
ಬೆಂಗಳೂರು[ಜ.28]: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳದಲ್ಲಿ ಯುವಕನೊಬ್ಬನನ್ನು ಆತನ ಸ್ನೇಹಿತರೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಮಡಿವಾಳ ಸಮೀಪದ ವೆಂಕಟಾಪುರ ಗೇಟ್ನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಈಜಿಪುರದ ನಿವಾಸಿ ಆದಿಶೇಷ (20) ಕೊಲೆಯಾದ ದುರ್ದೈವಿ. ಈ ಪ್ರಕರಣ ಸಂಬಂಧ ಮೃತನ ಸ್ನೇಹಿತರಾದ ಮುರಳಿ, ಕೃಷ್ಣ ಹಾಗೂ ಮಂಜುನಾಥ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೆಂಕಟಾಪುರದ ಗೇಟ್ ಸಮೀಪದ ಬಾರ್ನಲ್ಲಿ ಮದ್ಯ ಸೇವಿಸುವಾಗ ಈ ನಾಲ್ವರ ಗೆಳೆಯರ ಮಧ್ಯೆ ಜಗಳವಾಗಿದೆ. ಆಗ ಕೋಪಗೊಂಡ ಆರೋಪಿಗಳು, ಆದಿಶೇಷನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ತಕ್ಷಣವೇ ಸ್ಥಳೀಯರು, ಗಾಯಾಳುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದಾನೆ.
ಈಜಿಪುರದ ಆದಿಶೇಷ ಕೆಲಸವಿಲ್ಲದೆ ಅಲೆಯುತ್ತಿದ್ದು, ಆತನ ವಿರುದ್ಧ ಕೊಲೆ ಯತ್ನ, ಹಲ್ಲೆ ಸೇರಿದಂತೆ ಮೂರು ಪ್ರಕರಣ ದಾಖಲಾಗಿದ್ದವು. ಕೆಲ ದಿನಗಳ ಹಿಂದೆ ಮುರಳಿಯ ಸ್ನೇಹಿತನಿಗೆ ಆದಿಶೇಷ ಹೊಡೆದಿದ್ದ. ಇದೇ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಹಗೆತನ ಮೂಡಿತ್ತು. ಭಾನುವಾರ ರಾತ್ರಿ ವೆಂಕಟಾಪುರ ಗೇಟ್ ಸಮೀಪದ ಬಾರ್ನಲ್ಲಿ ಮದ್ಯ ಸೇವಿಸುವಾಗ ಹಳೆ ವಿಚಾರಗಳು ಪ್ರಸ್ತಾಪವಾಗಿವೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ