆಯುತ್ತಿತ್ತು. ಇದರಿಂದ ಬೇಸತ್ತ ಪತ್ನಿ ನಂದಿನಿ ತನ್ನ ಪತಿಯನ್ನು ಬಿಟ್ಟು ಹೋಗಿದ್ದರು. ಈ ಜಗಳಕ್ಕೆ ಮತ್ತು ಪತ್ನಿ ತನ್ನನ್ನು ಬಿಟ್ಟು ಹೋಗಲು ಅತ್ತೆ ರುಕ್ಮಿಣಿ ಕಾರಣ ಎಂದು ವೇಣುಗೋಪಾಲ್ ಭಾವಿಸಿದ್ದಾನೆ. ಅತ್ತೆ ಇಲ್ಲಸಲ್ಲದ ವಿಷಯಗಳನ್ನು ಹೇಳಿ ತಮ್ಮ ಸಂಸಾರದಲ್ಲಿ ಬಿರುಕು ಮೂಡಿಸಿದ್ದಾರೆ ಎಂದು ಆತ ಆಕ್ರೋಶಗೊಂಡಿದ್ದನು.
ದೇವಸ್ಥಾನದ ರಸ್ತೆಯಲ್ಲಿ ನಡೆದ ದಾಳಿ
ಶುಕ್ರವಾರ ಸಂಜೆ ರುಕ್ಮಿಣಿ ಅವರು ತಮ್ಮ ಸ್ನೇಹಿತರೊಂದಿಗೆ ಆನೇಕಲ್ನ ತಿಮ್ಮರಾಯಸ್ವಾಮಿ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುತ್ತಿದ್ದರು. ಇದೇ ಸಮಯದಲ್ಲಿ ಅವರನ್ನು ಹಿಂಬಾಲಿಸಿಕೊಂಡು ಬಂದ ಅಳಿಯ ವೇಣುಗೋಪಾಲ್, ರಸ್ತೆಯಲ್ಲಿಯೇ ಅವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ರುಕ್ಮಿಣಿ ಅವರನ್ನು ಕಂಡ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ಸೇರಿಸಲು ಮುಂದಾದರು.
ಸಾರ್ವಜನಿಕರಿಂದ ಆರೋಪಿ ಸೆರೆ
ಅತ್ತೆಯ ಮೇಲೆ ಹಲ್ಲೆ ನಡೆಸಿದ ನಂತರ ಆರೋಪಿ ವೇಣುಗೋಪಾಲ್ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸದೆ ರಸ್ತೆಯಲ್ಲಿಯೇ ಕುಳಿತಿದ್ದನು. ಇದನ್ನು ಕಂಡ ಸ್ಥಳೀಯರು ಕೂಡಲೇ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ರುಕ್ಮಿಣಿ ಅವರನ್ನು ತಕ್ಷಣವೇ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ